‘ಕರ್ನಾಟಕದ ಜನತೆಯ ಪಲ್ಸ್ ಬಿಜೆಪಿ ಪರವಾಗಿಯೇ ಇದೆ’ – ಬಿಜೆಪಿ ಕೋರ್ ಕಮಿಟಿ ಸದಸ್ಯರ ಜತೆ ಪ್ರಧಾನಿ ಮೋದಿ ಮಾತುಕತೆ

0

ಮಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರು ಗೋಲ್ಡ್ ಫಿಂಚ್ ಮೈದಾನದಲ್ಲಿ ಸಮಾವೇಶ ಮುಗಿದ ಬಳಿಕ ಹೆಲಿಪ್ಯಾಡ್ ಬಳಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರ ಜತೆ ಅನೌಪಚಾರಿಕ ಮಾತುಕತೆ ನಡೆಸಿದರು.ಕಮಿಟಿ ಸದಸ್ಯರನ್ನು ಬಿಜೆಪಿ ರಾಜ್ಯಾಧ್ಯಕ್ಷ, ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಿ ಮೋದಿ ಅವರಿಗೆ ಪರಿಚಯಿಸಿದರು.

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಸದಸ್ಯರಿಂದ ವಿವರಣೆ ಪಡೆದ ಮೋದಿಯವರು, ಸರ್ಕಾರದ ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು.ಸರ್ಕಾರದ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕು. ವಿಭಾಗವಾರು, ಕಂದಾಯ ಜಿಲ್ಲಾವಾರು ನೀವು ಸಮಾವೇಶ ಆಯೋಜಿಸಿ.ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಾಧನೆಯನ್ನು ಜನರಿಗೆ ತಲುಪಿಸಿ.ಜನತೆಯ ನಾಡಿಮಿಡಿತ ಅರ್ಥಮಾಡಿಕೊಂಡು ಯೋಜನೆ ರೂಪಿಸಿ ಎಂದು ಮೋದಿಯವರು ಸಲಹೆ ನೀಡಿದರು ಎಂದು ತಿಳಿದು ಬಂದಿದೆ.

ಶಿಸ್ತು ಬದ್ಧ ಕಾರ್ಯಕ್ರಮ-ಮೆಚ್ಚುಗೆ:

ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆದ ಶಿಸ್ತುಬದ್ಧ ಕಾರ್ಯಕ್ರಮಕ್ಕೆ ಪ್ರಧಾನಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದು ಪ್ರತಿ ತಿಂಗಳೂ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ಬಿಜೆಪಿ ನಾಯಕರಿಗೆ ಭರವಸೆ ನೀಡಿದ್ದಾರೆ ಮಾತ್ರವಲ್ಲದೆ, ಕಾರ್ಯಕ್ರಮವನ್ನು ಶಿಸ್ತು ಬದ್ಧವಾಗಿ ಆಯೋಜಿಸಿದ್ದಕ್ಕೆ, ಕಾರ್ಯಕ್ರಮದ ಉಸ್ತುವಾರಿ ಹೊತ್ತಿದ್ದ ಸಂಸದ ನಳಿನ್ ಕುಮಾರ್ ಕಟೀಲ್,ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.ಸಾಮಾನ್ಯವಾಗಿ ಚುನಾವಣಾ ಸಭೆಗಳಲ್ಲಿ ಇಷ್ಟು ಉತ್ಸಾಹದಿಂದ ಜನರು ಸೇರುತ್ತಾರೆ.ಆದರೆ ಸರಕಾರಿ ಕಾರ್ಯಕ್ರಮಕ್ಕೆ ಇಷ್ಟು ಜನ ಸೇರಿದ್ದು ಆಶ್ಚರ್ಯ ಮೂಡಿಸಿದೆ.ಕರ್ನಾಟಕದ ಜನತೆಯ ಪಲ್ಸ್ ಬಿಜೆಪಿಯ ಪರವಾಗಿಯೇ ಇದೆ ಎಂದು ನಾನು ದೃಢವಾಗಿ ಭಾವಿಸಿದ್ದೇನೆ ಎಂದು ಮೋದಿ ಹೇಳಿರುವುದಾಗಿ ತಿಳಿದು ಬಂದಿದೆ.ಇದು ಪಕ್ಷದ ಕಾರ್ಯಕರ್ತರ ಚುನಾವಣೋತ್ಸಾಹ ಹೆಚ್ಚಿಸಿದೆ.ಬಿಜೆಪಿ ಯುವ ನಾಯಕರಾಗಿದ್ದ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಬಳಿಕ ತುಸು ಕುಂದಿದ್ದ ಬಿಜೆಪಿ ನಾಯಕರು ಪ್ರಧಾನಿ ಮೋದಿಯವರು ನೀಡಿದ ಅಭಯದಿಂದ ಉತ್ಸಾಹಗೊಂಡಿದ್ದಾರೆ.ಇಪ್ಪತ್ತು ನಿಮಿಷಗಳ ಕಾಲ ನಡೆದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ನಾಯಕರಿಗೆ ಆತ್ಮ ವಿಶ್ವಾಸ ಹೆಚ್ಚಿಸುವ ರೀತಿ ಮೋದಿ ಸಲಹೆ ನೀಡಿದರು ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ಗೋವಿಂದ ಕಾರಜೋಳ,ಶ್ರೀರಾಮುಲು, ಡಾ.ಅಶ್ವಥ್‌ನಾರಾಯಣ್,ಆರ್.ಅಶೋಕ್, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್,ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ,ರಾಜೇಶ್ ಜಿ.ವಿ, ಡಿ.ಕೆ.ಅರುಣಾ, ನಿರ್ಮಲ್ ಕುಮಾರ್ ಸುರಾನಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here