ವಿಟ್ಲ: ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ದುಸ್ಥಿತಿ ವಿಚಾರವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (ಡಿಎಲ್ಎಸ್ಎ) ದಲ್ಲಿ ದೂರು ದಾಖಲಾಗಿದ್ದು, ಈ ಪ್ರಕರಣವನ್ನು ಪರಿಶೀಲಿಸುವಂತೆ ಬಂಟ್ವಾಳ ತಾಲೂಕು ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ.
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಜ್ಞ ವೈದ್ಯರು ಸೇರಿ ವಿವಿಧ ವಿಭಾಗಕ್ಕೆ ತಜ್ಞರ ಅಗತ್ಯವಿದೆ. ಜತೆಗೆ ವಿದ್ಯುತ್ ಕೈಕೊಟ್ಟರೆ ಜನರೇಟರ್ ವ್ಯವಸ್ಥೆಯಿಲ್ಲದೆ ಉಪಕರಣಗಳೆಲ್ಲವೂ ಸಂಪೂರ್ಣ ಸ್ಥಬ್ಧವಾಗುತ್ತಿದೆ. ಪುಣಚ ನಾಗರಿಕ ಹಿತರಕ್ಷಣಾ ವೇದಿಕೆ ಕಾರ್ಯದರ್ಶಿ ವೆಂಕಟ್ರಮಣ ಪುಣಚರವರು ಇಲ್ಲಿಗೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಅರೋಗ್ಯ ಇಲಾಖೆ ಅಽಕಾರಿಗಳಲ್ಲಿ ಕೇಳಿಕೊಂಡಿದ್ದರು. ಶಾಸಕ ಸಂಜೀವ ಮಠಂದೂರು ಅವರಿಗೆ ಪತ್ರ ಮೂಲಕವೂ ಬೇಡಿಕೆ ಸಲ್ಲಿಸಿದ್ದರು. ಹಲವು ಭಾರಿ ಜಿಲ್ಲಾ ಆರೋಗ್ಯ ಅಧಿಕಾರಿಗಳ ಗಮನಕ್ಕೂ ತಂದಿದ್ದರು. ಭರವಸೆಯ ಹೊರತಾಗಿ ಯಾವುದೇ ಕೆಲಸ ನಡೆಯಲಿಲ್ಲ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಪ್ರಕರಣವನ್ನು ಬಂಟ್ವಾಳದ ವ್ಯಾಪ್ತಿಯ ಹಿನ್ನೆಲೆಯಲ್ಲಿ ಅಲ್ಲಿಗೆ ವರ್ಗಾಯಿಸಿದ್ದು, ಅರ್ಜಿ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಂಡು ಅನುಪಾಲನಾ ವರದಿಯನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನೀಡುವಂತೆ ಸೂಚಿಸಿದೆ.