- ಬಕ್ರೀದ್ ಸಲುವಾಗಿ ಪುತ್ತೂರು ಪೊಲೀಸ್ ಠಾಣೆಯಲ್ಲಿ ನಾಗರಿಕ ಶಾಂತಿ ಸಭೆ
ಪುತ್ತೂರು: ಯುವ ಜನತೆಯನ್ನು ಮಾದಕ ವಸ್ತುಗಳ ಸೇವನೆಗೆ ಪ್ರಚೋದಿಸುವ ಅಥವಾ ಮಾದಕ ವಸ್ತುಗಳನ್ನು ಬಳಸುತ್ತಿರುವವರ ವಿವರಗಳನ್ನು ಸಮೀಪದ ಪೋಲಿಸ್ ಠಾಣೆಗಳಿಗೆ ನೀಡುವ ಮೂಲಕ ದುಶ್ಚಟಗಳಿಗೆ ಬಲಿಯಾಗುತ್ತಿರುವವರನ್ನು ಸಂರಕ್ಷಿಸಲು ಸಹಕರಿಸಬೇಕು ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಸಲುವಾಗಿ ನಡೆದ ನಾಗರಿಕ ಶಾಂತಿ ಸಭೆಯಲ್ಲಿ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ.
ಜು.7ರಂದು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ನಗರ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ವಿವಿಧ ಧರ್ಮದ ಸಂಘಟನೆ ಮತ್ತು ಧಾರ್ಮಿಕ ಮುಖಂಡರ ನಾಗರಿಕ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಹಲವು ಘಟನೆಗಳಿಗೆ ಮಾದಕ ವಸ್ತು ಸೇವನೆಯೇ ಪ್ರಮುಖ ಕಾರಣವಾಗಿದೆ. ಈ ನಿಟ್ಟಿನಲ್ಲಿ ಮಾದಕ ವಸ್ತು ನಿಯಂತ್ರಣ ಮಾಡಬೇಕಾಗಿದೆ ಎಂದ ಅವರು ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಬೆಳಿಗ್ಗೆ ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಧ್ವನಿ ವರ್ಧಕ ಬಳಕೆಗೆ ಅನುಮತಿ ನೀಡಲಾಗಿದೆ. ಆದರೆ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆ ವರೆಗೆ ಅವಕಾಶ ಇರುವುದಿಲ್ಲ. ಸರ್ಕಾರದ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಇದುವರೆಗೆ ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯದವರು ಕೂಡಲೇ ಅನುಮತಿ ಪಡೆಯಬೇಕು. ಈ ಭಾರಿಯು ಪ್ರತಿ ವರ್ಷದಂತೆ ಬಕ್ರೀದ್ ಹಬ್ಬ ಶಾಂತಿಯುತವಾಗಿ ನಡೆಯಲಿ ಎಂದರು. ಅಕ್ರಮ ಗೋ ಸಾಗಾಟ ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.
ಹೊಗೆಬತ್ತಿ ಸೇವನೆಯಲ್ಲಿ ಮಾದಕ ವಸ್ತು: ಹೊಗೆಬತ್ತಿ ಸೇವನೆಯಲ್ಲಿ ಮಾದಕ ವಸ್ತು ಬಳಸಲಾಗುತ್ತಿದೆ ಎಂಬ ಮಾಹಿತಿ ಇದೆ. ಈ ಕುರಿತು ಪೊಲೀಸರು ತನಿಖೆ ನಡೆಸಬೇಕೆಂದು ಸಭೆಯಲ್ಲಿ ಪ್ರಸ್ತಾಪವಾಯಿತು. ಉತ್ತರಿಸಿದ ಪೊಲೀಸರು ಈ ಕುರಿತು ಅಂಗಡಿಗಳಲ್ಲಿ ಪರಿಶೀಲನೆ ಮಾಡಲಾಗುವುದು ಎಂದರು. ಎಸ್.ಐ ರಾಜೇಶ್ ಕೆ.ವಿ. ಉಪಸ್ಥಿತರಿದ್ದರು. ಹಿಂದೂ ಸಂಘಟನೆಗಳ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಪುರುಷೋತ್ತಮ ಮುಂಗ್ಲಿಮನೆ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳಿಕೃಷ್ಣ ಹಸಂತಡ್ಕ, ಎಲ್.ಟಿ.ರಜಾಕ್, ಯಾಕೂಬ್ ಖಾನ್, ಸಾಗರ್ ಇಬ್ರಾಹಿಂ, ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಪುತ್ತೂರು ಮಾಯಿದೆ ದೇವುಸ್ ಚರ್ಚ್ ಧರ್ಮಗುರು ಕೆವಿನ್ ಡಿ’ಸೋಜ, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಮೌರೀಸ್ ಮಸ್ಕರೇನಸ್ ಮತ್ತಿತರರು ಉಪಸ್ಥಿತರಿದ್ದರು.