ಪುತ್ತೂರು: ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯು ನಡೆಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದ ಮುಖ್ಯಸ್ಥ ಡಾ.ಬಾಲಕೃಷ್ಣ ಶೆಟ್ಟಿಯವರು ಯೋಗ ದಿನಾಚರಣೆಯ ಸಂದೇಶ ನೀಡುತ್ತಾ “ಈ ಬಾರಿಯ ಘೋಷವಾಕ್ಯ ಮಾನವೀಯತೆಗಾಗಿ ಯೋಗ. ಯೋಗಾಭ್ಯಾಸವು ವ್ಯಕ್ತಿಯ ಮಾನವೀಯ ಮೌಲ್ಯಗಳನ್ನು ಬೆಳೆಸುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಮನಸ್ಸನ್ನು ವಿಚಲಿತಮಾಡುವಂಥಹ ಅನೇಕ ವಿಷಯಗಳು, ಗೊಂದಲಕ್ಕೀಡುಮಾಡುವ ವಿಷಯಗಳು ಅವರ ಮಾನಸಿಕ ಸ್ವಾಸ್ಥ್ಯವನ್ನು ಕೆಡಿಸುತ್ತದೆ. ಹಾಗಾಗಿ ಸ್ವಸ್ಥ ಮನಸ್ಸು ಮತ್ತು ಉತ್ತಮ ಆರೋಗ್ಯಕ್ಕಾಗಿ ಯೋಗ, ಪ್ರಾಣಾಯಾಮದ ಅಭ್ಯಾಸವು ಅನಿವಾರ್ಯವಾಗಿದೆ” ಎಂದು ಹೇಳಿ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳನ್ನು ಹೇಳಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದ ಡಾ.ಕೆ ಆರ್ ಪಾಟೀಲ್ ಯೋಗಾಸನ ಮಾಡುವ ಸೂಚನೆಗಳನ್ನು ನೀಡಿ, ನಿರ್ವಹಿಸಿದರು. ಯೋಗಾಸನದ ಪ್ರಾತ್ಯಕ್ಷಿತೆಯನ್ನು ವೀರಣ್ಣ ಗೌಡ ಪ್ರಸ್ತುತಪಡಿಸಿದರು.
ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದ ಡಾ. ಗೀತ ಶೆಟ್ಟಿ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ ಇದರ ಕಾರ್ಯದರ್ಶಿ ರಾಧಾಕೃಷ್ಣ ಕೂವೆಚ್ಚಾರು, ಸದಸ್ಯರಾದ ಶ್ರೀ ಲಕ್ಷ್ಮೀನಾರಾಯಣ ಆತೂರು, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಗುರುಗಳಾದ ಸತೀಶ್ ಭಟ್, ರಾಮಕುಂಜ ಪಂಚಾಯತ್ ಅಧ್ಯಕ್ಷೆ ಮಾಲತಿ, ವಿದ್ಯಾಸಂಸ್ಥೆಗಳ ಅಧ್ಯಾಪಕ ವರ್ಗ, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕೆ ಸ್ವಾಗತಿಸಿದರು. ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲ ಗಣರಾಜ ಕುಂಬ್ಳೆಯವರು ಧನ್ಯವಾದ ಸಮರ್ಪಿಸಿದರು.