ಪುತ್ತೂರು:2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಎ.22ರಿಂದ ಪ್ರಾರಂಭಗೊಂಡಿದ್ದು ಪುತ್ತೂರಿನ 5 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ಪ್ರಥಮ ದಿನದ ಬ್ಯುಸಿನೆಸ್ ಸ್ಟಡೀಸ್ ವಿಷಯಕ್ಕೆ 1616 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು 34 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
306 ಕೊಂಬೆಟ್ಟು ಸ.ಪ.ಪೂ ಕಾಲೇಜು, 173 ಉಪ್ಪಿನಂಗಡಿ ಸ.ಪ.ಪೂ ಕಾಲೇಜು, 432 ದರ್ಬೆ ಸಂತ ಫಿಲೋಮಿನಾ ಕಾಲೇಜು, 544 ನೆಹರುನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜು, 161 ವಿದ್ಯಾರ್ಥಿಗಳು ಕಾಣಿಯೂರು ಸ.ಪ.ಪೂ ಕಾಲೇಜಿನಲ್ಲಿ ನೋಂದಾಯಿಸಿಕೊಂಡಿದ್ದರು. ಈ ಪೈಕಿ 4 ಕೊಂಬೆಟ್ಟು ಸ.ಪ.ಪೂ ಕಾಲೇಜು, 8 ಉಪ್ಪಿನಂಗಡಿ ಸ.ಪ.ಪೂ ಕಾಲೇಜು, 3 ದರ್ಬೆ ಸಂತ ಫಿಲೋಮಿನಾ ಕಾಲೇಜು, 15 ನೆಹರುನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜು, 4 ವಿದ್ಯಾರ್ಥಿಗಳು ಕಾಣಿಯೂರು ಸ.ಪ.ಪೂ ಕಾಲೇಜಿನ ಕೇಂದ್ರದಲ್ಲಿ ಗೈರು ಹಾಜರಾಗಿದ್ದಾರೆ.
ಪರೀಕ್ಷಾ ಕೇಂದ್ರಗಳ ಪರಿಸರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆ ಸಿಬ್ಬಂದಿಗಳು ಥರ್ಮಲ್ ಸ್ಕ್ರೀನಿಂಗ್ ನಡೆಸಿ, ಸ್ಯಾನಿಟೈಸರ್ ನೀಡಿದ ಬಳಿಕ ಕೇಂದ್ರದ ಒಳಗಡೆ ಕಳುಹಿಸಲಾಗುತ್ತಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ., ತಹಶೀಲ್ದಾರ್ ರಮೇಶ್ ಬಾಬು ಹಾಗೂ ಕನ್ಯಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರನ್ನು ಮಾರ್ಗಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ್ದರು.