`ಜಿಲ್ಲೆಯ ರೈತರ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ’- ರೈತರ ಅಹವಾಲು ಸಭೆಯಲ್ಲಿ ಜಿಲ್ಲಾಧಿಕಾರಿ ಭರವಸೆ

0

  • ಗೊಬ್ಬರ ಸಮಸ್ಯೆಯಾದರೆ ಕೃಷಿ ಇಲಾಖೆಗೆ ತಿಳಿಸಿ
  • ಒಂದು ಗಂಟೆಯೊಳಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ
  • ಸಾಲ ಪಡೆಯದ ರೈತರೂ ಬೆಳೆ ವಿಮೆಗೆ ಅರ್ಹ
  • ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ
  • ಎಲ್ಲ ರೈತರೂ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆದುಕೊಳ್ಳಿ
  • ಪವರ್ ಸ್ಟೇಷನ್‌ಗಳ ನಿರ್ಮಾಣಕ್ಕೆ ಅಗತ್ಯ ಭೂಮಿ ನೀಡಿ

 

ಮಂಗಳೂರು:ಜಿಲ್ಲೆಯ ರೈತರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತದಿಂದ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದ್ದಾರೆ.

 

ಜಿಲ್ಲೆಯ ರೈತರ ಅಹವಾಲುಗಳಿಗೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಯವರು, ಮುಂಗಾರು ಆಗಮಿಸುತ್ತಿದೆ.ರೈತ ಸಂಪರ್ಕ ಕೇಂದ್ರದಿಂದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಸಲಾಗುವುದು, ಅಲ್ಲಿ ಕೊರತೆ ಆಗದಂತೆ ಎಚ್ಚರ ವಹಿಸಲಾಗಿದೆ. ಆದಾಗ್ಯೂ ಡಿಐಪಿ, ಯೂರಿಯಾ, ಗೊಬ್ಬರದ ಸಮಸ್ಯೆ ಕಂಡುಬಂದಲ್ಲಿ ರೈತರು ಹಾಗೂ ರೈತ ಸಂಘಟನೆಗಳು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಅಥವಾ ಸಹಾಯಕ ನಿರ್ದೇಶಕರಿಗೆ ನೇರವಾಗಿ ಕರೆ ಮಾಡಿ ವಿಷಯ ತಿಳಿಸಬಹುದಾಗಿದೆ ಎಂದರು.

ಒಂದು ಗಂಟೆಯೊಳಗೆ ಗೊಬ್ಬರ, ಬಿತ್ತನೆ ಬೀಜ ಪೂರೈಕೆ: ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸೀತಾ ಮಾತನಾಡಿ, ರಸಗೊಬ್ಬರದ ಕೊರತೆ ಕಂಡುಬಂದಲ್ಲಿ ತಕ್ಷಣ ಸಂಪರ್ಕಿಸಬಹುದು.ಒಂದು ಗಂಟೆಯೊಳಗೆ ರೈತರಿಗೆ ಗೊಬ್ಬರ ಹಾಗೂ ಬಿತ್ತನೆ ಬೀಜದ ಪೂರೈಸಲಾಗುವುದು ಎಂದರು.

ರಸಗೊಬ್ಬರ ದಾಸ್ತಾನು ಮಾಡುವ ಸಂದರ್ಭ ಚೀಲಕ್ಕೆ ಕೊಕ್ಕೆ ಹಾಕದಂತೆ ಎಚ್ಚರ ವಹಿಸಬೇಕು, ೫೦ ಕೆ.ಜಿ ರಸಗೊಬ್ಬರದ ಚೀಲಕ್ಕೆ ಕಬ್ಬಿಣದ ಸಲಾಕೆಯ ಕೊಕ್ಕೆ ಹಾಕಿದಲ್ಲಿ ರಂಧ್ರದಿಂದ ಗೊಬ್ಬರ ಪೋಲಾಗುವ ಸಾಧ್ಯತೆ ಇದೆ.ಇಂತಹ ವಿಷಯಗಳಲ್ಲಿ ಕೃಷಿ ಇಲಾಖೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಸಾಲ ಪಡೆಯದ ರೈತರೂ ಬೆಳೆ ವಿಮೆಗೆ ಅರ್ಹ: ಬೆಳೆ ವಿಮೆಗೆ ಗೊತ್ತುಪಡಿಸಲಾದ ಬೆಳೆಗಳಿಗೆ ಬ್ಯಾಂಕ್ ಖಾತೆಗಳಿರುವ ಬ್ಯಾಂಕುಗಳೇ ಬೆಳೆ ವಿಮೆ ಮಾಡಿಕೊಡುತ್ತವೆ, ಸಾಲ ಪಡೆಯದ ರೈತರು ಕೂಡ ನೋಟಿಫೈಡ್ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಅರ್ಹರಿರುತ್ತಾರೆ,ರೈತರು ಇದರ ಪ್ರಯೋಜನ ಪಡೆಯಬೇಕು ಎಂದು ಡಿಸಿ ಮನವಿ ಮಾಡಿದರು.

