69ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ : ದಂಬೆಕ್ಕಾನ,ಕೊಂಕೋಡಿ, ಮುಂಡೋಡಿ ಸಹಿತ ಐವರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

0

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಸಹಕಾರ ಮಾರಾಟ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೈತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್, ಸೌಹಾರ್ದ ಸಹಕಾರಿಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಮಂಗಳಾ ಕ್ರೀಡಾಂಗಣ ಬಳಿಯ ಕರಾವಳಿ ಉತ್ಸವ ಮೈದಾನದಲ್ಲಿ ನ.18ರಂದು ನಡೆಯಿತು.ರಾಜ್ಯ ಸರಕಾರ ರಾಜ್ಯ ಮಟ್ಟದಲ್ಲಿ ನೀಡುವ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದ ರೋಯಲ್ ಸೌಹಾರ್ದ ಸಹಕಾರಿಯ ಸ್ಥಾಪಕಾಧ್ಯಕ್ಷ ದಂಬೆಕ್ಕಾನ ಸದಾಶಿವ ರೈ,ಕ್ಯಾಂಪ್ಕೋ ಅಧ್ಯಕ್ಷ ಕೊಂಕೋಡಿ ಪದ್ಮನಾಭ,ಕಡಬ ತಾಲೂಕು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹಾಗೂ ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಯಶ್‌ಪಾಲ್ ಸುವರ್ಣ ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿ ಗೌರವಿಸಲಾಯಿತು.
ಸಪ್ತಾಹವನ್ನು ಉದ್ಘಾಟಿಸಿದ ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಸಹಕಾರ ಕ್ಷೇತ್ರ ಜೀವಂತ ಇದೆ ಎಂಬುದಕ್ಕೆ ಇಲ್ಲಿ ಸೇರಿರುವ ಜನರೇ ಸಾಕ್ಷಿ.ಮಂಗಳೂರು ಭಾಗದಲ್ಲಿ ಸಹಕಾರ ಕ್ಷೇತ್ರ ಗಟ್ಟಿಯಾಗಿದೆ.ಸಹಕಾರ ಕ್ಷೇತ್ರ ಸಹಸ್ರಾರು ಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಕೋಟ್ಯಂತರ ಜನರಿಗೆ ಸಾಕಷ್ಟು ಅನುಕೂಲ ಕಲ್ಪಿಸಿದೆ ಎಂದು ಹೇಳಿದರು.
ನ.14ರಿಂದ 20ರವರೆಗೆ ಪ್ರತಿ ವರ್ಷ ಏಳು ದಿನಗಳ ಕಾಲ ಸಹಕಾರ ಸಪ್ತಾಹ ಆಚರಣೆ ಮಾಡಲಾಗುತ್ತದೆ.ನ.14ರಂದು ಮುಖ್ಯಮಂತ್ರಿಗಳು ಕಲಬುರಗಿಯಲ್ಲಿ ಸಹಕಾರ ಸಪ್ತಾಹ ಉದ್ಘಾಟನೆ ಮಾಡಿದರು.ಏಳು ದಿವಸ ವ್ಯವಸ್ಥಿತವಾಗಿ ಕಾರ್ಯಕ್ರಮ ಆಚರಣೆ ಮಾಡಲಾಗುತ್ತದೆ ಎಂದ ಅವರು, ಎಲ್ಲಾ ಕ್ಷೇತ್ರದಲ್ಲಿ ಸಹಕಾರ ಕ್ಷೇತ್ರ ಮುಂಚೂಣಿಯಲ್ಲಿದೆ.ಭಾರತದಲ್ಲಿ ಕರ್ನಾಟಕ ಎರಡನೇ ಮುಂಚೂಣಿ ರಾಜ್ಯವಾಗಿರುವುದು ನಮ್ಮೆಲ್ಲರ ಹೆಮ್ಮೆ.ಠೇವಣಿದಾರರ ವಿಶ್ವಾಸ ಉಳಿಸಿಕೊಂಡು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿನ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ಗಳಲ್ಲಿ ಬಹುತೇಕ ಬ್ಯಾಂಕುಗಳು ಎ ಶ್ರೇಣಿ ಹೊಂದಿರುವುದರ ಜೊತೆಗೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ.ಕ್ರೆಡಿಟ್ ಸೊಸೈಟಿ, 21 ಡಿಸಿಸಿ ಬ್ಯಾಂಕ್ ಕೂಡ ಲಾಭದಲ್ಲಿದ್ದು, ಸಾವಿರಾರು ಜನರಿಗೆ ಉದ್ಯೋಗ, ಲಕ್ಷಾಂತರ ರೈತರಿಗೆ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.3 ಲಕ್ಷ ಹೊಸ ರೈತರು ಸೇರಿದಂತೆ 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ.ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಈ ವರ್ಷ ವಿತರಣೆ ಮಾಡಲಾಗುತ್ತಿದೆ.ವರ್ಷದಿಂದ ವರ್ಷಕ್ಕೆ ಸಾಲ ವಿತರಣೆ ಪ್ರಮಾಣ ಹೆಚ್ಚಳ ಮಾಡಲಾಗುತ್ತಿದೆ ಎಂದೂ ಸಚಿವ ಎಸ್.ಟಿ.ಎಸ್ ಹೇಳಿದರು.
