ಬೆಟ್ಟಂಪಾಡಿ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಕ್ಷಕ – ಶಿಕ್ಷಕ ಸಂಘಕ್ಕೆ ಪದಾಧಿಕಾರಿಗಳ ಅಯ್ಕೆ ಜೂ.. 9 ರಂದು ನಡೆದ ಪೋಷಕರ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಡೆಯಿತು. 2021-2022 ನೇ ಸಾಲಿನ ರಕ್ಷಕ -ಶಿಕ್ಷಕ ಸಂಘಕ್ಕೆ ಅಧ್ಯಕ್ಷರಾಗಿ ಆರ್ಲಪದವು ಹಾಲು ಉತ್ಪಾದಕರ ಸಂಘದ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹಾಗೂ ಕಾರ್ಯದರ್ಶಿ ಸತ್ಯನಾರಾಯಣ ಅಡಿಗ ಹಾಗೂ ಕೋಶಾಧಿಕಾರಿಯಾಗಿ ಪ್ರಗತಿಪರ ಕೃಷಿಕ ರಾಜಗೋಪಾಲ ರೈ ಆನಾಜೆಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಜೂ. 8 ಮತ್ತು 9 ರಂದು ಎಲ್ಲಾ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಮುಖ್ಯ ಅತಿಥಿಗಳಾಗಿ ನಿಡ್ಪಳ್ಳಿ ಗ್ರಾ.ಪಂ. ಉಪಾಧ್ಯಕ್ಷ ವೆಂಕಟರಮಣ ಬೋರ್ಕರ್ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಪೋಷಕರಿಗೆ ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಲಾಯಿತು. ವೇದಿಕೆಯಲ್ಲಿ ಕಾಲೇಜಿನ ಐ ಕ್ಯೂ ಎ ಸಿ ಸಂಚಾಲಕ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಹರಿಪ್ರಸಾದ್ ಎಸ್., ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಮಂಜುಳಾ ದೇವಿ, ಸಮಾಜ ಕಾರ್ಯ ವಿಭಾಗ ಮುಖ್ಯಸ್ಥ ಡಾ. ನಿರೀಕ್ಷಿಣ್ ಸಿಂಗ್ ಗೌಗಿ, ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಉದಯರಾಜ್, ಮತ್ತು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ತಿಮ್ಮಯ್ಯ ಎಲ್. ಎನ್. ಉಪಸ್ಥಿತರಿದ್ದು ವಿಭಾಗವಾರು ಮಾಹಿತಿಯನ್ನು ನೀಡಿದರು. ಕಾಲೇಜಿನ ಗ್ರಂಥಪಾಲಕರು ಹಾಗೂ ರಕ್ಷಕ ಶಿಕ್ಷಕ ಸಂಘದ ಕಾರ್ಯದರ್ಶಿ ರಾಮ ಕೆ. ಕಾರ್ಯಕ್ರಮ ನಿರೂಪಿಸಿದರು.