ಕಿಸಾನ್ ಕ್ರೆಡಿಟ್ ಕಾರ್ಡ್‌ನ ಸದುಪಯೋಗಕ್ಕೆ ಬ್ಯಾಂಕರ್‌ಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಕರೆ

0

ಮಂಗಳೂರು:ಜಿಲ್ಲೆಯ ಪ್ರತಿಯೊಬ್ಬ ರೈತರು ರೈತಸ್ನೇಹಿ ಯೋಜನೆಯಾದ ಕಿಸಾನ್ ಕ್ರೆಡಿಟ್ ಕಾರ್ಡ್‌ನ ಸದುಪಯೋಗ ಪಡೆಯುವಂತೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಕರೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ವಿವಿಧ ಬ್ಯಾಂಕರುಗಳ ವಿಶೇಷ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಏ.೨೪ರಂದು ನಡೆಯುವ ಪಂಚಾಯತ್‌ರಾಜ್ ದಿನದಂದು ಪ್ರಧಾನಮಂತ್ರಿಗಳು ಮಹಾಗ್ರಾಮ ಸಭಾ ಕಾರ್ಯಕ್ರಮದಲ್ಲಿ ಕಿಸಾನ್ ಭಾಗಿದಾರಿ, ಪ್ರಾಥಮಿಕ ಹಮಾರಿ ಎಂಬ ಬೃಹತ್ ಆಂದೋಲನಕ್ಕೆ ಚಾಲನೆ ನೀಡಲಿದ್ದಾರೆ,ಈ ಆಂದೋಲನ ಮೇ೧ರವರೆಗೆ ನಡೆಯಲಿದೆ.ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪಿ.ಎಂ.ಕಿಸಾನ್ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆಯಬೇಕು.ಬ್ಯಾಂಕ್,ಪಂಚಾಯತ್ ಅಧಿಕಾರಿಗಳು ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಬಗ್ಗೆ ಅರಿವು ಮೂಡಿಸಿ, ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಬೆಳೆ ಸಾಲ ಪಡೆಯಲು ಪ್ರೋತ್ಸಾಹ ನೀಡಬೇಕು,ಸಾಮಾಜಿಕ ಜಾಲತಾಣಗಳ ಮೂಲಕ ಈ ಯೋಜನೆಯ ಬಗ್ಗೆ ಪ್ರಚಾರ ಪಡಿಸಬೇಕು, ಜತೆಗೆ ಪ್ರಧಾನ ಮಂತ್ರಿ ಸುರಕ್ಷಾ ಭಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಗಳ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸುವಂತೆ ಕರೆ ನೀಡಿದರು.

ಗ್ರಾಮೀಣ ಭಾಗದ ಬ್ಯಾಂಕುಗಳು, ಸಹಕಾರಿ ಸಂಘಗಳು ಈ ಬಗ್ಗೆ ಹೆಚ್ಚಿನ ಒಲವು ತೋರಿ ಜನರು ಬೆಳೆ ಸಾಲ ಪಡೆಯುವಂತೆ ಪ್ರೋತ್ಸಾಹಿಸಬೇಕು,ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕುಗಳಲ್ಲಿ ಶೂನ್ಯ ಬಡ್ಡಿ ದರದಲ್ಲಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಇತರೆ ಖಾಸಗೀ ಬ್ಯಾಂಕುಗಳಲ್ಲಿ ಶೇಕಡಾ ೪ರಷ್ಟು ಬಡ್ಡಿ ದರದಲ್ಲಿ ಈ ಸೌಲಭ್ಯ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.ಪಶುಸಂಗೋಪನೆ, ಮೀನುಗಾರಿಕೆ, ಕುಕ್ಕುಟೋದ್ಯಮ ಇತ್ಯಾದಿಗಳಲ್ಲಿ ತೊಡಗಿಸಿಕೊಂಡವರು ಕೂಡ ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.

ಕೇಂದ್ರ ಸರ್ಕಾರದ ಈ ಮಹತ್ವಾಕಾಂಕ್ಷೆಯ ಯೋಜನೆಯು ಪ್ರತಿಯೊಬ್ಬ ಪಿ.ಎಂ.ಕಿಸಾನ್ ಫಲಾನುಭವಿಗಳನ್ನೂ ತಲುಪಬೇಕು. ಆ ಮೂಲಕ ನಮ್ಮ ಜಿಲ್ಲೆಯಲ್ಲಿ ಎಲ್ಲಾ ಅರ್ಹ ರೈತ ಬಾಂಧವರು ಈ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆದು ಆ ಮೂಲಕ ಯೋಜನೆಯ ಲಾಭ ಪಡೆದು ಆಂದೋಲನವನ್ನು ಯಶಸ್ವಿಯಾಗಿಸಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.

ನಬಾರ್ಡ್ ಅಧಿಕಾರಿ ಸಂಗೀತ ಕರ್ತ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಎಂ.ಪಿ., ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಪ್ರಸನ್ನ ಹಾಗೂ ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕುಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ನೋಡೆಲ್ ಅಧಿಕಾರಿಗಳ ನಿಯೋಜನೆ
ಈ ಆಂದೋಲನವನ್ನು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರಲು ಪುತ್ತೂರು ವಿಭಾಗಕ್ಕೆ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಎಚ್.ಆರ್. ನಾಯಕ್ ಹಾಗೂ ಮಂಗಳೂರು ವಿಭಾಗಕ್ಕೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ ಅವರನ್ನು ನೋಡೆಲ್ ಅಧಿಕಾರಿಗಳಾಗಿ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಯವರು ನಿಯೋಜಿಸಿದರು.

LEAVE A REPLY

Please enter your comment!
Please enter your name here