ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ-ಸ್ಪೀಕರ್ ಯು.ಟಿ.ಖಾದರ್

0

ಕಾಣಿಯೂರು: ಒತ್ತಡದ ಕೆಲಸದ ಮಧ್ಯೆಯೂ ಗ್ರಾಮ ವಾಸ್ತವ್ಯ ಮಾಡಿ ಆ ಊರಿನ ಸಮಸ್ಯೆಗಳನ್ನು ಅರಿತು ಪರಿಹಾರಕ್ಕಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಕರ್ತರು ಮಾಡಿದ ಗ್ರಾಮ ವಾಸ್ತವ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.


ಅವರು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಆಡಳಿತ, ಹರಿಹರ, ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೊಲ್ಲಮೊಗ್ರದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಇಲ್ಲಿ ಜನರು ಮಂಡಿಸಿದ ಎಲ್ಲಾ ಅಹವಾಲುಗಳನ್ನು ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದ ಅಽಕಾರಿಗಳು ಪರಿಹರಿಸುತ್ತಾರೆ. ಜಿಲ್ಲೆ ಹಾಗು ರಾಜ್ಯ ಮಟ್ಟದಲ್ಲಿ ಇದರ ಪರಿಹಾರಕ್ಕೆ ಪೂರ್ಣ ಸಹಕಾರ ನೀಡುತ್ತೇನೆ. ಆದ್ಯತೆಯ ಮೇರೆಗೆ ಇಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಸೂಚಿಸುತ್ತೇನೆ. ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಇದ್ದಲ್ಲಿ ಕೇಂದ್ರಕ್ಕೂ ಪತ್ರ ಬರೆಯುತ್ತೇನೆ ಎಂದು ಅವರು ಭರವಸೆ ನೀಡಿದರು.


ಮುಂದಿನ ತಲೆಮಾರಿನ ಮತ್ತು ವಿದ್ಯಾರ್ಥಿಗಳ ಬೆಳವಣಿಗೆಯ ದೃಷ್ಟಿಯಿಂದ ನೆಟ್ ವರ್ಕ್ ಮತ್ತು ಬ್ರಾಡ್ ಬ್ಯಾಂಡ್ ಸಂಪರ್ಕ ಅತೀ ಅಗತ್ಯ. ಈ ಭಾಗದಲ್ಲಿ ಅದರ ಯಶಸ್ವಿ ಅನುಷ್ಠಾನಕ್ಕೆ ಸಂಂಧಪಟ್ಟವರಿಗೆ ಸೂಚಿಸುತ್ತೇನೆ. ನಿಮ್ಮ ಸಮಸ್ಯೆ ಪರಿಹಾರಕ್ಕೆ ಸ್ಪೀಕರ್ ಕಚೇರಿ ಬಾಗಿಲು ಸದಾ ತೆರೆದಿರುತ್ತದೆ ಎಂದ ಅವರು ಮುಂದಿನ ದಿನಗಳಲ್ಲಿ ಕೊಲ್ಲಮೊಗ್ರ ಹರಿಹರ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಇಲ್ಲಿನ ವಿದ್ಯಾರ್ಥಿಗಳಿಗೆ ವಿಧಾನಸಭಾ ಕಲಾಪಗಳ ವೀಕ್ಷಣೆಗೆ ಅವಕಾಶ ಮಾಡಿ ಕೊಡುತ್ತೇನೆ, ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದಲ್ಲಿ ಅವರನ್ನು ಕರೆ ತರಬೇಕು ಎಂದು ಅವರು ಹೇಳಿದರು. ಗ್ರಾಮ ವಾಸ್ತವ್ಯದ ನೆನಪಿಗಾಗಿ ಸ್ಪೀಕರ್ ಯು.ಟಿ.ಖಾದರ್ ತೆಂಗಿನ ಗಿಡವನ್ನು ನೆಟ್ಟರು.


ಸಮಾರೋಪ ಭಾಷಣ ಮಾಡಿದ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ’ಗ್ರಾಮಗಳ ಅಭಿವೃದ್ಧಿ ಆದರೆ ಮಾತ್ರ ಭಾರತ ಬೆಳಗಲು ಸಾಧ್ಯ. ಪತ್ರಕರ್ತರ ಗ್ರಾಮ ವಾಸ್ತವ್ಯ ಕೊಲ್ಲಮೊಗ್ರ, ಹರಿಹರ , ಕಲ್ಮಕಾರು, ಬಾಳುಗೋಡು ಗ್ರಾಮಗಳ ಅಭಿವೃದ್ಧಿಯ ಬಾಗಿಲು ತೆರೆಯಲು ಸ್ಪೂರ್ತಿ ನೀಡಲಿ. ತನ್ನ ಕಡೆಯಿಂದಲೂ ಈ ಗ್ರಾಮಗಳ ಅಭಿವೃದ್ಧಿಗೆ ನೆರವು ನೀಡುತ್ತೇನೆ ಎಂದು ಹೇಳಿದರು.


ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆರವರು ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಟಿಎಪಿಸಿಎಂಎಸ್ ಅಧ್ಯಕ್ಚ ನಿತ್ಯಾನಂದ ಮುಂಡೋಡಿ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಪಿ.ಸಿ.ಜಯರಾಮ ಮುಖ್ಯ ಅತಿಥಿಗಳಾಗಿದ್ದರು. ಕೊಲ್ಲಮೊಗ್ರ ಗ್ರಾ.ಪಂ. ಅಧ್ಯಕ್ಷೆ ಜಯಶ್ರೀ ಚಾಂತಾಳ, ಉಪಾಧ್ಯಕ್ಷ ಅಶ್ವತ್ ಯಾಲದಾಳ,ಹರಿಹರ ಗ್ರಾ.ಪಂ. ಅಧ್ಯಕ್ಷ ವಿಜಯ ಅಣ, ಉಪಾಧ್ಯಕ್ಷ ಜಯಂತ ಬಾಳುಗೋಡು, ಮಹಾರಾಷ್ಟ್ರ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಽಕಾರಿ ಪುಷ್ಪರಾಜ್ ಬಿ.ಎನ್ ವೇದಿಕೆಯಲ್ಲಿ ಉಪಸ್ಥಿದ್ದರು.

ಡಾ.ಸೋಮಶೇಖರ ಕಟ್ಟೆಮನೆ ಅವಳಿ ಗ್ರಾಮಗಳ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತರಾದ ಬಾಲಕೃಷ್ಣ ಭೀಮಗುಳಿ ಸ್ವಾಗತಿಸಿ, ಲೋಕೇಶ್ ಬಿ.ಎನ್.ವಂದಿಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here