ವಿಧಾನ ಪರಿಷತ್ ಉಪ ಚುನಾವಣೆ-2024:ನಾಲ್ವರು ಅಭ್ಯರ್ಥಿಗಳು ಅಂತಿಮ ಕಣದಲ್ಲಿ- ಚುನಾವಣಾ ವೀಕ್ಷಕರಿಂದ ಸಿದ್ಧತೆಗಳ ಪರಿಶೀಲನೆ

0

ಪುತ್ತೂರು:ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನೂತನ ಸದಸ್ಯರೋರ್ವರ ಆಯ್ಕೆಗಾಗಿ ಅ.21ರಂದು ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿ ನಾಲ್ಕು ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.


ಬಿಜೆಪಿಯಿಂದ ಕಿಶೋರ್ ಕುಮಾರ್ ಬೊಟ್ಯಾಡಿ, ಕಾಂಗ್ರೆಸ್‌ನಿಂದ ಎಸ್.ರಾಜು ಪೂಜಾರಿ,ಎಸ್‌ಡಿಪಿಐನಿಂದ ಅನ್ವರ್ ಸಾದತ್ ಬಜತ್ತೂರು ಹಾಗೂ ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ್ ಅವರು ಅಂತಿಮ ಕಣದಲ್ಲಿದ್ದಾರೆ.ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಎಸ್‌ಡಿಪಿಐನ ಮುಹಮ್ಮದ್ ರಿಯಾಝ್ ಅವರು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.ನಾಮಪತ್ರ ಹಿಂಪಡೆಯಲು ಅ.7 ಕೊನೆಯ ದಿನವಾಗಿತ್ತು.


ಚುನಾವಣಾ ವೀಕ್ಷಕರಿಂದ ಪರಿಶೀಲನೆ:
ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಽಸಿ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ಪಂಕಜ್ ಕುಮಾರ್ ಪಾಂಡೆ ಅವರು ಅ.7ರಂದು ಆಗಮಿಸಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದರು.


ಚುನಾವಣಾಧಿಕಾರಿಯೂ ಆಗಿರುವ ದ.ಕ.ಜಿಲ್ಲಾಽಕಾರಿ ಕಚೇರಿಯಲ್ಲಿ ಸಭೆ ನಡೆಸಿದ ವೀಕ್ಷಕ ಪಂಕಜ್ ಕುಮಾರ್ ಪಾಂಡೆ ಅವರು ಮತಗಟ್ಟೆಗಳ ಸಿದ್ಧತೆ, ಚುನಾವಣಾ ಸಿಬ್ಬಂದಿಗಳ ನೇಮಕ, ಮತ ಪತ್ರಗಳ ಮುದ್ರಣ, ಮತದಾರರ ಪಟ್ಟಿ ಹಾಗೂ ಇತರ ಚುನಾವಣೆ ಸಿದ್ಧತೆಗಳ ಮಾಹಿತಿ ಪಡೆದರು.ಮತಗಟ್ಟೆ ಸಿಬ್ಬಂದಿಗಳಿಗೆ ತರಬೇತಿ ಹಾಗೂ ಮತ ಎಣಿಕೆ ಕೇಂದ್ರದಲ್ಲಿ ಕೈಗೊಳ್ಳಬೇಕಾದ ವ್ಯವಸ್ಥೆಗಳ ಬಗ್ಗೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಚುನಾವಣಾಧಿಕಾರಿಯಾಗಿರುವ ಜಿಲ್ಲಾಽಕಾರಿ ಮುಲ್ಲೈ ಮುಹಿಲನ್ ಎಂ.ಪಿ ಅವರು ಚುನಾವಣಾ ವೀಕ್ಷಕರಿಗೆ ಸಿದ್ಧತೆಗಳ ಮಾಹಿತಿಯನ್ನು ನೀಡಿದರು.


392 ಮತಗಟ್ಟೆಗಳು, 6032 ಮತದಾರರು:
ಅ.21ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆ ತನಕ ಮತದಾನ ನಡೆಯಲಿದೆ.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6032 ಮತದಾರರಿದ್ದಾರೆ. ಈ ಪೈಕಿ 3127 ಮಹಿಳಾ ಮತದಾರರು ಹಾಗೂ 2905 ಪುರುಷ ಮತದಾರರು ಇದ್ದಾರೆ.ಮತ ಎಣಿಕೆ ಮಂಗಳೂರು ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ಚುನಾವಣಾಧಿಕಾರಿ ಮುಲ್ಲೈ ಮುಹಿಲನ್ ವಿವರ ನೀಡಿದರು.


ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ., ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕ್ಷಕ ಯತೀಶ್ ಎನ್, ಉಡುಪಿ ಜಿಲ್ಲಾ ಪೊಲೀಸ್ ಅಧಿಕ್ಷಕ ಅರುಣ್, ದ.ಕ.ಅಪರ ಜಿಲ್ಲಾಧಿಕಾರಿ ಡಾ.ಜಿ ಸಂತೋಷ್ ಕುಮಾರ್, ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here