ಕಡಬ: ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಒಟ್ಟು 12 ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮುಂದಿನ 5 ವರ್ಷಗಳ ಅವಧಿಗೆ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಾಮಾನ್ಯ, ಹಿಂದುಳಿದ ವರ್ಗ ಪ್ರವರ್ಗ ಎ ಮತ್ತು ಬಿ, ಮಹಿಳಾ, ಅನುಸೂಚಿತ ಜಾತಿ, ಅನುಸೂಚಿತ ಪಂಗಡಕ್ಕೆ ಮೀಸಲಿರಿಸಿದ ಸ್ಥಾನದಿಂದ ಒಟ್ಟು 12 ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದು, ಎಲ್ಲಾ 12 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಲ್ಲುಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೆ ಗಣೇಶ್ ಭಟ್ ನಿಡ್ಡೋ ಹಾಗೂ ಉಪಾಧ್ಯಕ್ಷರಾಗಿ ರವಿಪ್ರಸಾದ್ ಕೆ ರವರು ಮುಂದಿನ 5 ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ.
ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ ನೂತನ ಅಧ್ಯಕ್ಷ ಕೆ. ಗಣೇಶ್ ಭಟ್ ನಿಡ್ಡೋ ಅವರು “ಈ ಹಿಂದಿನ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದೇನೆ. ಇದೀಗ ಅಧ್ಯಕ್ಷರಾಗಿ ಕೆಲಸ ಮಾಡುವ ಭಾಗ್ಯ ಸಿಕ್ಕಿದೆ. ಮುಂದಿನ 5 ವರ್ಷಗಳ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಕೈ ಗೊಂಡು ಈ ಸಂಘವನ್ನು ಉತ್ತಮ ದರ್ಜೆಗೆ ಕೊಂಡೊಯ್ಯುವ ಯೋಜನೆ ಇದೆ” ಎಂದರು.
ಚುನಾವಣಾ ಅಧಿಕಾರಿಯಾಗಿ ಸಹಕಾರಿ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಮಂಗಳೂರು ಉಪವಿಭಾಗ ಇದರ ಅಧೀಕ್ಷರಾದ ಬಿ ನಾಗೇಂದ್ರ ರವರು ಆಗಮಿಸಿ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ಸಂಘದ ಕಾರ್ಯದರ್ಶಿ ವಲ್ಸಾ ಕೆ.ಜೆ ಇವರು ಸ್ವಾಗತಿಸಿ ಅಭಿನಂದಿಸಿದರು.