ಕಲ್ಲಡ್ಕ: ಅನುಗ್ರಹ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಮತ್ತು ಪೋಷಕರಿಗೆ ದಿಕ್ಸೂಚಿ ಮತ್ತು ಪಿಯುಸಿ ವಿದ್ಯಾರ್ಥಿನಿಯರಿಗೆ ಅಭಿನಂದನಾ ಕಾರ್ಯಕ್ರಮ ಅನುಗ್ರಹ ಮಹಿಳಾ ಕಾಲೇಜು ಕಲ್ಲಡ್ಕದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಿಗೆ ಹಾಗೂ ಪೋಷಕರಿಗೆ ದಿಕ್ಸೂಚಿ ಕಾರ್ಯಕ್ರಮ ಮತ್ತು ದ್ವಿತೀಯ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿನಿಯರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಸಂಸ್ಥೆಯ ಪ್ರಾಂಶುಪಾಲೆ ಡಾ.ಹೇಮಲತ ಬಿ.ಡಿ ಕಾಲೇಜಿನ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದ ಬಗ್ಗೆ ಪರಿಚಯವನ್ನು ಹಾಗೂ ಕಾಲೇಜಿನ ನೀತಿ ನಿಯಮಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡುವ ಮೂಲಕ, ಅನುಗ್ರಹ ಮಹಿಳಾ ಕಾಲೇಜು ವಿದ್ಯಾರ್ಥಿನಿಯರ ಸರ್ವತೋಮುಖವಾದ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಿಸಿ ಕೊಡುತ್ತದೆ ಎಂದು ತಿಳಿಸಿದರು. ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ತಾರಾಕ್ಷಿಯವರ ಮೇಲ್ನೋಟದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಯರನ್ನು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಬಹುಮಾನ ಸ್ವೀಕರಿಸಿದ ವಿದ್ಯಾರ್ಥಿನಿಯರು ಕಾಲೇಜಿನ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಅನುಗ್ರಹ ಮಹಿಳಾ ಕಾಲೇಜಿನ ಸಂಚಾಲಕ ಅಮಾನುಲ್ಲಾ ಖಾನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಅನುಗ್ರಹ ಕಾಲೇಜು ಬೆಳೆದು ಬಂದ ಬಗ್ಗೆ ಮತ್ತು ಕಾಲೇಜಿನ ಬೆಳವಣಿಗೆಗೆ ಶ್ರಮಿಸಿದವರನ್ನು ನೆನಪಿಸುತ್ತ ಶಿಕ್ಷಣವು ಪದವಿ ಪೂರ್ವ ಹಾಗೂ ಪದವಿ ಹಂತಗಳಿಗೆ ಸೀಮಿತವಾಗದೆ ಶೈಕ್ಷಣಿಕ ಪ್ರಗತಿಯ ಜೊತೆಗೆ ಉನ್ನತ ಮಟ್ಟದ ಸಾಧನೆಯನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ತಿಳಿಸಿ, ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿನಿಯರಿಗೆ ತಮ್ಮ ಕಡೆಯಿಂದ ಪ್ರೋತ್ಸಾಹ ಧನವನ್ನು ಘೋಷಿಸಿದರು.
ವೇದಿಕೆಯಲ್ಲಿ ಅನುಗ್ರಹ ಸಲಹಾ ಸಮಿತಿಯ ಕಾರ್ಯದರ್ಶಿ ತಾರಾಕ್ಷಿ ಪದವಿ ಪೂರ್ವ ಮತ್ತು ಪದವಿಯ ಸಂಯೋಜಕಿ ಮಮಿತಾ ಎಸ್ ರೈ ಹಾಗೂ ಆಬಿದಾ, ಸಲೀಮಾ, ಶಫೀಕ ಉಪಸ್ಥಿತರಿದ್ದರು.
ಪ್ರಥಮ ಬಿಕಾಂ ವಿದ್ಯಾರ್ಥಿನಿಯಾದ ಖದೀಜತ್ ಹಿಷ್ಮಾ ಕಿರಾತ್ ಪಠಿಸಿ, ಇತಿಹಾಸ ವಿಭಾಗದ ಉಪನ್ಯಾಸಕಿ ಕು.ತಶ್ರೀಫಾ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಚೈತ್ರ ವಂದಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ನವ್ಯ ಕಾರ್ಯಕ್ರಮವನ್ನು ನಿರೂಪಿಸಿದರು.