ಪುತ್ತೂರು: ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ವಿವೇಕಾನಂದ ಪದವಿಪೂರ್ವ ವಿದ್ಯಾಲಯ ಇದರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭವು ವಿವೇಕಾನಂದ ವಿದ್ಯಾಸಂಸ್ಥೆಯ ಆವರಣ, ಕೇಶವ ಸಂಕಲ್ಪದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ವೆಂಕಟರಮಣರಾವ್ ಮಂಕುಡೆ ಅವರು ಉದ್ಘಾಟಿಸಿ, “ಕ್ರೀಡೆ ನಾಯಕತ್ವದ ಗುಣವನ್ನು ಬೆಳೆಸುವುದರೊಂದಿಗೆ ಭಾವೈಕ್ಯತೆಯನ್ನು ಕೂಡಾ ಜಾಗೃತಗೊಳಿಸುತ್ತದೆ.ಅಲ್ಲದೆ ನಮ್ಮನ್ನು ದೈಹಿಕವಾಗಿಯೂ ಸದೃಢಗೊಳಿಸುತ್ತದೆ. ಕ್ರೀಡೆಯಲ್ಲಿ ವಿಶೇಷ ಸಾಧನೆಗೈದುಕಲಿತ ಶಾಲೆಗೆ ಜೊತೆಗೆ ದೇಶಕ್ಕೆ ಹೆಸರು ತರುವಂತಹ ಕೆಲಸ ಮಾಡಬೇಕು.ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಒದಗಿ ಬರುವ ಸುವರ್ಣಾವಕಾಶಗಳನ್ನು ಕಡೆಗಣಿಸದೆ ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಬೇಕು” ಎಂದು ನುಡಿದರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರಾದ ಡಾ. ಕೃಷ್ಣ ಪ್ರಸನ್ನ ಕೆ. ಅವರು ವಹಿಸಿಕೊಂಡರು. ಸುಮಾರು 9 ಶಾಲೆ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು. ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ. ಎಂಸ್ವಾಗತಿಸಿ,ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ ವಂದಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಮೋನಿಷಾ ಇವರು ಕಾರ್ಯಕ್ರಮ ನಿರೂಪಿಸಿದರು.