ಬೆಳ್ಳಾರೆಯಲ್ಲಿ ಚಿಕನ್ ಸೆಂಟರ್ ಮಾಲಕ ಪ್ರವೀಣ್ ನೆಟ್ಟಾರು ದುಷ್ಕರ್ಮಿಗಳ ದಾಳಿಗೆ ಬಲಿ

0

ಬೆಳ್ಳಾರೆಯಲ್ಲಿರುವ ಅಕ್ಷಯ ಚಿಕನ್ ಸೆಂಟರ್ ಮಾಲಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಎಂಬವರ ಮೇಲೆ ದುಷ್ಕರ್ಮಿಗಳಿಬ್ಬರು ಕತ್ತಿಯಿಂದ ಕಡಿದ ಪರಿಣಾಮ ತೀವ್ರ ಗಾಯಗೊಂಡಿರುವ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಜು.26ರಂದು ರಾತ್ರಿ ಈ ಘಟನೆ ನಡೆದಿದೆ.ಪ್ರವೀಣ್‌ರವರು ತನ್ನ ಅಂಗಡಿಯಲ್ಲಿ ಕುಳಿತುಕೊಂಡಿದ್ದ ವೇಳೆ ಕೆಎಲ್ ನಂಬರಿನ ಬೈಕ್‌ನಲ್ಲಿ ಬಂದಿದ್ದ ಈರ್ವರು ದುಷ್ಕರ್ಮಿಗಳು ಅಲ್ಲಿಗೆ ಬಂದಿದ್ದರು.ಇದನ್ನು ಗಮನಿಸಿದ ಪ್ರವೀಣ್‌ರವರು ತಪ್ಪಿಸಿಕೊಳ್ಳಲೆಂದು ಪಕ್ಕದ ಅಂಗಡಿಗೆ ಹೋಗುತ್ತಿದ್ದ ವೇಳೆಯೇ ಹಿಂದಿನಿಂದ ಬಂದು ಅವರ ತಲೆಗೆ ತಲವಾರಿನಿಂದ ಕಡಿದು ಪರಾರಿಯಾಗಿದ್ದಾರೆ.ಇದರಿಂದಾಗಿ ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರವೀಣ್‌ರವರನ್ನು ಕೂಡಲೇ ಅಲ್ಲಿಂದ ಪುತ್ತೂರಿನ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಗೆಂದು ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಈ ಘಟನೆ ಯಾಕಾಗಿ ನಡೆಯಿತು ಎಂಬುದು ನಿಗೂಢವಾಗಿದೆಯಾದರೂ ಕೆಲ ದಿನಗಳ ಹಿಂದೆ ಕಳೆಂಜ ವಿಷ್ಣುನಗರದಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ಈ ಕೃತ್ಯ ಎಸಗಲಾಗಿದೆ ಎಂದು ಸುದ್ದಿ ಹರಡಿದೆ.ಘಟನೆಯಿಂದಾಗಿ ಬೆಳ್ಳಾರೆಯಲ್ಲಿ ತುಸು ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು ಈಗಾಗಲೇ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಪುತ್ತೂರಿನಲ್ಲಿ ಅಂಗಡಿ ಬಂದ್ ಮಾಡಿಸಿದ ಪೊಲೀಸರು:
ಈ ಘಟನೆ ಬೆನ್ನಲ್ಲೇ ಪೊಲೀಸರು ಪುತ್ತೂರು ಪೇಟೆಯಲ್ಲಿನ ಅಂಗಡಿ, ಹೊಟೇಲ್ ಮಳಿಗೆಗಳನ್ನು ರಾತ್ರಿ ವೇಳೆ ಅವಧಿಗೆ ಮೊದಲೇ ಬಂದ್ ಮಾಡಿಸಿದ ಘಟನೆ ನಡೆದಿದೆ.ಪೊಲೀಸರ ಈ ಕ್ರಮಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here