‘ಅಧಿಕಾರಿಗಳ ಉದಾಸೀನ ಮನೋಭಾವ ಸಹಿಸುವುದಿಲ್ಲ’; ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

0

ನೂತನ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಿ
ಮುಂದಿನ ದಿನಗಳಲ್ಲಿ ಕೆಡಿಪಿ ಸಭೆ ನಡೆಸಿ ಸಮಸ್ಯೆಗೆ ಪರಿಹಾರ
ಪ್ರಾಕೃತಿಕ ವಿಕೋಪವಾಗದಂತೆ ಕಟ್ಟೆಚ್ಚರ ಅಗತ್ಯ
ನಿಷ್ಪಕ್ಷಪಾತ ಕ್ರಮಕ್ಕೆ ಪೊಲೀಸರಿಗೆ ಸೂಚನೆ

ಮಂಗಳೂರು:ರಾಜ್ಯದ ಹೊಸ ಸರಕಾರ ಜಾರಿಗೊಳಿಸುತ್ತಿರುವ ನೂತನ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಪ್ರಾಮಾಣಿಕ ಕೆಲಸವನ್ನು ಮಾಡುವ ಮೂಲಕ ಕರ್ತವ್ಯದಲ್ಲಿನ ಕಾರ್ಯದಕ್ಷತೆಯನ್ನು ತೋರಬೇಕು. ಯಾವುದೇ ಕಾರಣಕ್ಕೂ ಉದಾಸೀನ ಮನೋಭಾವ ಸಹಿಸುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಜೂ.11ರಂದು ಮಂಗಳೂರು ಆಗಮಿಸಿದ ಅವರು ದ.ಕ.ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಅನೌಪಚಾರಿಕ ಸಭೆ ನಡೆಸಿದರು.

ರಾಜ್ಯ ಸರಕಾರವು ಜನಸಾಮಾನ್ಯರ ಕಲ್ಯಾಣಕ್ಕೆ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅದನ್ನು ಜನರಿಗೆ ಮುಟ್ಟಿಸುವ ಪ್ರಾಮಾಣಿಕ ಕೆಲಸವಾಗಬೇಕು. ಇದೊಂದು ಅನೌಪಚಾರಿಕ ಸಭೆಯಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಕೆಡಿಪಿ ಸಭೆ ನಡೆಸಿ ಅಲ್ಲಿನ ಸಮಸ್ಯೆಗಳ ಬಗ್ಗೆ ಆಳವಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಪ್ರಾಕೃತಿಕ ವಿಕೋಪವಾಗದಂತೆ ಜಿಲ್ಲಾಡಳಿತದಿಂದ ಕಟ್ಟೆಚ್ಚರ ಅಗತ್ಯ: ಮುಂಗಾರು ಮಳೆಯಿಂದ ಯಾವುದೇ ರೀತಿಯ ಪ್ರಾಕೃತಿಕ ವಿಕೋಪಗಳು ಆಗದಂತೆ ಜಿಲ್ಲಾಡಳಿತ ಕಟ್ಟೆಚರ ವಹಿಸಬೇಕು. ವಿಕೋಪಗಳಿಂದಾಗುವ ಭೂಕುಸಿತ, ಸಾರ್ವಜನಿಕ ಆಸ್ತಿಪಾಸ್ತಿಯ ಹಾನಿ, ವಿದ್ಯುತ್ ಪೂರೈಕೆಯ ಅಡಚಣೆ ಮತ್ತಿತರ ಎಲ್ಲಾ ಸಮಸ್ಯೆಗಳನ್ನು ತಕ್ಷಣ ನಿಭಾಯಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಸಂಚಾರ, ಸರಾಗ ನೀರು ಹರಿಯುವಿಕೆಯನ್ನು ಅಧಿಕಾರಿಗಳು ಖಾತ್ರಿ ಪಡಿಸಬೇಕು,ಮೆಸ್ಕಾಂನಿಂದ ಯಾವುದೇ ಹಾನಿ ಸಂಭವಿಸಿದಂತೆ ಎಚ್ಚರ ವಹಿಸಬೇಕು ಎಂದು ಸಂಬಂಽಸಿದ ಅಽಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ನಿಷ್ಪಕ್ಷಪಾತ ಕ್ರಮ ಪೊಲೀಸರಿಗೆ ಸೂಚನೆ: ದ.ಕ.ಜಿಲ್ಲೆಯು ಅತ್ಯಂತ ಸೂಕ್ಷ್ಮ ಜಿಲ್ಲೆ. ಧರ್ಮ, ಜಾತಿಯ ಹೆಸರಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅನೈತಿಕ ಪೊಲೀಸ್‌ಗಿರಿ, ಬ್ಲ್ಯಾಕ್‌ಮೇಲ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕಲು ನಿಷ್ಪಕ್ಷಪಾತವಾಗಿ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದರು.

ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ.ಉಪಸ್ಥಿತರಿದ್ದರು.

ಆಂಟಿ ಕಮ್ಯುನಲ್ ವಿಂಗ್ ರೂಪುರೇಷೆ ಕೆಲಸ

ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್‌ದೀಪ್ ಕುಮಾರ್ ಜೈನ್ ಮಾತನಾಡಿ, ನಗರದಲ್ಲಿ ಆಂಟಿ ಕಮ್ಯುನಲ್ ವಿಂಗ್ ರಚನೆಗೆ ಸಂಬಂಧಿಸಿದಂತೆ ಚರ್ಚಿಸಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ರೂಪುರೇಷೆಗಳನ್ನು ಸಿದ್ಧಪಡಿಸುವ ಕೆಲಸವಾಗುತ್ತಿದೆ. ಸಂಜೆ 5ರ ನಂತರ ನಗರದ ಪ್ರಮುಖ ಸ್ಥಳಗಳು, ರಸ್ತೆಗಳಲ್ಲಿ ಪೊಲೀಸರ ನಿಯೋಜನೆ ಮಾಡುವ ಬಗ್ಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು.

LEAVE A REPLY

Please enter your comment!
Please enter your name here