ಪುತ್ತೂರು:ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸರಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜು.28ರಂದು ರಾಜ್ಯ ಬಿಜೆಪಿ ಆಯೋಜಿಸಿದ್ದ ‘ಜನೋತ್ಸವ ಸಮಾವೇಶ’ ಕಾರ್ಯಕ್ರಮವನ್ನು ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ರದ್ದುಗೊಳಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಜನಪರ ಕೆಲಸ ಮಾಡಿರುವ ಆತ್ಮವಿಶ್ವಾಸ ಜನರಲ್ಲಿ ಮೂಡಿ, ಬರುವಂತಹ ದಿನಗಳಲ್ಲಿ ಒಂದಷ್ಟು ಭರವಸೆ, ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಸರಕಾರ ಒಂದು ವರ್ಷ ಪೂರೈಸಿರುವ ಸಂಭ್ರಮದಲ್ಲಿ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಸಮಾವೇಶ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಪಡಿಸಲಾಗಿದೆ. ಜೊತೆಗೆ ಜು.28ರಂದು ವಿಧಾನ ಸೌಧದಲ್ಲಿ ನಡೆಯಲಿರುವ ಎಲ್ಲ ಸರಕಾರಿ ಕಾರ್ಯಕ್ರಮಗಳನ್ನೂ ಮುಂದೂಡಿರುವುದಾಗಿ ಸಿಎಂ ಹೇಳಿದ್ದಾರೆ. ಪ್ರವೀಣ್ ಹತ್ಯೆ ಘಟನೆಯಿಂದ ಬಹಳಷ್ಟು ನೋವಾಗಿದೆ.ಮೃತ ಹುಡುಗನ ತಾಯಿಯ ಆಕ್ರಂದನ ಅರ್ಥಮಾಡಿಕೊಂಡು ಸಮಾವೇಶ ರದ್ದುಪಡಿಸಲಾಗಿದೆ.ಜು.26ರ ರಾತ್ರಿ ವಿಷಯ ತಿಳಿದ ತಕ್ಷಣ ಪೊಲೀಸ್ ಅಽಕಾರಿಗಳೊಂದಿಗೆ ಮಾತನಾಡಿದ್ದೆ.ನಮ್ಮ ಅಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ಅಲ್ಲಿಗೆ ಹೋಗಿ ಸಾಂತ್ವನ ಹೇಳುವ ಕೆಲಸ ಮಾಡಿದ್ದಾರೆ ಎಂದು ಸಿಎಂ ಹೇಳಿದ್ದಾರೆ.ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಡಾ.ಸುಧಾಕರ್ ಉಪಸ್ಥಿತರಿದ್ದರು.