ಪುತ್ತೂರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಡಿಯಲ್ಲಿ ಕುಂಬ್ರ ಕೆಪಿಎಸ್ ಶಾಲೆಯಲ್ಲಿ ಮಾದಕ ವಸ್ತುಗಳ ವಿರೋಧಿ ದಿನ ಕಾರ್ಯಕ್ರಮ ನಡೆಸಲಾಯಿತು.
ಶಾಲಾ ಮುಖ್ಯ ಶಿಕ್ಷಕ ಮಮತಾ ಅಧ್ಯಕ್ಷತೆ ವಹಿಸಿದ್ದರು. ಜನಜಾಗೃತಿ ವಲಯ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಮಕ್ಕಳಿಗೆ ಮಾದಕ ವಸ್ತುಗಳಿಂದ ದೂರವಿದ್ದು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ನಾವು ಬಾಳುವ ಎಂದು ಹಿತವಚನಗಳನ್ನು ನೀಡಿದರು. ಚಿರಾಯು ಕ್ಲಿನಿಕ್ ವೈದ್ಯಾಧಿಕಾರಿ ಮುರಳಿಕೃಷ್ಣ ರೈ ಸಂಪನ್ಮೂಲ ವ್ಯಕ್ತಿಯಾಗಿ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯದ ಮೇಲಿನ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಸುಖದ ನೆಮ್ಮದಿಯ ಜೀವನಕ್ಕೆ ನಾವು ಮಾದಕ ವಸ್ತುಗಳಿಂದ ದೂರವಿರುವುದು ಅವಶ್ಯಕ. ಮಾದಕ ವಸ್ತುಗಳ ಸೇವನೆಯಿಂದ ನಮ್ಮನ್ನು ನಾವು ಕಳೆದುಕೊಳ್ಳಬೇಕಾಗುತ್ತದೆ. ಜೊತೆಗೆ ಸಮಾಜದಲ್ಲಿ ನಾವು ಭಾಧಕರಾಗಿ ಇರಬೇಕಾಗುತ್ತದೆ. ಆದ್ದರಿಂದ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಮಕ್ಕಳಾದ ನಾವೆಲ್ಲರೂ ಪಣತೊಡಬೇಕು.
ಆದ್ದರಿಂದ ಮಾದಕ ವಸ್ತುಗಳ ಸೇವನೆಯನ್ನು ಮಾಡುವುದು ಮತ್ತು ಮಾರುವಲ್ಲಿ ನಾವು ನಿರ್ಬಂಧಗಳನ್ನು ಹೇರುವಲ್ಲಿ ಕಂಕಣಬದ್ಧರಾಗೋಣ ಎಂದು ತಿಳಿಸಿದರು. ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯದ ಮೇಲಿನ ಪರಿಣಾಮಗಳ ಬಗ್ಗೆ ವಿಡಿಯೋಗಳನ್ನು ಪ್ರದರ್ಶಿಸಲಾಯಿತು. ಮಕ್ಕಳಿಗೆ ಮಾದಕ ವಸ್ತುಗಳಿಂದ ದೂರವಿರುವ ಬಗ್ಗೆ ಪ್ರತಿಜ್ಞೆ ಮಾಡಿಸಲಾಯಿತು, ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಮನ್ವಯ ಅಧಿಕಾರಿ ಅಶ್ವಿನಿ, ಮೇಲ್ವಿಚಾರಕಿ ಸುನೀತ, ಸೇವಾ ಪ್ರತಿನಿಧಿ ಶಶಿಕಲಾ ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದ್ದರು.