ಬೆಂಗಳೂರು:ದ.ಕ, ಉ.ಕ., ಹಾಸನ, ಕೊಡಗು, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಾಣಂತಿಯರ ಮನೆಗೆ ಆಹಾರ ಸಾಮಗ್ರಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಪೌಷ್ಟಿಕ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆಯಲ್ಲಿ ಪ್ರಾಯೋಗಿಕವಾಗಿ ರಾಜ್ಯದ ಆರು ಜಿಲ್ಲೆಗಳಲ್ಲಿ ಫಲಾನುಭವಿಗಳಿಗೆ ಕಚ್ಚಾ ಆಹಾರ ಪದಾರ್ಥಗಳನ್ನು ಮನೆಗೆ ತೆಗೆದುಕೊಂಡು ಹೋಗಲು ಅವಕಾಶ ನೀಡಿ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.
![](https://puttur.suddinews.com/wp-content/uploads/2022/09/45-1.jpeg)
ಅಂಗವಾಡಿ ಕೇಂದ್ರದಲ್ಲಿಯೇ ಮಧ್ಯಾಹ್ನ ಪೌಷ್ಠಿಕ ಬಿಸಿಯೂಟವನ್ನು ತಯಾರಿಸಿ ನೀಡಲಾಗುತ್ತಿದೆ. ಗರ್ಭಿಣಿ ಮತ್ತು ಬಾಣಂತಿಯರಿಗೆ ಈ ಹಿಂದೆ ನೀಡುತ್ತಿದ್ದ ಆಹಾರ ಪದಾರ್ಥಗಳು ಪೂರ್ಣ ಪ್ರಮಾಣದಲ್ಲಿ ತಲುಪುವುದಿಲ್ಲ ಎಂಬ ಕಾರಣಕ್ಕೆ ಕಾಳಜಿ ವಹಿಸಿ ಈ ಯೋಜನೆ ಆರಂಭಿಸಲಾಗಿತ್ತು ಎಂದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಯೋಜನೆಯ ಅನುಷ್ಠಾನದಲ್ಲಿನ ಸಮಸ್ಯೆಗಳು ಸರ್ಕಾರದ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ದ.ಕ., ಉಡುಪಿ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ ಗುಡ್ಡ ಗಾಡು ಪ್ರದೇಶಗಳಲ್ಲಿ ಮನೆಗೆ ನೀಡಲು ಅನುಮತಿಸಿ ಆದೇಶ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಈ ಸಮಸ್ಯೆ ಕುರಿತು ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ ಅವರು ಸಚಿವ ಹಾಲಪ್ಪ ಆಚಾರ್ ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರ ಗಮನಕ್ಕೆ ತಂದಿದ್ದರು.