ಪುತ್ತೂರು: ‘ಸರಕಾರಿ ಕೆಲಸ ದೇವರ ಕೆಲಸ’ ಎನ್ನುವ ತತ್ವವನ್ನು ಪಾಲಿಸಿ ತಮ್ಮ ತಮ್ಮ ಇಲಾಖೆ ಮತ್ತು ಹುದ್ದೆಗೆ ನ್ಯಾಯ ಒದಗಿಸಿಕೊಡುವಲ್ಲಿ ಸೇವೆ ಮತ್ತು ಸಮರ್ಪಣಾ ಭಾವದಿಂದ ಕಳೆದ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳಿಗೆ ನೀಡಲಾಗುವ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾದ ಪುತ್ತೂರಿನ ಮೂವರು ಹಾಗೂ ಕಡಬ ತಾಲೂಕಿನ ಓರ್ವರಿಗೆ ಎ.21ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಧಾಕೃಷ್ಣ ಪೂಜಾರಿ
ಆರ್ಯಾಪು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್, ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ಸಹಾಯಕ ಆಡಳಿತಾಧಿಕಾರಿ ರಾಧಾಕೃಷ್ಣ ಪೂಜಾರಿ ಕೆ., ಕಡಬ ತಾಲೂಕು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವಾಹನ ಚಾಲಕ ಎನ್.ಪಿ.ಸುಬ್ಬಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಚಾಲಕ ಕೆ. ಪೂವಪ್ಪರವರಿಗೆ ಮಂಗಳೂರು ಪುರಭವನದ ಕುದ್ಮಲ್ ರಂಗರಾವ್ ವೇದಿಕೆಯಲ್ಲಿ ಎ.21 ರಂದು ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ದಿನಾಚರಣೆ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ರವರು ಪ್ರಶಸ್ತಿ ಪ್ರದಾನ ಮಾಡಿದರು. ಅಪರ ಜಿಲ್ಲಾಧಿಕಾರಿ ಕೃಷ್ಣ ಮೂರ್ತಿ ಹೆಚ್.ಕೆ, ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ದ.ಕ.ಜಿಲ್ಲಾ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.