ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಶಿಕ್ಷಕ-ರಕ್ಷಕ ಸಂಘದ ಸಭೆಯು ಶಾಲಾ ಸಭಾಂಗಣದಲ್ಲಿ ಜರುಗಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಸೇಸಪ್ಪ ರೈಯವರು ಸಂಸ್ಥೆಯ ಶೈಕ್ಷಣಿಕ ಪ್ರಗತಿ ಹಾಗೂ ಪ್ರಸಕ್ತ ವರ್ಷದ ಯೋಜನೆಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಗೋಪಾಲ ಶೆಟ್ಟಿ ಕಳೆಂಜರವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಹೆತ್ತವರ ಜವಾಬ್ದಾರಿಯನ್ನು ತಿಳಿಸಿದರು. ಪ್ರಸಕ್ತ ವರ್ಷದ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಶಾಲಾ ಆಡಳಿತಾಧಿಕಾರಿ ಆನಂದ್ ಎಸ್.ಟಿ. ಯವರು ತಿಳಿಸಿದರು. ಸಂಸ್ಥೆಯಲ್ಲಿ ವಿಶೇಷವಾಗಿ ಪ್ರಾರಂಭಿಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಮಾಹಿತಿಯನ್ನು ಜಯೇಂದ್ರರವರು ತಿಳಿಸಿದರು. ಸಭೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಶಿಕ್ಷಕ-ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಬಿ.ಎಲ್.ಜನಾರ್ದನ ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ಇಂದುಶೇಖರ್ ಶೆಟ್ಟಿ ಕುಕ್ಕೇರಿ ಆಯ್ಕೆಯಾದರು. ವಿಜಯ ಕರ್ನಾಟಕ ಪತ್ರಿಕೆಯವರು ಏರ್ಪಡಿಸಿದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತ ವಂದಿಸಿ, ಸಹಶಿಕ್ಷಕ ಹರೀಶ್ ಕಾರ್ಯಕ್ರಮ ನಿರೂಪಿಸಿದರು.