





ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ.24ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ವ್ಯವಹಾರಗಳ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.



ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಬೆಳ್ತಂಗಡಿ ಅಮೂಲ್ಯ ಫೈನಾನ್ಸಿಯಲ್ ಲಿಟರಸಿ ಸೆಂಟರ್ ಇದರ ಸಲಹೆಗಾರರಾದ ಉಷಾ ವಿ ನಾಯಕ್ ಮಾತನಾಡಿ,
ಬ್ಯಾಂಕಿಂಗ್ ವ್ಯವಹಾರದಲ್ಲಿ ಆಗಿರುವ ಬೆಳವಣಿಗೆಗಳ ಬಗ್ಗೆ ತಿಳಿಸಿದ ಅವರು, ಬ್ಯಾಂಕಿಂಗ್ ಕ್ಷೇತ್ರದ ಮೂಲಭೂತ ಅವಶ್ಯಕತೆಗಳು ಮತ್ತು ಅವುಗಳ ಮಹತ್ವವನ್ನು ತಿಳಿಸಿದರು. ಇಂದು ಮೊಬೈಲ್ ಬ್ಯಾಂಕಿಂಗ್ ಅತ್ಯಂತ ಮಹತ್ವದ್ದಾಗಿದ್ದು, ಅದರ ಜೊತೆಗೆ ಇರುವ ಭದ್ರತಾ ಬೆದರಿಕೆಗಳ ಬಗ್ಗೆ ಕೂಡ ತಿಳಿಸಿದರು. ಗ್ರಾಮೀಣ ಬ್ಯಾಂಕುಗಳು ಗ್ರಾಹಕರ ಅವಶ್ಯಕತೆಗಳಿಗೆ ಸ್ಪಂದಿಸಿದರೆ, ದೇಶದ ಪ್ರಗತಿ ಸಾಧ್ಯ ಎಂಬುದನ್ನು ಒತ್ತಿ ಹೇಳಿದ ಅವರು, ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗಾವಕಾಶಗಳ ಮಾಹಿತಿಯನ್ನು ಕೂಡ ವಿದ್ಯಾರ್ಥಿಗಳಿಗೆ ನೀಡಿದರು.






ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ವಾಣಿಜ್ಯ ವಿಭಾಗವು ಒಂದು ಕ್ರಿಯಾತ್ಮಕ ವಿಭಾಗವಾಗಿದ್ದು, ವಿದ್ಯಾರ್ಥಿಗಳು ವಾಣಿಜ್ಯ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಅರಿವನ್ನು ಹೊಂದಿರಬೇಕು. ಮುಖ್ಯವಾಗಿ ಇಂದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ವಿದ್ಯಾರ್ಥಿಗಳು, ಬ್ಯಾಂಕಿನ ಕಾರ್ಯನಿರ್ವಹಣೆಯ ಬಗೆಗೆ ಅಧ್ಯಯನವನ್ನು ಮಾಡಬೇಕಾಗಿದೆ. ಸೂಕ್ತ ಮಾಹಿತಿಯೊಂದಿಗೆ ನಾವು ಕಲಿತಾಗ ಕಲಿಕೆ ಪರಿಣಾಮಕಾರಿ ಆಗುವುದರೊಂದಿಗೆ, ಸಾಕಷ್ಟು ಅನುಭವವನ್ನು ಪಡೆಯಬಹುದು ಎಂದು ಹೇಳಿದರು.
ವೇದಿಕೆಯಲ್ಲಿ ವಾಣಿಜ್ಯ ಸಂಘದ ನಿರ್ದೇಶಕರಾದ ಭರತ್ ಜಿ ಫೈ ಹಾಗೂ ಪೂರ್ಣಿಮಾ ಡಿ. ಎಸ್ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವರ್ಗ ಮತ್ತು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಏಂಜಲ್ ಡಿ’ ಸೋಜಾ ಸ್ವಾಗತಿಸಿ, ದಯನ್ ದೇವಯ್ಯ ವಂದಿಸಿ, ಬಿ ವಿ ಅನು ಕಾರ್ಯಕ್ರಮ ನಿರೂಪಿಸಿದರು.










