ಪುತ್ತೂರು: ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಗ್ರೂಪ್ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಮಾಡಿದ ಪುತ್ತೂರಿನ ಯುವಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆ ನಡೆಸಿದ ಸಿಇಎನ್ ಅಪರಾಧ ಪೊಲೀಸರು ಆರೋಪಿಯ ಹೇಳಿಕೆ ಪಡೆದು ಕೊಂಡಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆಯಾದ ಸಂದರ್ಭದಲ್ಲಿ ಪುತ್ತಿಲ ಪರಿವಾರ ಎಂಬ ವಾಟ್ಸಪ್ ಗ್ರೂಪಿನಲ್ಲಿ ದ್ವೇಷ ಸಂದೇಶವನ್ನು ಹಂಚಲಾಗಿತ್ತು. ಈ ಸಂದೇಶದಲ್ಲಿ ಧರ್ಮಾಧರಿತವಾಗಿ ಪರಿಚಯಿಸಿ ಹಿಂದೂ ಸಮುದಾಯದ ವಿರೋಧಿ ಕೃತ್ಯವೆಂದು ಚಿತ್ರೀಕರಿಸಲಾಗಿತ್ತು. ಕೊಣಾಜೆ ಪೊಲೀಸ್ ಠಾಣೆಯ ಸೋಶಿಯಲ್ ಮೀಡಿಯಾವನ್ನು ಮಾನಿಟರಿಂಗ್ ಮಾಡುತ್ತಿದ್ದ ಸಿಬ್ಬಂದಿಗಳು ಇದರಿಂದ ಸಾರ್ವಜನಿಕ ಶಾಂತಿಗೆ ಧಕ್ಕೆ ಆಗುವ ಸಾಧ್ಯತೆ ಇದೆ ಎಂದು ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಮೊಬೈಲ್ ಸಂಖ್ಯೆಯನ್ನು ಪರಿಶೀಲನೆ ನಡೆಸಿ ಪುತ್ತೂರಿನ ಮನೀಶ್ ಎಸ್ ಎಂಬವರ ವಿರುದ್ದ ಪ್ರಕರಣ ದಾಖಲಿಸಿದ್ದರು. ಬಳಿಕ ಪ್ರಕರಣವನ್ನು ತನಿಖೆಗಾಗಿ ಮಂಗಳೂರು ನಗರ ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ನಗರ ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿದ್ದು, ಮನೀಶ್ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಮನೀಶ್ ಹೇಳಿಕೆ ಆಧರಿಸಿ ಅವರಿಗೆ ಕಳಹಿಸಿದ ವ್ಯಕ್ತಿಯ ವಿಚಾರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.