ಯಶಸ್ವಿನಿ ಯೋಜನೆ ಮರು ಜಾರಿ; ನ.1ರಿಂದ ಸದಸ್ಯತ್ವ ನೋಂದಣಿ ಆರಂಭ

0

ಪುತ್ತೂರು:ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ, ಸಹಕಾರ ಇಲಾಖೆಯ ಮೂಲಕ ಮರು ಜಾರಿಗೊಳಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಯೋಜನೆಯಡಿ 2022-23ನೇ ಸಾಲಿಗೆ ಸದಸ್ಯತ್ವ ನೋಂದಣಿ ಪ್ರಕ್ರಿಯೆ ನ.1ರಿಂದ ಆರಂಭವಾಗಲಿದೆ.

ಯೋಜನೆಯು, ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ ಮೂಲಕ ಅನುಷ್ಠಾನಗೊಳ್ಳಲಿದ್ದು, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಈ ಟ್ರಸ್ಟ್‌ನ ಅಧ್ಯಕ್ಷರಾಗಿರುತ್ತಾರೆ.ಈ ಯೋಜನೆಯಡಿ ಯಶಸ್ವಿನಿ ಜಾಲದ ಆಸ್ಪತ್ರೆಗಳಲ್ಲಿ ಒಂದು ಕುಟುಂಬ ರೂ.5 ಲಕ್ಷವರೆಗಿನ ವೆಚ್ಚದಲ್ಲಿ ನಗದುರಹಿತ ಚಿಕಿತ್ಸೆ ಪಡೆಯಬಹುದು. ಯೋಜನೆಯ ಅನುಷ್ಠಾನಕ್ಕೆ ಬಜೆಟ್‌ನಲ್ಲಿ ರೂ.330 ಕೋಟಿ ಮೀಸಲಿಡಲಾಗಿದೆ.

ಮಾರ್ಗಸೂಚಿ: ಸಹಕಾರ ಸಂಘಗಳ ಸದಸ್ಯರು, ಗ್ರಾಮೀಣ ಸ್ವ ಸಹಾಯ ಗುಂಪುಗಳ ಸದಸ್ಯರು ಮತ್ತು ಅವರ ಕುಟುಂಬ ವರ್ಗದವರು, ಸಹಕಾರಿ ಮೀನುಗಾರರು, ಸಹಕಾರಿ ಬೀಡಿ ಕಾರ್ಮಿಕರು, ಸಹಕಾರಿ ನೇಕಾರರಿಗೆ ಈ ಯೋಜನೆ ಅನ್ವಯವಾಗಲಿದೆ.

ಗ್ರಾಮೀಣ ಸಹಕಾರ ಸಂಘಗಳ, ಸ್ವ ಸಹಾಯ ಗುಂಪುಗಳ ಗರಿಷ್ಠ ನಾಲ್ವರು ಸದಸ್ಯರ ಕುಟುಂಬ ವಾರ್ಷಿಕ ರೂ.500 ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರಿದ್ದರೆ ಹೆಚ್ಚುವರಿ ಸದಸ್ಯರಿಗೆ ತಲಾ ರೂ.100 ಪಾವತಿಸಬೇಕು. ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ವರು ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.1,000, ಹೆಚ್ಚುವರಿ ಸದಸ್ಯರಿಗೆ ತಲಾ ರೂ. 200 ಪಾವತಿಸಬೇಕು. ಅರ್ಜಿದಾರ ಮತ್ತು ಅವರ ಕುಟುಂಬದ ಸದಸ್ಯರು ಸರ್ಕಾರಿ ಅಥವಾ ಖಾಸಗಿ ಕಂಪನಿಯ ನೌಕರರಾಗಿದ್ದರೆ ಅಥವಾ ವಿಮಾ ಯೋಜನೆ ಹೊಂದಿದ್ದರೆ ಈ ಯೋಜನೆಗೆ ಅರ್ಹರಲ್ಲ.ಸಹಕಾರಿ ಇಲಾಖೆಯ ಮೂಲಕ 2003ರಲ್ಲಿ ಆರಂಭಗೊಂಡಿದ್ದ ಯೋಜನೆಯನ್ನು ಬಳಿಕ ಆರೋಗ್ಯ ಇಲಾಖೆಗೆ ವರ್ಗಾಯಿಸಲಾಗಿತ್ತು.ಅಲ್ಲದೆ, 2018ರ ಮೇ 31ರಂದು ಸ್ಥಗಿತಗೊಳಿಸಿ, ಆರೋಗ್ಯ ಕರ್ನಾಟಕ ಯೋಜನೆಯೊಂದಿಗೆ ವಿಲೀನಗೊಳಿಸಲಾಗಿತ್ತು.

LEAVE A REPLY

Please enter your comment!
Please enter your name here