ಸೆ.19-21: ಕುಂಬ್ರ ಶ್ರೀ ರಾಮ ಭಜನಾ ಮಂದಿರದಲ್ಲಿ 42 ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ

0

ಪುತ್ತೂರು: ಒಳಮೊಗ್ರು ಗ್ರಾಮದ ಕುಂಬ್ರ ಶ್ರೀ ರಾಮ ಭಜನಾ ಮಂದಿರದಲ್ಲಿ 42ನೇ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.19 ರಿಂದ ಆರಂಭಗೊಂಡು ಸೆ.21 ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಲಿದೆ. ಸೆ.19 ರಂದು ಬೆಳಿಗ್ಗೆ ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ ನಡೆಯಲಿದೆ ಬಳಿಕ ಶ್ರೀ ಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಧಾರ್ಮಿಕ ರಸಪ್ರಶ್ನೆ ನಡೆಯಲಿದೆ. ರಾತ್ರಿ ಭಜನೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.


ಸೆ.20 ರಂದು ಬೆಳಿಗ್ಗೆ ಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಬಳಿಕ ಸ್ಥಳೀಯ ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಮಹಿಳೆಯರಿಗೆ ರಂಗೋಲಿ, ಹೂ ಕಟ್ಟುವ ಸ್ಪರ್ಧೆ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಭಕ್ತಿಗೀತೆ ಸ್ಪರ್ಧೆ, ತುಳು ಭಾಷೆಯಲ್ಲಿ ಅಜ್ಜಿ ಕಥೆ ಹೇಳುವ ಸ್ಪರ್ಧೆ ನಡೆಯಲಿದೆ. ರಾತ್ರಿ ಭಜನೆ, ಸಾರ್ವಜನಿಕ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ಸೆ.21 ರಂದು ಬೆಳಿಗ್ಗೆ ಗಣಪತಿ ಹೋಮ, ಚಂದ್ರಯಾನ 3 ಎಂಬ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಭಜನಾ ಕಾರ್ಯಕ್ರಮ, ಮಹಾಪೂಜೆ ಬಳಿಕ ಶ್ರೀ ಗಣೇಶ ವಿಗ್ರಹದ ಶೋಭಾಯಾತ್ರೆ ಆರಂಭಗೊಳ್ಳಲಿದೆ.


ಧಾರ್ಮಿಕ ಸಭಾ ಕಾರ್ಯಕ್ರಮ
ಸೆ.19 ರಂದು ಬೆಳಿಗ್ಗೆ ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು ‘ಮಾತೃದೇವೋಭವ’ ಎಂಬ ವಿಷಯದಲ್ಲಿ ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯಗುರು ಆಶಾ ಬೆಳ್ಳಾರೆಯವರಿಂದ ಉಪನ್ಯಾಸ ನೀಡಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸೆ.20 ರಂದು ಬೆಳಿಗ್ಗೆ ಕೆದಂಬಾಡಿ ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಮಾಜಿ ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಿಕ್ಷಣ ಪದ್ದತಿ- ಧರ್ಮಜಾಗೃತಿ ವಿಷಯದಲ್ಲಿ ಸವಣೂರು ಪ.ಪೂ.ಕಾಲೇಜಿನ ಕಾರ್ಯಾಧ್ಯಕ್ಷ ಗಿರಿಶಂಕರ್ ಸುಲಾಯ ಧಾರ್ಮಿಕ ಉಪನ್ಯಾಸ ನೀಡಲಿದ್ದು ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸೆ.21 ರಂದು ಬೆಳಿಗ್ಗೆ ಅರಿಯಡ್ಕ ಗ್ರಾಪಂ ಅಧ್ಯಕ್ಷ ಸಂತೋಷ್ ಮಣಿಯಾಣಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು , ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಕಾರ್ಯಕ್ರಮ ಉದ್ಘಾಟಿಸಲಿದ್ದು ಜನಪದ ನಂಬಿಕೆ ಮತ್ತು ಹಿಂದೂ ಧರ್ಮ ವಿಷಯದಲ್ಲಿ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನ ಪ್ರೋ. ಡಾ.ರವೀಶ್ ಪಡುಮಲೆಯವರು ಉಪನ್ಯಾಸ ನೀಡಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಗಣೇಶನ ಕೃಪೆಗೆ ಪಾತ್ರರಾಗುವಂತೆ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಪದ್ಮನಾಭ ರೈ ಅರೆಪ್ಪಾಡಿ, ಪ್ರಧಾನ ಕಾರ್ಯದರ್ಶಿ ಅಂಕಿತ್ ರೈ ಕುಯ್ಯಾರು, ಉಪಾಧ್ಯಕ್ಷ ಮೋನಪ್ಪ ಪೂಜಾರಿ ಬಡಕ್ಕೋಡಿ, ಕೋಶಾಧಿಕಾರಿ ರಾಜ್‌ಪ್ರಕಾಶ್ ರೈ ಕುಂಬ್ರ, ಜತೆ ಕಾರ್ಯದರ್ಶಿ ಆಶಾಲತಾ ಎಂ.ರೈ, ಗೌರವ ಲೆಕ್ಕಪರಿಶೋಧಕ ಚಂದ್ರಕಾಂತ ಶಾಂತಿವನ, ಶ್ರೀ ಗಣೇಶೋತ್ಸವ ಸಮಿತಿ ಸಂಚಾಲಕ ರತನ್ ರೈ ಕುಂಬ್ರ ಹಾಗೂ ಶ್ರೀ ರಾಮ ಭಜನಾ ಮಂದಿರದ ಕಾರ್ಯಕಾರಿ ಸಮಿತಿ ಮತ್ತು ಸರ್ವ ಸದಸ್ಯರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸಾಂಸ್ಕೃತಿಕ ಕಾರ್ಯಕ್ರಮಗಳು
ಸೆ.19 ರಂದು ಬೆಳಿಗ್ಗೆ ವಾಗ್ದೇವಿ ಸಂಗೀತ ಶಾಲೆಯ ಶಿಷ್ಯೆ ವೃಂದದವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ, ರಾತ್ರಿ ಯಶಸ್ವಿ ಕಲಾವಿದರು ಮಂಜೇಶ್ವರ ಅಭಿನಯಿಸುವ ‘ಅಬ್ಬರ’ ತುಳು ನಾಟಕ ನಡೆಯಲಿದೆ. ಸೆ.20 ರಂದು ಬೆಳಿಗ್ಗೆ ಕವಿತಾ ದಿನಕರ ಶಿಷ್ಯವೃಂದದವರಿಂದ ಭಕ್ತಿರಸಮಂಜರಿ ಕಾರ್ಯಕ್ರಮ, ರಾತ್ರಿ ಅಕ್ಷಯ ಕಾಲೇಜು ಸಂಪ್ಯ ಇವರಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ.21 ರಂದು ಅಪರಾಹ್ನ ಬೃಂದಾವನ ನಾಟ್ಯಾಲಯ ಕುಂಬ್ರ ಇವರಿಂದ ಕಾರ್ಯಕ್ರಮ ವೈವಿಧ್ಯ, ಸಂಜೆ ಕುಂಬ್ರ ಕಟ್ಟೆ ಬಳಿ ಸ್ನೇಹ ಸಾಗರ ರಿಕ್ಷಾ ಚಾಲಕ ಮಾಲಕರ ಸಂಘದ ಪ್ರಾಯೋಜಕತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here