ಪುತ್ತೂರು: ಮುಂಡೂರು ಗ್ರಾಮದ ಶ್ರೀ ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ, ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ಅಂಗವಾಗಿ ಮಾ.೭ರಂದು ಮುಂಜಾನೆಯಿಂದ ಅರ್ಧ ಏಕಾಹ ಭಜನೆಯು ಪ್ರಾರಂಭಗೊಂಡಿದೆ.
ಬೆಳಿಗ್ಗೆ ೬-೪೫ಕ್ಕೆ ಪ್ರಾರಂಭಗೊಂಡಿರುವ ಅರ್ಧ ಏಕಾಹ ಭಜನೆಗೆ ದೋನಿಂಜೆಗುತ್ತು ಸರೋಜಿನಿ ಟಿ.ಶೆಟ್ಟಿ ನೇಸರಕಂಪ ದೀಪ ಬೆಳಗಿಸಿ ಉದ್ಘಾಟಿಸಿ ಚಾಲನೆ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ರವಿ ಶೆಟ್ಟಿ ನೇಸರ ಕಂಪ, ಉತ್ಸವ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಉಪಾಧ್ಯಕ್ಷ ಅನಿಲ್ ಕುಮಾರ್ ಕನ್ನರ್ನೂಜಿ ಸಹಿತ ಹಲವು ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಳಿಕ ವಿವಿಧ ಭಜನಾ ತಂಡಗಳಿಂದ ಭಜನೆ ನಡೆಯುತ್ತಿದೆ.
ಸಂಜೆ ಅರ್ಧ ಏಕಾಹ ಭಜನೆಯ ಮಂಗಲೋತ್ಸವ, ರಂಗಪೂಜೆಯ ಬಳಿಕ ನೂತನವಾಗಿ ನಿರ್ಮಾಣಗೊಂಡಿರುವ ಮೇಲ್ಛಾವಣಿಯ ಲೋಕಾರ್ಪಣೆ ಮತ್ತು ಧಾರ್ಮಿಕ ಸಭೆ ನಡೆಯಲಿದೆ. ಅಭಿವೃದ್ಧಿ ಕಾರ್ಯಕ್ರಮಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿಯವರು ಆಶೀರ್ವಚನ ನೀಡಲಿದ್ದಾರೆ. ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಅಮ್ಟಾಡಿ ಅಣ್ಣಪ್ಪ ಪಂಜುರ್ಲಿ ದೈವಸ್ಥಾನದ ಆಡಳಿ ಮೊಕ್ತೇಸರ ರವಿಶಂಕರ್ ಶೆಟ್ಟಿ ಮೇಲ್ಛಾವಣಿಯ ಲೋಕಾರ್ಪಣೆ ಮಾಡಲಿದ್ದಾರೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೂಡಂಬೈಲು ಡಾ|ರವಿ ಶೆಟ್ಟಿ ನೇಸರಕಂಪ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಸಂಚಾಲಕ ಭಾಸ್ಕರ ಆಚಾರ್ ಹಿಂದಾರು, ಉದ್ಯಮಿಗಳಾದ ಉಮೇಶ್ ನಾಡಾಜೆ, ಸದಾಶಿವ ರೈ ಸೋಂಪಾಡಿಗುತ್ತು, ಮುಂಡೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪಾ ಪುರಂದರ ಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಅನ್ನಸಂತರ್ಪಣೆ ನಡೆದು ‘ಶಿವಧೂತ ಗುಳಿಗ’ ತುಳು ಪೌರಾಣಿಕ ನಾಟಕ ನಡೆಯಲಿದೆ.