ಆ.31-ಸೆ.1: ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಶ್ರೀಗಣೇಶೋತ್ಸವಕ್ಕೆ 40ರ ಸಂಭ್ರಮ

0

2 ದಿನಗಳ ಕಾಲ ಧಾರ್ಮಿಕ/ಸಾಂಸ್ಕೃತಿಕ ಕಾರ್ಯಕ್ರಮ | ಸಾರ್ವಜನಿಕ ಅನ್ನಸಂತರ್ಪಣೆ

ಪುತ್ತೂರು: ದರ್ಬೆ ವಿನಾಯಕ ನಗರದಲ್ಲಿ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಮಿತ್ರರಿಂದ ಪ್ರಾರಂಭಿಸಲ್ಪಟ್ಟ ಶ್ರೀ ಗಣೇಶೋತ್ಸವಕ್ಕೆ ಪ್ರಸ್ತುತ 40ನೇ ವರುಷದ ಸಂಭ್ರಮ. ಇದರ ಪ್ರಯುಕ್ತ ಸಂತ ಫಿಲೋಮಿನಾ ಹಿರಿಯ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಹಾಗೂ ಸಂತ ಫಿಲೋಮಿನಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಆ.31 ಹಾಗೂ ಸೆ.1 ರಂದು ಎರಡು ದಿನಗಳ ಕಾಲ ಅದ್ದೂರಿಯಾಗಿ ಆಚರಿಸಲಾಗುವುದು.

ಆ.31 ರಂದು ಬೆಳಿಗ್ಗೆ ಪರ್ಲಡ್ಕದಿಂದ ಶ್ರೀ ಗಣೇಶನ ವಿಗ್ರಹವನ್ನು ತಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೀಪ ಬೆಳಗಿಸಿ ಬಳಿಕ ಮುಖ್ಯರಸ್ತೆಯಾಗಿ ದರ್ಬೆ ವಿನಾಯಕ ನಗರದ ವಿನಾಯಕ ಮಂಟಪದಲ್ಲಿ ಶ್ರೀ ಗಣೇಶನ ವಿಗ್ರಹವನ್ನು ಪ್ರತಿಷ್ಟಾಪನೆಗೊಳಿಸಲಾಗುವುದು. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಪ್ರೀತಂ ಪುತ್ತೂರಾಯರವರ ನೇತೃತ್ವದಲ್ಲಿ ಗಣಹೋಮ, ಮಹಾಪೂಜೆ, ಪ್ರಸಾದ ವಿತರಣೆಯೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಜರಗಲಿರುವುದು. ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಸಂಜೀವ ಮಠಂದೂರುರವರು ವಹಿಸಿಕೊಳ್ಳಲಿರುವರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕಿ  ಶಕುಂತಳಾ ಟಿ.ಶೆಟ್ಟಿ, ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ಡಾ|ಆಂಟನಿ ಪ್ರಕಾಶ್ ಮೊಂತೇರೊ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅಶೋಕ್ ರಾಯನ್ ಕ್ರಾಸ್ತಾ, ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ಸ್ಟ್ಯಾನಿ ಪಿಂಟೋರವರು ಭಾಗವಹಿಸಲಿರುವರು.

ಸೆ.1-ಶೋಭಾಯಾತ್ರೆ:

