ಪುತ್ತೂರು; ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ‘ವ್ಯಸನ ಮುಕ್ತ ದಿನಾಚರಣೆ’ ಆ.೧ರಂದು ತಹಶೀಲ್ದಾರ್ ಸಭಾಂಗಣದಲ್ಲಿ ನಡೆಯಿತು.
ದೀಪಬೆಳಗಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವ ಸಮಾಜವು ಮದ್ಯಪಾನ ಮೊದಲಾದ ದುಶ್ಚಟಗಳಿಗೆ ಬಳಿಯಾಗುತ್ತಿದೆ. ಇದರ ಕುರಿತು ಪೋಷಕರಿಗೆ ಸರಿಯಾದ ಮಾಹಿತಿಯೇ ಇರುವುದಿಲ್ಲ. ಈಗಿನ ವಿದ್ಯಾರ್ಥಿಗಳಿಗೆ ಹಿಂದಿನಂತೆ ಕಷ್ಟದ ದಿನಗಳಲ್ಲ. ಈಗ ವಿದ್ಯಾರ್ಥಿಗಳಿಗೆ ಸಾಕಷ್ಟು ಕಾಲಾವಕಾಶಗಳು ದೊರೆಯುತ್ತಿದ್ದು ಅವರನ್ನು ಬೇರೆ ಬೇರೆ ಕಾರ್ಯಗಳಿಗೆ ಕೊಂಡೋಯ್ಯುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನವನ್ನೇ ಕಳೆದುಕೊಂಡವರಿದ್ದಾರೆ. ದುಶ್ಚಟಗಳಿಗೆ ಬಲಿಯಾದರೆ ಜೀವನದಲ್ಲೇ ಯಾವುದೇ ಗುರಿ ಸಾಧಿಸಲು ಸಾಧ್ಯವಿಲ್ಲ ಎಂದ ಅವರು ಜೀವನದ ಗುರಿಯನ್ನೇ ವ್ಯಸನ ಮುಖ್ತ ಸಮಾಜ ನಿರ್ಮಾಣದ ಗುರಿಯನ್ನು ಹೊಂದಿದ್ದರು. ಅವರ ಜನ್ಮದಿನವನ್ನು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದ್ದು ಪ್ರತಿಯೊಬ್ಬರು ಮಕ್ಕಳಿಗೆ ಜಾಗೃತಿ ಮೂಡಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ನಿಸರ್ಗಪ್ರೀಯ ಮಾತನಾಡಿ, ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವುದೇ ಮಹಾಂತ ಶಿವಯೋಗಿಗಳ ಆಶಯವಾಗಿತ್ತು. ಅದನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮೌಲ್ಯಯುತ ಜೀವನ ನಡೆಸಬೇಕು ಎಂದರು. ಗ್ರೇಡ್-೨ ತಹಶೀಲ್ದಾರ್ ಲೋಕೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಮಾಣ ವಚನ ಸ್ವೀಕಾರ:
ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕಾರ ನಡೆಯಿತು. ಸಹಾಯಕ ಆಯುಕ್ತ ಗಿರೀಶ್ ನಂದನ್ ಪ್ರಮಾಣವಚನ ಬೋಧಿಸಿದರು. ಅಧಿಕಾರಿ ಹಾಗೂ ಸಿಬಂದಿಗಳು ಪ್ರಮಾಣವಚನ ಸ್ವೀಕರಿಸಿದರು.
ತಾಲೂಕು ಕಚೇರಿ ದಯಾನಂದ ಸ್ವಾಗತಿಸಿದರು. ಉಪತಹಶೀಲ್ದಾರ್ ಸುಲೋಚನ ಪಿ.ಕೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.