`ಮಳೆ ಹಾನಿ ಸಂಬಂಧ ಸುರಕ್ಷತಾ ಕ್ರಮ ಕೈಗೊಳ್ಳಿ’-ವೀಡಿಯೋ ಸಂವಾದದಲ್ಲಿ ಡಿಸಿ, ಎಸ್ಪಿಗೆ ಸಿಎಂ ಸೂಚನೆ

0

  • ಹಾನಿಯಾದ ಮನೆಗಳಿಗೆ ತುರ್ತು ಪರಿಹಾರ ನೀಡಿ
  • ರಸ್ತೆ, ಸೇತುವೆ,ವಿದ್ಯುತ್ ಸಹಿತ ಮೂಲಭೂತ ಸೌಕರ್ಯ ದುರಸ್ತಿಗೆ ಆದ್ಯತೆ
  • ಮುನ್ನೆಚ್ಚರಿಕೆ, ರಕ್ಷಣಾ ಕಾರ್ಯಗಳಿಗೆ ಸನ್ನದ್ಧ
  • ಗ್ರಾ.ಪಂ.ಮಟ್ಟದಲ್ಲಿ ಟಾಸ್ಕ್ಫೋರ್ಸ್

ಮಂಗಳೂರು:ಮಳೆಯಿಂದ ಹಾನೀಗೀಡಾದ ಮನೆಗಳಿಗೆ ತುರ್ತು ಪರಿಹಾರವಾಗಿ 10ಸಾವಿರ ರೂ.ಗಳನ್ನು ನೀಡಬೇಕು, ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಹಾನಿಗೊಳಗಾಗಿರುವ ಮನೆಗಳ ನಿರ್ಮಾಣಕ್ಕೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.


ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಲ್ಲಿನ ಸ್ಥಿತಿಗತಿ ಹಾಗೂ ಪರಿಹಾರ ಕಾರ್ಯಗಳ ಕುರಿತಂತೆ ದೇವನಹಳ್ಳಿಯ ಬಳಿಯಿರುವ ಖಾಸಗಿ ಹೊಟೇಲ್‌ನಿಂದ ದಕ್ಷಿಣ ಕನ್ನಡ ಸಹಿತ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಹಿತ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಅವರು ಶುಕ್ರವಾರ ವೀಡಿಯೋ ಸಂವಾದ ನಡೆಸಿ ಮಾತನಾಡಿದರು.

ಮಳೆಯಿಂದ ಹಾನಿಯಾಗಿರುವ ರಸ್ತೆ, ಸೇತುವೆ, ವಿದ್ಯುತ್ ಮತ್ತಿತರ ಮೂಲಭೂತ ಸೌಕರ್ಯ, ದುರಸ್ತಿಗೆ ಆದ್ಯತೆ ನೀಡಬೇಕು.ಪ್ರವಾಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಒದಗಿಸಬೇಕು ಎಂದೂ ಮುಖ್ಯಮಂತ್ರಿ ಸೂಚಿಸಿದರು.ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ., ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ ವೀಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.

ಬೆಳೆ ಹಾನಿ, ರಸ್ತೆ, ಮನೆಗಳ ಹಾನಿ ಬಗ್ಗೆ ಸರಿಯಾದ ಸಮೀಕ್ಷೆ ನಡೆಸಬೇಕು.ಜಿಲ್ಲೆಗಳಲ್ಲಿ ಮುಂದಿನ 5-6 ದಿನಗಳ ಮಳೆ ಮುನ್ಸೂಚನೆಯನ್ನು ಗಮನಿಸಬೇಕು.ಮುನ್ನೆಚ್ಚರಿಕಾ ಕ್ರಮಗಳ ಜೊತೆಗೆ ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಸನ್ನದ್ಧರಾಗಬೇಕು.ಪರಿಹಾರ ಕಾರ್ಯಗಳು ತ್ವರಿತ ಹಾಗೂ ಪಾರದರ್ಶಕವಾಗಿರಬೇಕು. ರಸ್ತೆ ಸಂಪರ್ಕ, ವಿದ್ಯುತ್ ಕಂಬಗಳು ಹಾಗೂ ಕುಡಿಯುವ ನೀರಿನ ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.