ಸೆ.1 ರಂದು ಬೆಳಿಗ್ಗೆ ಗಣಹೋಮ, ಮಧ್ಯಾಹ್ನ ಮಹಾಪೂಜೆ ನಡೆಯಲಿದ್ದು, ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ. ಸಂಜೆ ಫಿಲೋ ಗಣಪತಿಯ ಅದ್ದೂರಿ ಶೋಭಾಯಾತ್ರೆಯು ಚೆಂಡೆ ವಾದ್ಯ ಹಾಗೂ ನಾಸಿಕ್ ಬ್ಯಾಂಡ್‌ನೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹಾರಾಡಿಯ ಬಾವಿಯಲ್ಲಿ ವಿಸರ್ಜನೆಗೊಳ್ಳಲಿದೆ. ಶೋಭಾಯಾತ್ರೆ ಬರುವ ದಾರಿಯಲ್ಲಿ ಹಣ್ಣುಕಾಯಿ ನೀಡಿ ಸಹಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಸಂತ ಫಿಲೋಮಿನಾ ಹಿರಿಯ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಮುಕ್ರಂಪಾಡಿ, ಕಾರ್ಯದರ್ಶಿ ಬೆಟ್ಟ ಪಿ.ಎಸ್ ನಾಗರಾಜ, ಕೋಶಾಧಿಕಾರಿ ದುರ್ಗಾಪ್ರಸಾದ್, ಟ್ರಸ್ಟಿಗಳಾದ ಡಾ.ಅಶೋಕ್ ಕುಮಾರ್ ರೈ, ಮಂಜುನಾಥ್ ಡಿ, ಸಿಎ ಅನಂತಪದ್ಮನಾಭ ಕೆ, ವಿಶ್ವಾಸ್ ಶೆಣೈ, ಶ್ರೀಧರ ಹೆಗ್ಡೆ, ಜನಾರ್ದನ ಎಸ್.ಭಟ್, ವೆಂಕಟಕೃಷ್ಣ ಎಂ.ಎನ್, ದಿನೇಶ್ ಪ್ರಸನ್ನ, ನಾಗೇಶ್ ಪೈ, ಶಿವಪ್ರಸಾದ್ ಎ, ದೇಲಂತಿಮಾರು ನಿತ್ಯಾನಂದ ಶೆಟ್ಟಿ, ಹರಿಣಿ ಪುತ್ತೂರಾಯ, ವೇಣುಗೋಪಾಲ್ ಪಿ.ಎಲ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಪ್ರಜ್ವಲ್ ಪಿ, ಉಪಾಧ್ಯಕ್ಷ ಅಮೃತ್ ರೈ, ಕಾರ್ಯದರ್ಶಿ ಪ್ರಖ್ಯಾತ್ ಟಿ.ಜೆ, ಜೊತೆ ಕಾರ್ಯದರ್ಶಿ ಸಾಯಿಲಿ ವಿ.ಸುವರ್ಣ ಹಾಗೂ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸನ್ಮಾನ..

ಪ್ರತಿ ವರ್ಷದಂತೆ ಈ ಬಾರಿಯೂ ಫಿಲೋಮಿನಾ ಕಾಲೇಜು, ಪಿಯು ಕಾಲೇಜು, ಸ್ನಾತಕೋತ್ತರ ವಿಭಾಗದಲ್ಲಿ ರ‍್ಯಾಂಕ್‌ಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹಾಗೂ ಮಂಗಳೂರು ವಿ.ವಿ ಮಟ್ಟದಲ್ಲಿ ಗಣನೀಯ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದೆ.

ಸ್ಪರ್ಧೆಗಳು/ರಕ್ತದಾನ..

ವರ್ಷಪ್ರತಿಯಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ರಕ್ತದಾನ ಶಿಬಿರ ಜರಗಲಿದೆ.

ಗಿರಿಗಿಟ್ ಗಿರಿಧರೆ ನಾಟಕ..

ಆ.31 ರಂದು ರಾತ್ರಿ ಸಭಾ ಕಾರ್ಯಕ್ರಮದ ಬಳಿಕ ರಂಗ್‌ದ ರಾಜೆ ಸುಂದರ್ ರೈ ಮಂದಾರ ಸಾರಥ್ಯದ ತುಳು ಹಾಸ್ಯಮಯ ನಾಟಕ ‘ಗಿರಿಗಿಟ್ ಗಿರಿಧರೆ’ ಪ್ರೇಕ್ಷಕರನ್ನು ಮನರಂಜಿಸಲಿದೆ.

LEAVE A REPLY

Please enter your comment!
Please enter your name here