ಪಕ್ಷ ವಿರೋಧಿ ಚಟುವಟಿಕೆ ಆರೋಪ ಕಾಂಗ್ರೆಸ್ ಮುಖಂಡ ಐತ್ತೂರಿನ ಮನಮೋಹನ್ ಗೋಳ್ಯಾಡಿ ಪಕ್ಷದಿಂದ ಉಚ್ಛಾಟನೆ

0

ಕಡಬ: ಕಾಂಗ್ರೆಸ್ ಪಕ್ಷದ ಬಿಳಿನೆಲೆ ವಲಯದ ಮಾಜಿ ಅಧ್ಯಕ್ಷ ಐತ್ತೂರು ಗ್ರಾ.ಪಂ. ಸದಸ್ಯ ಮನಮೋಹನ್ ಗೋಳ್ಯಾಡಿ ಅವರನ್ನು ಪಕ್ಷದ ಶಿಸ್ತನ್ನು ಉಲ್ಲಂಸಿ ಪಕ್ಷ ವಿರೋಧಿ ಚಟುವಟಿಕೆಯ ನಡೆಸಿದ ಆರೋಪದಲ್ಲಿ ಪಕ್ಷದ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಬಿಳಿನೆಲೆ ಅವರು ತಿಳಿಸಿದ್ದಾರೆ.

ಅವರು ಗುರುವಾರ ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಮನಮೋಹನ್ ಗೋಳ್ಯಾಡಿ ಅವರು ಬಿಜೆಪಿಯವರೊಂದಿಗೆ ಸೇರಿಕೊಂಡು ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಗಮನಕ್ಕೆ ಬಂದ ಕೂಡಲೇ ಅವರಿಗೆ ಪಕ್ಷದ ವತಿಯಿಂದ ತಿಳುವಳಿಕೆ ಪತ್ರ ನೀಡಲಾಗಿತ್ತು. ಕಾಂಗ್ರೆಸ್ ಬೆಂಬಲಿತರಾಗಿರುವ ಐತ್ತೂರು ಗ್ರಾ.ಪಂ. ಅಧ್ಯಕ್ಷೆ ಶ್ಯಾಮಲಾ ಅವರನ್ನು ಪದಚ್ಯುತಿಗೊಳಿಸಲು ಬಿಜೆಪಿ ಪ್ರಯತ್ನ ನಡೆಸಿದಾಗ ಸ್ವತಃ ಕಾಂಗ್ರೆಸ್ ಬೆಂಬಲಿತರಾಗಿರುವ ಗ್ರಾ.ಪಂ. ಸದಸ್ಯ ಮನಮೋಹನ್ ಗೋಳ್ಯಾಡಿ ಬಿಜೆಪಿ ಪರವಾಗಿ ಕೆಲಸ ಮಾಡಿದ್ದಾರೆ. ಶ್ಯಾಮಲಾ ಅವರು ಐತ್ತೂರು ಗ್ರಾ.ಪಂ. ಅಧ್ಯಕ್ಷರಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಕೆಲಸ ಮಾಡುತ್ತಿದ್ದರೂ ಮನಮೋಹನ್ ಗೋಳ್ಯಾಡಿ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿಯವರೊಂದಿಗೆ ಸೇರಿಕೊಂಡು ಅಧ್ಯಕ್ಷರ ಪದಚ್ಯುತಿಗೆ ಹುನ್ನಾರ ನಡೆಸಿದ್ದರು. ನ್ಯಾಯಾಲಯ ಅವಿಶ್ವಾಸ ನಿರ್ಣಯಕ್ಕೆ ತಡೆಯಾಜ್ಞೆ ನೀಡಿ ನ್ಯಾಯವನ್ನು ಎತ್ತಿ ಹಿಡಿದಿತ್ತು. ಬಳಿಕ ನಡೆದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮನಮೋಹನ್ ಗೋಳ್ಯಾಡಿ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಆಗ್ರಹ ವ್ಯಕ್ತವಾಗಿತ್ತು. ಕಾರ್ಯಕರ್ತರ ಆಶಯದಂತೆ ಅವರನ್ನು ಉಚ್ಛಾಟಿಸಬೇಕೆಂದು ನಿರ್ಣಯಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಶಿಫಾರಸ್ಸು ಮಾಡಲಾಗಿತ್ತು. ಇದೀಗ ಜಿಲ್ಲಾಧ್ಯಕ್ಷರು ಪಕ್ಷದಿಂದ ಎಲ್ಲಾ ರೀತಿಯ ಪ್ರಯೋಜನ ಪಡೆದು, ಗೌರವ ಹಾಗೂ ಹುದ್ದೆಗಳನ್ನು ಅನುಭವಿಸಿ ಪಕ್ಷದ ವಿರುದ್ಧವೇ ಕೆಲಸ ಮಾಡಿರುವ ಮನಮೋಹನ್ ಗೋಳ್ಯಾಡಿ ಅವರನ್ನು ಉಚ್ಛಾಟಿಸುವಂತೆ ಸೂಚನೆ ನೀಡಿದ್ದಾರೆ ಎಂದು ಸುಽರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಡಿಸಿಸಿ ಉಪಾಧ್ಯಕ್ಷ ವಿಜಯಕುಮಾರ್ ರೈ ಕರ್ಮಾಯಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ಬಳ್ಳೇರಿ, ಡಿಸಿಸಿ ಕಾರ್ಯದರ್ಶಿ ಸೈಮನ್ ಸಿ.ಜೆ., ಪ್ರಮುಖರಾದ ಸತೀಶ್ ನಾಯ್ಕ್ ಮೇಲಿನಮನೆ, ಶರೀಫ್ ಎ.ಎಸ್., ಸತೀಶ್ ಮೀನಾಡಿ ಉಪಸ್ಥಿತರಿದ್ದರು.

ಪಕ್ಷಕ್ಕೆ ರಾಜೀನಾಮೆ ನೀಡಿದ್ದರು‌

ಐತ್ತೂರು ಗ್ರಾ.ಪಂ.ಅಧ್ಯಕ್ಷರು ತಮ್ಮದೇ ಪಕ್ಷ ಬೆಂಬಲಿತ ಸದಸ್ಯರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ.ಸದಸ್ಯರಾದ ಮನಮೋಹನ ಗೋಳ್ಯಾಡಿ, ಈರೇಶ್ ಹಾಗೂ ಪ್ರೇಮರವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಿರುವುದಾಗಿ ಅವರು ತಿಳಿಸಿದ್ದರು.

LEAVE A REPLY

Please enter your comment!
Please enter your name here