- ಮುಂದಿನ ಸಭೆಗಳಿಗೆ ಎಲ್ಲಾ ಅಧಿಕಾರಿಗಳು ಹಾಜರಿರಬೇಕು: ಬಾಲಕೃಷ್ಣ ಆಳ್ವ ಕೊಡಾಜೆ
ವಿಟ್ಲ: ಸ್ಥಳೀಯಾಡಳಿತದ ಜೊತೆಗೆ ಗ್ರಾಮ ಮಟ್ಟದ ಇಲಾಖಾಧಿಕಾರಿಗಳು ನಿಕಟವಾದ ಸಂಪರ್ಕವನ್ನು ಇಟ್ಟುಕೊಂಡು ಗ್ರಾಮದ ಅಭಿವೃದ್ಧಿಗಾಗಿ ಸಹಕರಿಸಬೇಕು ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.
ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ಮೂರು ತಿಂಗಳಿಗೊಮ್ಮೆ ಕೆಡಿಪಿ ಸಭೆಯನ್ನು ನಡೆಸಲಾಗುವುದು. ಈ ಸಂದರ್ಭದಲ್ಲಿ ಗ್ರಾಮ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ, ಜನರ ಬೇಡಿಕೆಯನ್ನು ಈಡೇರಿಸುವ ದೃಷ್ಟಿಯಿಂದ ನಮ್ಮ ಜೊತೆ ಕೈಜೋಡಿಸುವ ಅಗತ್ಯ ಇದೆ ಎಂದರು.
ಗ್ರಾಮ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದು, ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ಇಬ್ರಾಹಿಂ.ಕೆ.ಮಾಣಿ, ನಾರಾಯಣ ಶೆಟ್ಟಿ, ರಮಣಿ.ಡಿ.ಪೂಜಾರಿ, ಸುಜಾತ, ಮಿತ್ರಾಕ್ಷಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು