ಪುತ್ತೂರು: ಚುನಾವಣೆ ಆಯೋಗದಿಂದ ರಾಷ್ಟ್ರೀಯ ಮಾನ್ಯತೆ ಪಡೆದ ಪಕ್ಷವಾಗಿದ್ದು, ೧೮ ಕೋಟಿಗೂ ಮಿಕ್ಕಿ ಸದಸ್ಯತ್ವ ಹೊಂದಿರುವ ಪಕ್ಷ ಮತ್ತು ದೇಶದಾದ್ಯಂತ ಕಾರ್ಯಕರ್ತನ್ನು ಹೊಂದಿರುವ ಭಾರತೀಯ ಜನತಾ ಪಾರ್ಟಿ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಹೊರಿಸುವುದು ಹಳದಿ ರೋಗದವರಿಗೆ ಹಳದಿಯೇ ಕಂಡಂತಾಗಿದೆ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ನಿಂದ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಪತ್ರಿಕಾಗೋಷ್ಠಿ ಮಾಡಿದ ಹಿನ್ನಲೆಗೆ ಸಂಬಂಧಿಸಿ ಪುತ್ತೂರು ಬಿಜೆಪಿ ಮಂಡಲದಿಂದ ಬ್ಲಾಕ್ ಕಾಂಗ್ರೆಸ್ ನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿ ಬಳಿಕ ಬಿಜೆಪಿ ಕಚೇರಿಯಲ್ಲಿ ಪತ್ರಿಕಾ ಮಾಧ್ಯಮದವರೊಂದಿಗೆ ಮಾತನಾಡಿದರು. ಕಂದಾಯ ಇಲಾಖೆಯಿಂದ ಬಿಜೆಪಿ ಕಚೇರಿಗೆ ಮಾಮೂಲು ಸಂದಾಯ ಆಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಟಿ ನಡೆಸಿ ಬಿಜೆಪಿ ವಿರುದ್ಧ ಸುಳ್ಳು ಆಪಾದಿಸಿದ್ದಾರೆ. ಇಂತಹ ಸುಳ್ಳು ಆಪಾದನೆ ಮಾಡುವುದು ಸರಿಯಲ್ಲ. ಕಾಂಗ್ರೆಸ್ ನವರು ಚುನಾವಣೆ ಹತ್ತಿರ ಬಂದಾಗ ಇಂತಹ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದವರು ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಶಾಂತಿವನ, ನಗರಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ ಮತ್ತು ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪೊಲೀಸ್ ಠಾಣೆಗೆ ದೂರು ನೀಡುವ ಸಂದರ್ಭ ಪತ್ರಿಕಾಗೋಷ್ಠಿಯಲ್ಲಿ ಇದ್ದವರು ಸಹಿತ ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ನಗರಯೋಜನ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಹರೀಶ್ ಬಿಜತ್ರೆ, ಚಂಸ್ರಶೇಖರ್ ರಾವ್ ಬಪ್ಪಳಿಗೆ ಉಪಸ್ಥಿತರಿದ್ದರು.