ವಿವಿಧ ರೀತಿಯ ಬೆಳೆ ಇದ್ದರೂ ಬೆಳೆ ಸಮೀಕ್ಷೆ ವೇಳೆ ಕೇವಲ ಒಂದು ಬೆಳೆಯನ್ನು ಮಾತ್ರ ಆರ್‌ಟಿಸಿಯಲ್ಲಿ ನಮೂದಿಸಲಾಗುತ್ತಿದೆ, ಇದು ರೈತರಲ್ಲಿ ಗೊಂದಲವನ್ನುಂಟು ಮಾಡುತ್ತಿದೆ.ಕೃಷಿ ಇಲಾಖೆ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ರೈತರು ಮನವಿ ಮಾಡಿದರು.

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ: ಜಿಲ್ಲೆಯಲ್ಲಿ ಕಳೆದ ಬಾರಿ ರೈತರಿಂದ ಭತ್ತ ಖರೀದಿಗೆ ಬೇಡಿಕೆಯಿತ್ತು, ಅದರಂತೆ ಖರೀದಿ ಕೇಂದ್ರಗಳನ್ನು ತೆರೆಯಲಾಯಿತು, ಆದರೆ ಯಾರೂ ಕೂಡ ಬೆಂಬಲ ಬೆಲೆಗೆ ಭತ್ತ ನೀಡಲಿಲ್ಲ, ಪ್ರಸಕ್ತ ಸಾಲಿನಲ್ಲೂ ಬೆಂಬಲ ಬೆಲೆಗೆ ಭತ್ತ ಖರೀದಿಸುವುದಿದ್ದರೆ ತಿಳಿಸಬಹುದು ಎಂದು ಡಿಸಿ ಸೂಚಿಸಿದರು.

ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆದುಕೊಳ್ಳಿ: ಜಿಲ್ಲೆಯ ಎಲ್ಲಾ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯುವಂತೆ ಸಲಹೆ ನೀಡಿದ ಜಿಲ್ಲಾಧಿಕಾರಿ, ಈ ಕಾರ್ಡ್ ಪಡೆಯಲು ಕಷ್ಟವಾದಲ್ಲಿ ಗ್ರಾಮ ಲೆಕ್ಕಾಧಿಕಾರಿ ಅಥವಾ ಪಿಡಿಒ ಅವರ ನೆರವು ಪಡೆಯಬಹುದು.ಕೆಲವು ಸಮಸ್ಯೆಗಳಿಂದಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯದ ರೈತರ ಪಟ್ಟಿ ನೀಡಿದರೆ ಅದನ್ನು ಸರಿಪಡಿಸಿಕೊಡಲಾಗುವುದು, ಈ ಬಗ್ಗೆ ಜಾಗೃತಿ ಮೂಡಿಸಲು ಐಇಸಿ ಚಟುವಟಿಕೆಗಳನ್ನು ಮತ್ತಷ್ಟು ಹಮ್ಮಿಕೊಳ್ಳಲಾಗುವುದು. ಅದೇ ರೀತಿ ರೈತರು ಕೂಡ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ, ಪಿಎಂ ಕಿಸಾನ್, ವಿದ್ಯಾನಿಧಿ ಯೋಜನೆಗಳ ಬಗ್ಗೆ ಪ್ರಚಾರ ಪಡಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ., ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಎಚ್.ಆರ್. ನಾಯಕ್, ಕೃಷಿ, ಪಶುಸಂಗೋಪನಾ ಇಲಾಖೆ, ಅರಣ್ಯ ಇಲಾಖೆ, ಮೆಸ್ಕಾಂನ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ರೈತ ಮುಖಂಡರಾದ ರೂಪೇಶ್ ರೈ, ಸಂಪತ್, ಆಲ್ವಿನ್, ಧನಕೀರ್ತಿ ಬಲಿಪ ಮತ್ತಿತರರು ಪಾಲ್ಗೊಂಡಿದ್ದರು.”

ಮಾಡಾವಿನಲ್ಲಿ ವರ್ಷದೊಳಗೆ 100ಕೆ.ವಿ.ವಿದ್ಯುತ್ ಕೇಂದ್ರ
ಜಿಲ್ಲೆಯ ಅಭಿವೃದ್ದಿ ಚಟುವಟಿಕೆಗಳಿಗೆ ರೈತರ ಸಹಕಾರವೂ ಅತ್ಯಗತ್ಯ. ಈ ನಿಟ್ಟಿನಲ್ಲಿ ಪವರ್ ಸ್ಟೇಷನ್‌ಗಳ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ರೈತರು ನೀಡಬೇಕು. ಇಂತಹ ಸನ್ನಿವೇಶದಲ್ಲಿ ಸಂಬಂಧಿಸಿದ ರೈತರಿಗೆ ಸಾಧ್ಯವಾದಷ್ಟು ಹೆಚ್ಚಿನ ಪರಿಹಾರ ನೀಡಲು ಶಕ್ತಿಮೀರಿ ಯತ್ನಿಸಲಾಗುವುದು.ಮಾಡಾವಿನಲ್ಲಿ ವರ್ಷದೊಳಗೆ ೧೧೦ ಕೆ.ವಿ. ಕೇಂದ್ರ ನಿರ್ಮಾಣವಾಗಲಿದೆ,ರೈತರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

LEAVE A REPLY

Please enter your comment!
Please enter your name here