ಭೂ ಕುಸಿತದ ಸಾಧ್ಯತೆಗಳುಳ್ಳ ಪ್ರದೇಶಗಳಲ್ಲಿ ರಸ್ತೆಗಳನ್ನು ತೆರವುಗೊಳಿಸಬೇಕು.ದುರ್ಬಲ ಪ್ರದೇಶಗಳ ಸಮೀಕ್ಷೆ ಕಾರ್ಯ ಕೈಗೊಳ್ಳಲು ತಂಡಗಳನ್ನು ನಿಯೋಜಿಸಬೇಕು. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಕ್ಕೆ ಕ್ರಮ ವಹಿಸಬೇಕು.ಗ್ರಾ.ಪಂ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಬೇಕು. ಸಮಿತಿಯು ಸಮೀಕ್ಷೆ ಕೈಗೊಂಡು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ನಿಯಂತ್ರಣಾ ಕೊಠಡಿಗಳು ಮಳೆ ಹಾಗೂ ಪ್ರವಾಹ ಸ್ಥಿತಿಯ ಕುರಿತು ಅಹವಾಲುಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಂಬಂಧಿಕರ ಮನೆಗಳಿಗೆ ತೆರಳಿರುವ ಸಂತ್ರಸ್ತರಿಗೆ ಪಡಿತರ ಕಿಟ್‌ನ್ನು ಕಂದಾಯ ಇಲಾಖೆ ನೀಡುವ ಪಟ್ಟಿಯಂತೆ ಒದಗಿಸಬೇಕು.ಹಾನಿಯಾಗಿರುವ ರಸ್ತೆ, ಸೇತುವೆಗಳನ್ನು ಜಿಲ್ಲಾಡಳಿತವು ತಾತ್ಕಾಲಿಕವಾಗಿ ಸರಿಪಡಿಸಿ, ಶಾಶ್ವತ ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸಬೇಕು.ಪ್ರಕೃತಿ ವಿಕೋಪ ಪರಿಹಾರದಡಿ ಕೈಗೊಂಡಿರುವ ಮನೆಗಳ ನಿರ್ಮಾಣ ಕಾರ್ಯವನ್ನು ಜಿಲ್ಲಾಧಿಕಾರಿ ಪರಿಶೀಲಿಸಬೇಕು.ಮೂರು ವರ್ಷಗಳ ಅವಧಿಯ ಮನೆಗಳ ನಿರ್ಮಾಣ ಕಾರ್ಯ ಹಾಗೂ ಅವುಗಳನ್ನು ಪೂರ್ಣಗೊಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ವಿಸ್ತತ ವರದಿ ಸಲ್ಲಿಸಬೇಕು.ಬೆಳೆ ಹಾನಿ ಕುರಿತು ತನಿಖೆ ಕೈಗೊಂಡು ಒಂದು ತಿಂಗಳೊಳಗೆ ಸಬ್ಸಿಡಿ ವಿತರಿಸಬೇಕು ಎಂದರಲ್ಲದೆ, ಕಾಳಜಿ ಕೇಂದ್ರಗಳಲ್ಲಿರುವ ಸಂತ್ರಸ್ತರಿಗೆ ಸರಕಾರಿ ಆದೇಶದಲ್ಲಿ ನೀಡಿರುವ ಆಹಾರ ಪಟ್ಟಿಯನ್ನು ಅನುಸರಿಸಲು ನಿರ್ದೇಶನ ನೀಡಿದರು.

ಕಂದಾಯ ಸಚಿವ ಆರ್.ಅಶೋಕ್, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ವಿಪತ್ತು ಪರಿಹಾರ ಘಟಕದ ಡಾ.ಮನೋಜ್ ವೀಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.

ಯೆಲ್ಲೋ ಅಲರ್ಟ್

ಕರಾವಳಿಯಲ್ಲಿ ಜು.16 ಮುಂಜಾನೆಯವರೆಗೆ ಆರೆಂಜ್ ಅಲರ್ಟ್, ಬಳಿಕ ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರದಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಿಲ್ಲೆಯಲ್ಲಿ 82 ಮನೆಗಳು ಸಂಪೂರ್ಣ ಹಾನಿ
ದ.ಕ ಜಿಲ್ಲೆಯಲ್ಲಿ ಜು.15ರಂದು 2 ಮನೆಗಳು ಸಂಪೂರ್ಣ ಮತ್ತು 14 ಮನೆಗಳು ಭಾಗಶಃ ಹಾನಿಗೀಡಾಗಿವೆ.ಒಟ್ಟಾರೆ ಈವರೆಗೆ 82 ಮನೆಗಳು ಸಂಪೂರ್ಣ ಮತ್ತು 495 ಮನೆಗಳಿಗೆ ಭಾಗಶಃ ಹಾನಿಯಾಗಿವೆ.ಮೂಡುಬಿದಿರೆಯ 2.34 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆಗಳು ಹಾನಿಗೀಡಾಗಿವೆ. ಮೆಸ್ಕಾಂಗೆ ಸಂಬಂಧಿಸಿದಂತೆ 196 ವಿದ್ಯುತ್ ಕಂಬಗಳು, 3ಟ್ರಾನ್ಸ್ ಫಾರ್ಮರ್, 9.44 ಕಿ.ಮೀ. ವಿದ್ಯುತ್ ತಂತಿಗಳು ಹಾನಿಗೀಡಾಗಿವೆ. ಇದರೊಂದಿಗೆ 3,368 ವಿದ್ಯುತ್ ಕಂಬಗಳು ಮತ್ತು 231 ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿಯಾಗಿದೆ. ಅಲ್ಲದೆ 3.06 ಕಿ.ಮೀ. ಜಿಲ್ಲಾ ಮುಖ್ಯರಸ್ತೆಗೆ ಹಾನಿಯಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

 44ಮಿ.ಮೀ. ಮಳೆ
ಜು.14 ಬೆಳಗ್ಗಿನಿಂದ ಜು.15 ಬೆಳಗ್ಗಿನವರೆಗೆ ಪುತ್ತೂರು 19.8 ಮಿ.ಮೀ.,ಕಡಬದಲ್ಲಿ 32.8 ಮಿ.ಮೀ., ಬೆಳ್ತಂಗಡಿ 69.8 ಮಿ.ಮೀ., ಬಂಟ್ವಾಳ 13.1 ಮಿ.ಮೀ, ಮಂಗಳೂರು 14.9 ಮಿ.ಮೀ., ಸುಳ್ಯ 35.9 ಮಿ.ಮೀ ಹಾಗೂ ಮೂಡುಬಿದಿರೆಯಲ್ಲಿ 34.1 ಮಿ.ಮೀ. ಸಹಿತ ಸರಾಸರಿ 44 ಮಿ.ಮೀ. ಮಳೆಯಾಗಿದೆ.

LEAVE A REPLY

Please enter your comment!
Please enter your name here