- ಹೆಚ್ಚಿನ ಕಾಲಾವಕಾಶ ಕೇಳದಂತೆ ರಾಜ್ಯ ಸರಕಾರಕ್ಕೆ ತಾಕೀತು
- ಮೀಸಲಾತಿ ನಿಗದಿಗೆ ರಚಿಸಲಾದ ಆಯೋಗದ ವರದಿಗೆ ಕಾಲಾವಕಾಶ ಕೋರಿದ ಎ.ಜಿ
ಬೆಂಗಳೂರು:ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿ ಕ್ಷೇತ್ರ ಪುನರ್ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ರಾಜ್ಯ ಹೈಕೋರ್ಟ್ 12 ವಾರಗಳ ಗಡುವು ವಿಧಿಸಿದೆ.ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಒಂದು ವಾರದಲ್ಲಿ ರಾಜ್ಯ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಬೇಕು.ರಾಜ್ಯ ಸರ್ಕಾರ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದಕ್ಕೆ 12 ವಾರಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಬಾರದು ಎಂದು ಸೂಚನೆ ನೀಡಿದೆ.
ಜಿ.ಪಂ, ತಾ.ಪಂ ಕ್ಷೇತ್ರ, ಮೀಸಲಾತಿ ನಿಗದಿಗೆ ರಾಜ್ಯ ಸರಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚನೆ ಮಾಡಿರುವುದರಿಂದ ಚುನಾವಣೆ ನಡೆಸಲು ವಿಳಂಬವಾಗುತ್ತಿದೆ ಎಂದು ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಮೇ ೨೪ರಂದು ಈ ನಿರ್ದೇಶನ ನೀಡಿದೆ.
ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಅವರು ವಾದಿಸಿ, ನಿವೃತ್ತ ನ್ಯಾಯಮೂರ್ತಿ ಡಾ|ಕೆ.ಭಕ್ತವತ್ಸಲ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಮೀಸಲು ನಿಗದಿಗೆ ಆಯೋಗ ರಚಿಸಲಾಗಿದೆ.ಅದರ ವರದಿಗಾಗಿ ಕಾಲಾವಕಾಶ ನೀಡಬೇಕೆಂದು ನ್ಯಾಯಪೀಠಕ್ಕೆ ಮೆಮೊ ಸಲ್ಲಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ, ರಾಜ್ಯ ಸರ್ಕಾರ ಮತ್ತೆ ಮತ್ತೆ ಹೆಚ್ಚಿನ ಸಮಯ ಕೇಳಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ೧೨ ವಾರಗಳ ಗಡುವು ವಿಧಿಸಿ ವಿಚಾರಣೆ ಮುಂದೂಡಿದೆ.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.ಅದರಂತೆ, ರಾಜ್ಯದಲ್ಲೂ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಬೇಕಾಗಿದೆ.ಸುಪ್ರೀಂಕೋರ್ಟ್ ತೀರ್ಪಿನಿಂದ ತುರ್ತು ಸ್ಥಿತಿ ಎದುರಾಗಿದೆ ಎಂದು ಅಯೋಗವು ಕಳೆದ ವಿಚಾರಣೆ ವೇಳೆ ನ್ಯಾಯಪೀಠಕ್ಕೆ ತಿಳಿಸಿತ್ತು.
ಕಳೆದ ವರ್ಷ ಏಪ್ರಿಲ್, ಮೇ ಮತ್ತು ಜೂನ್ನಲ್ಲಿ ಅವಧಿ ಪೂರ್ಣಗೊಂಡ ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸಿದ್ದತೆ ಆರಂಭಿಸಿದ್ದ ಚುನಾವಣಾ ಆಯೋಗವು ಈ ಸಂಬಂಧ ಕ್ಷೇತ್ರ ಪುನರ್ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿತ್ತು.ಅಂತೆಯೇ ಮೀಸಲಾತಿ ಕರಡು ಸಹ ಪ್ರಕಟಿಸಲಾಗಿತ್ತು.ಚುನಾವಣೆಗೆ ಇನ್ನೇನು ದಿನಾಂಕ ಘೋಷಣೆ ಮಾಡಬೇಕು ಎನ್ನುವ ಸಂದರ್ಭದಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದಿದ್ದ ಸರ್ಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಇದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು.
ಕಳೆದ ವರ್ಷ ಏಪ್ರಿಲ್, ಮೇ ಮತ್ತು ಜೂನ್ನಲ್ಲಿ ಅವಧಿ ಪೂರ್ಣಗೊಂಡ ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸಿದ್ದತೆ ಆರಂಭಿಸಿದ್ದ ಚುನಾವಣಾ ಆಯೋಗವು ಈ ಸಂಬಂಧ ಕ್ಷೇತ್ರ ಪುನರ್ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಮತ್ತು ಮೀಸಲಾತಿ ಕರಡು ಸಹ ಪ್ರಕಟಿಸಲಾಗಿತ್ತು.ಚುನಾವಣೆಗೆ ಇನ್ನೇನು ದಿನಾಂಕ ಘೋಷಣೆ ಮಾಡಬೇಕು ಎನ್ನುವ ಸಂದರ್ಭದಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದಿದ್ದ ಸರ್ಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಇದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು.