ಪುತ್ತೂರು ಉಪವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ – ಎಸಿ ಆದೇಶ

0

ಪುತ್ತೂರು: ಪ್ರವೀಣ್ ನೆಟ್ಟಾರು ಅವರ ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಿಂದ ಅವರ ಬೆಳ್ಳಾರೆ ಮನೆಗೆ ಕೊಂಡು ಹೋಗುವ ಸಂದರ್ಭ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಆದೇಶ ಹೊರಡಿಸಿದ್ದಾರೆ.

ಪುತ್ತೂರು ನಗರ ಠಾಣಾ ವ್ಯಾಪ್ತಿಯ ಲಿನೆಟ್ ಜಂಕ್ಷನ್ ಬಳಿ ಬಸ್ಸೊಂದಕ್ಕೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದ್ದು, ಇದರಿಂದ ಮುಂದೆ ಘರ್ಷಣೆ ನಡೆಯುವ ಸಾಧ್ಯತೆ ಇರುವ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದು ಕೊಂಡು ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪುತ್ತೂರು ತಾಲೂಕು, ಸುಳ್ಯ ತಾಲೂಕು, ಕಡಬ ತಾಲೂಕು ವ್ಯಾಪ್ತಿಯಲ್ಲಿ ಮುಂಜಾಗ್ರತ ಕ್ರಮವಾಗಿ ಕಲಂ144 ಸಿ.ಆರ್.ಪಿ.ಸಿ ಯಡಿ ನಿಷೇಧಾಜ್ಞೆ ಜಾರಿಗೊಳಿಸುವಂತೆ ಪೊಲೀಸ್ ಉಪಾಧೀಕ್ಷಕರು ಕೋರಿರುವಂತೆ ಪುತ್ತೂರು ಉಪವಿಭಾಗಾಧಿಕಾರಿಯವರು ಜು.27 ರ ಪೂರ್ವಾಹ್ನ ಗಂಟೆ 6ರಿಂದ ಜು.28ರ ಮಧ್ಯರಾತ್ರಿ ಗಂಟೆ 12  ಗಂಟೆಯ ತನಕ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ.

ನಿಷೇಧಾಜ್ಞೆಯ ಅವಧಿಯಲ್ಲಿ …………

ಪುತ್ತೂರು ಉಪವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರಕಾರಿ ಕಚೇರಿ ಸುತ್ತಮುತ್ತ ಗುಂಪು ಸೇರಬಾರದು ಅಥವಾ ಗುಂಪು ಸೇರುವುದನ್ನು ನಿಷೇಧಿಸಿದೆ.

ಯಾವುದೇ ಆಯುಧ, ಕೂಡುಗೋಲು, ಖಡ್ಗ, ಭರ್ಚಿ, ಗದೆ, ಕೋಲು, ಚೂರಿ, ದೊಣ್ಣೆ ಅಥವಾ ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ನಾವುದೇ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ. ಯಾವುದೇ ಸಾರ್ವಜನಿಕ ಮೆರವಣಿಗೆ, ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಡೆಸಬಾರದು.

ಯಾವುದೇ ಕ್ಷಾರಕಾ ಅಥವಾ ಸ್ಪೋಟಕ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ. ಕಲ್ಲುಗಳನ್ನು ಒಟ್ಟುಗೂಡಿಸುವುದು, ಆಯುಧಗಳನ್ನು ಉಪಯೋಗಿಸುವುದು ನಿಷೇಧಿಸಿದೆ.

ಸಾರ್ವಜನಿಕ ಕೋಮು ಸೌಹಾರ್ದಕ್ಕೆ ಧಕ್ಕೆ ಬರುವಂತಹ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೇಷ್ಠೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಮಾಡುವುದು, ಪತ್ರಿಕೆಗಳ ಪ್ರಕಟಣೆ ಮಾಡುವುದು ಅಥವಾ ವಸ್ತುಗಳ ಪ್ರದರ್ಶನ, ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವ ಮತ್ತು ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.

ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ: ಪುತ್ತೂರಿನಲ್ಲಿ 144 ಸೆಕ್ಷನ್ ಜಾರಿ

LEAVE A REPLY

Please enter your comment!
Please enter your name here