ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

0

  • ಕ್ರೀಡೆಯು ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ ಸಹಕಾರಿ- ಡಾ. ಕೃಷ್ಣಪ್ರಸನ್ನ

ಪುತ್ತೂರು: ಕ್ರೀಡೆಗಳು ಮನಸ್ಸಿಗೆ ಮುದ ನೀಡುವಂತೆ ದೈಹಿಕ ಪೋಷಣೆಗಳಿಗೂ ಸಹಾಯಕವಾಗುತ್ತವೆ. ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ, ಶಿಸ್ತು, ಸಹಬಾಳ್ವೆಗಳಲ್ಲದೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಂಬಂಧಗಳ ವೃದ್ಧಿಗಳಿಗೂ ಕ್ರೀಡೆಗಳು ಅಗತ್ಯವಾಗಿವೆ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಅರಿತುಕೊಂಡು ಆತ್ಮವಿಶ್ವಾಸದೊಂದಿಗೆ ದಿಟ್ಟ ಹೆಜ್ಜೆಗಳನ್ನು ಇರಿಸಬೇಕು. ಆಲೋಚನೆಗಳು, ನಿರ್ಧಾರಗಳು ಅಚಲವಾಗಿದ್ದಾಗ ಸಾಧನೆಯ ಉತ್ತುಂಗಕ್ಕೆ ಏರಲು ಸಾಧ್ಯ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಕೃಷ್ಣಪ್ರಸನ್ನ ಹೇಳಿದರು.

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ 2021-22ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವನ್ನು ಮೂಡಿಸಲು ಸಹಾಯ ಮಾಡುತ್ತದೆ. ಶಾಲಾ ಕಾಲೇಜು ಮಟ್ಟದ ಕ್ರೀಡಾ ಕೂಟಗಳಿಂದ ಸ್ನೇಹ ಸೌಹಾರ್ದತೆಗಳು ಏರ್ಪಡುತ್ತವೆ. ಕ್ರೀಡಾಪಟುಗಳಿಗೆ ದೇಶ ವಿದೇಶ ಮಟ್ಟದಲ್ಲಿ ವಿಶೇಷ ಮನ್ನಣೆಯಿದೆ. ರಾಷ್ಟ್ರೀಯ ಸಂಬಂಧಗಳ ವೃದ್ಧಿಗೆ ಕ್ರೀಡೆಗಳ ಕೊಡುಗೆ ಅಪಾರವಾಗಿದೆ. ವೈಯಕ್ತಿಕ ಓರೆಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ ಎಂದರು.

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಸಾತ್ವಿಕ್ , ರಾಷ್ಟ್ರಮಟ್ಟದ ಖೋ ಖೋ ಪಂದ್ಯಾಟದಲ್ಲಿ ಭಾಗವಹಿಸಿದ ಗುರುಪ್ರಸಾದ್, ಪವನ್ ಕ್ರೀಡಾಜ್ಯೋತಿಯನ್ನು ತರುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಆಕರ್ಷಕ ಪಥಸಂಚಲನ:
ಸುಮಾರು ೨೫ ತರಗತಿಗಳ ಶಿಸ್ತುಬದ್ಧ ಪಥ ಸಂಚಲನ ನಡೆಯಿತು. ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು. ಕಾಲೇಜಿನ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಕ್ರೀಡಾ ಮೈದಾನಕ್ಕೆ ಆಕ?ಕವಾಗಿ ಹೊತ್ತು ಸಾಗಿ ಬಂದರು. ದ್ವಿತೀಯ ಪಿಯುಸಿ ಕಲಾ ವಿಭಾಗವು ಪ್ರಥಮ ಸ್ಥಾನವನ್ನೂ ಪ್ರಥಮ ವಿಜ್ಞಾನದ ’ಬಿ’ ವಿಭಾಗವು ದ್ವಿತೀಯ ಸ್ಥಾನವನ್ನೂ ದ್ವಿತೀಯ ವಿಜ್ಞಾನದ ’ಡಿ’ ವಿಭಾಗವು ತೃತೀಯ ಬಹುಮಾನವನ್ನೂ ಪಡೆದುಕೊಂಡಿತು. ವಿವೇಕಾನಂದ ಕನ್ನಡಮಾಧ್ಯಮ ಶಾಲೆಯ ಆಕರ್ಷಕ ಬ್ಯಾಂಡ್ ಸೆಟ್ ಪಥಸಂಚಲನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮಾತನಾಡಿ ಕ್ರೀಡಾಕೂಟವು ಗುರಿಯನ್ನು ನಿಶ್ಚಯ ಮಾಡುವ ಪಾಠ. ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ. ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ. ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ. ಸಂಯಮ, ಇಚ್ಛಾಶಕ್ತಿ, ಸ್ವಾಭಿಮಾನ, ಏಕಾಗ್ರತೆಗಳನ್ನು ಬೆಳೆಸುತ್ತದೆ. ಸೋಲೇ ಗೆಲುವಿನ ಸೋಪಾನ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಕೂಡ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ಕಾರಣವಾಗುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಆಂಗ್ಲ ವಿಭಾಗದ ಮುಖ್ಯಸ್ಥ ಪಿ.ಕೆ. ಪರಮೇಶ್ವರ ಶರ್ಮ, ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ, ಯತೀಶ್, ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ದಕ್ಷಿಣ ಭಾರತ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ ಶ್ರೀಜಿತ್ ರೈ ಕ್ರೀಡಾ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾಲೇಜಿನ ಕ್ರೀಡಾ ಸಂಘದ ಕಾರ್ಯದರ್ಶಿ ಗುರುಪ್ರಸಾದ್ ಸ್ವಾಗತಿಸಿ ಕ್ರೀಡಾ ಜತೆಕಾರ್ಯದರ್ಶಿ ದೀಪಾಲಿ ವಂದಿಸಿದರು. ಉಪನ್ಯಾಸಕಿ ಹರ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here