ಪುತ್ತೂರು: ಪುತ್ತೂರಿನಲ್ಲಿ ವ್ಯಕ್ತಿಯೊಬ್ಬರಿಂದ ನಗದು ದೋಚಿದ ಪ್ರಕರಣದದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬನ್ನೂರಿನಲ್ಲಿ ಬಂಧಿಸಿದ್ದಾರೆ.
ಉಪ್ಪಿನಂಗಡಿ ನಿನ್ನಿಕಲ್ಲು ನಿವಾಸಿ ಶರತ್ ಎಂಬವರು ಬಂಧಿತ ಆರೋಪಿ. ಶರತ್ ಅವರು 2016 ನೇ ಇಸವಿಯಲ್ಲಿ ಪುತ್ತೂರು ಪರಿಸರದಲ್ಲಿ ವ್ಯಕ್ತಿಯೊಬ್ಬರ ನಗದು ದೋಚಿದ ಪ್ರಕರಣದಲ್ಲಿ ಬಂಧಿತರಾಗಿದ್ದರು. ಬಳಿಕದ ಬೆಳವಣಿಗೆಯಲ್ಲಿ ಜಾಮಿನು ಪಡೆದ ಅವರು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ನ್ಯಾಯಾಲಯ ಆರೋಪಿ ಶರತ್ ಬಂಧನಕ್ಕೆ ವಾರಂಟ್ ಜಾರಿ ಮಾಡಿತ್ತು. ತನಿಖೆ ಕೈಗೆತ್ತಿಕೊಂಡ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಸುನಿಲ್ ಕುಮಾರ್ ಅವರ ಮಾರ್ಗದರ್ಶನದಂತೆ ಎ.ಎಸ್.ಐ ಚಂದ್ರ, ಹೆಡ್ ಕಾನ್ ಸ್ಟೇಬಲ್ ಪರಮೇಶ್ವರ ಮತ್ತು ಜಗದೀಶ್ ಅವರು ಆರೋಪಿಯನ್ನು ಬನ್ನೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.