ಅಳಿಕೆ : ಸ್ವಾರ್ಥ ಬಿಟ್ಟು ಬದುಕು ನಡೆಸುವುದನ್ನು ವಿದ್ಯಾರ್ಥಿಗಳು ಕಲಿಯಬೇಕು. ವಿದ್ಯಾರ್ಥಿಗಳು ವೈಯಕ್ತಿಕ ಬದುಕಿನ ಜತೆಗೆ ಸಾಮಾಜಿಕ ಬದುಕಿನಲ್ಲೂ ತೊಡಗಿಕೊಳ್ಳಬೇಕು ಎಂದು ಪುತ್ತೂರು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು.
ಅವರು ಅಳಿಕೆ ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಆಯೋಜಿಸಲಾದ ಪುತ್ತೂರು ವಿವೇಕಾನಂದ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ 2022ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ದಾನ ಎನ್ನುವುದು ಮೌಲ್ಯಯುತವಾದ ಸ್ವಭಾವವಾಗಿದೆ. ಶೈಕ್ಷಣಿಕ ಹಾಗೂ ಬೌದ್ಧಿಕವಾಗಿ ಬೆಳೆಸಿಕೊಳ್ಳಲು ಶಿಬಿರ ಸಹಕಾರಿಯಾಗಿದೆ ಎಂದು ನುಡಿದರು.
ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃ? ಕೆ. ಎನ್. ಮಾತನಾಡಿ ಬದುಕಿಗೆ ಬೇಕಾದ ಎಲ್ಲಾ ಅಂಶಗಳನ್ನು ಕಲಿಯಲು ಎನ್. ಎಸ್. ಎಸ್. ಸಹಕಾರಿಯಾಗಿದೆ. ಸಮಾಜಕ್ಕೆ ಪೂರಕವಾದ ಸೇವಾ ಕಾರ್ಯವನ್ನು ವಿದ್ಯಾರ್ಥಿಗಳು ನಿರಂತರವಾಗಿ ಮಾಡಬೇಕು. ಗ್ರಾಮ ದರ್ಶನದ ಮೂಲಕ ಹಳ್ಳಿ ಜೀವನವನ್ನು ವಿದ್ಯಾರ್ಥಿಗಳು ಮಾಡಿರುವುದು ಉತ್ತಮ ವಿಚಾರ ಎಂದು ತಿಳಿಸಿದರು.
ಪುತ್ತೂರು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಸಮಾರೋಪ ಭಾಷಣ ಹಾಗೂ ಅಳಿಕೆ ಶ್ರೀ ಸತ್ಯ ಸಾಯಿ ಲೋಕ ಸೇವಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಯಾದವ ನಡುಗುತ್ತು ಅಭಿನಂದನಾ ಭಾಷಣ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಳಿಕೆ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕಾನ ಈಶ್ವರ ಭಟ್ ವಹಿಸಿದ್ದರು.
ಶಿಬಿರಕ್ಕೆ ಸಹಕಾರ ನೀಡಿದ ಮಡಿಯಾಲ ದೇವಸ್ಥಾನ ಸಮಿತಿ, ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ ಸ್ಥಳೀಯ ಮನೆಯವರನ್ನು ಹಾಗೂ ಸಹಕಾರ ನೀಡಿದವರನ್ನು ಗೌರವಿಸಲಾಯಿತು. ಶಿಬಿರಾರ್ಥಿಗಳು ಅನುಭವ ಹಂಚಿಕೊಂಡರು. ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಶಿಬಿರದಲ್ಲಿ ಭಾಗವಹಿಸಿದ ಅರ್ಚನಾ ಅವರನ್ನು ಗೌರವಿಸಲಾಯಿತು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀನಾಥ್ ಬಿ. ಸ್ವಾಗತಿಸಿದರು. ಯೋಜನಾಧಿಕಾರಿ ವಿದ್ಯಾ ಎಸ್. ವಂದಿಸಿದರು. ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವಿಷ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.