ಸಹಕಾರಿಗಳ ಬೇಡಿಕೆಯಂತೆ ಯಶಸ್ವಿನಿ ಯೋಜನೆಯನ್ನು ಮರುಜಾರಿ ಮಾಡಲಾಗುತ್ತಿದೆ.ಯಶಸ್ವಿನಿ ಜನಪ್ರಿಯ ಯೋಜನೆಯಾಗಿದ್ದು, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ ಈ ಯೋಜನೆ ಜಾರಿಗೊಳಿಸಿದರು.ಕಾರಣಾಂತರಗಳಿಂದ ಆರೋಗ್ಯ ಇಲಾಖೆ ಜೊತೆ ಯಶಸ್ವಿನಿ ವಿಲೀನವಾಯಿತು.ರಾಜ್ಯದ ಪ್ರವಾಸದ ಸಂದರ್ಭದಲ್ಲಿ ಎಲ್ಲೆಡೆ ಯಶಸ್ವಿನಿ ಯೋಜನೆ ಮರುಜಾರಿಗೆ ಒತ್ತಾಯ ಕೇಳಿಬಂದಿತು.ಮುಖ್ಯಮಂತ್ರಿಗಳು ಈ ಯೋಜನೆಯನ್ನು ಮರುಜಾರಿ ಮಾಡಿ, ಚಾಲನೆ ನೀಡಿದ್ದಾರೆ.ಈ ಯೋಜನೆಯಿಂದ ಎಲ್ಲಾ ಸಹಕಾರಿಗಳಿಗೆ ಅನುಕೂಲವಾಗಲಿದೆ ಎಂದು ಸೋಮಶೇಖರ್ ಹೇಳಿದರು.
ರಾಜ್ಯದಲ್ಲಿ 15 ಹಾಲು ಒಕ್ಕೂಟಗಳಿದ್ದು, ಸುಮಾರು 25 ಲಕ್ಷಕ್ಕೂ ಅಽಕ ರೈತರು ಹಾಲು ಪೂರೈಕೆ ಮಾಡುತ್ತಿದ್ದಾರೆ. ಹಾಲು ಪೂರೈಸುವ ರೈತರಿಗೆ ಆರ್ಥಿಕವಾಗಿ ಅನುಕೂಲ ಕಲ್ಪಿಸಲು ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ ಮಾಡಲಾಗುತ್ತಿದೆ.ಬ್ಯಾಂಕ್ ಸ್ಥಾಪನೆ ಸಂಬಂಧ ನ.25ಕ್ಕೆ ಆರ್‌ಬಿಐ ಜೊತೆಗೆ ಸಭೆ ನಿಗದಿಯಾಗಿದ್ದು, ಇದಕ್ಕೆ ಚಾಲನೆ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
21 ಡಿಸಿಸಿ ಬ್ಯಾಂಕ್‌ಗಳಲ್ಲಿ ಮಂಗಳೂರು ಡಿಸಿಸಿ ಬ್ಯಾಂಕ್ ನಂಬರ್ ಒನ್ ಸ್ಥಾನದಲ್ಲಿದೆ.ಸಹಕಾರ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಸಹಕಾರಿ ಗಣ್ಯರಿಗೆ ಗೌರವ ಸಲ್ಲಿಸುವುದರ ಜೊತೆಗೆ ಪ್ರತಿವರ್ಷ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದ ಸಚಿವರು, ರಾಜೇಂದ್ರ ಕುಮಾರ್ ಅವರನ್ನು ಕೆಣಕಿದರೆ ಯಾರೂ ಶಾಸಕರಾಗಲು ಸಾಧ್ಯವಿಲ್ಲ ಅನ್ನೋದನ್ನು ಮಂಗಳೂರು ಮಾತ್ರವಲ್ಲ ಉತ್ತರ ಕನ್ನಡದಲ್ಲೂ ಸಾವಿರಾರು ಸಂಖ್ಯೆಯ ಸಹಕಾರಿಗಳನ್ನು ಸೇರಿಸುವ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.
ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನೆಗೆ ರಾಜೇಂದ್ರ ಕುಮಾರ್ ಕಾರಣ-ಬೆಳಪು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರು ಮಾತನಾಡಿ,12800 ಕೋಟಿ ವ್ಯವಹಾರ ನಡೆಸುವ ಮೂಲಕ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನೆ ಮಾಡಿದ್ದರೆ ಅದಕ್ಕೆ ರಾಜೇಂದ್ರ ಕುಮಾರ್ ಅವರ ಕಾರ್ಯವೈಖರಿ ಕಾರಣವಾಗಿದೆ.ರಾಜೇಂದ್ರ ಕುಮಾರ್ ಅವರ ಸಾಧನೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿಗಳಿಗೆ ಹೆಮ್ಮೆಯ ವಿಚಾರವಾಗಿದೆ.ಲಕ್ಷಾಂತರ ನವೋದಯ ಸ್ವಸಹಾಯ ಗುಂಪುಗಳನ್ನು ರಚನೆ ಮಾಡಿ ಮಹಿಳೆಯರ ಕೈಗೆ ಶಕ್ತಿ ತುಂಬಿರುವ ಎಂ.ಎನ್.ರಾಜೇಂದ್ರ ಕುಮಾರ್ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.
ಹಾಲು ಉತ್ಪಾದಕರಿಗೆ ಸಬ್ಸಿಡಿ ಮೂಲಕ ನೆರವಾಗಿ-ಯು.ಟಿ.ಖಾದರ್: ಮಂಗಳೂರು ಶಾಸಕ ಯು.ಟಿ.ಖಾದರ್ ಮಾತನಾಡಿ, ಹತ್ತು ಕೈಗಳು ಒಂದೇ ಮನಸ್ಸಿನಿಂದ ಒಟ್ಟು ಸೇರಿದಾಗ ಮಾತ್ರ ಯಶಸ್ಸು ಸಾಧ್ಯ. ಇದು ಸಹಕಾರಿ ಕ್ಷೇತ್ರದಿಂದ ಸಾಧ್ಯವಾಗಿದೆ. ರಾಜೇಂದ್ರ ಕುಮಾರ್ ಅವರ ಅಹರ್ನಿಶಿ ಪರಿಶ್ರಮದಿಂದಾಗಿ ಸಹಕಾರಿಗಳು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ.ಕೆಎಂಎಫ್ ಉತ್ತಮ ಕೆಲಸ ಮಾಡುತ್ತಿದೆ.ಆದರೆ ಹಾಲಿಗೆ ಏಕಾಏಕಿ ದರ ಏರಿಸುವ ಮೂಲಕ ಸರಕಾರ ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಬಾರದು. ಅದರ ಬದಲು ಸರಕಾರ ಹಾಲು ಉತ್ಪಾದಕರಿಗೆ ಸಬ್ಸಿಡಿ ಕೊಡುವ ಮೂಲಕ ನೆರವಾಗಬೇಕೆಂದು ಮನವಿ ಮಾಡುತ್ತಿದ್ದೇನೆ ಎಂದರು.
ರಾಜೇದ್ರ ಕುಮಾರ್ ಕೊಡುಗೆ ಸದಾ ಸ್ಮರಣೀಯ-ವೇದವ್ಯಾಸ ಕಾಮತ್: ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಗೆ ರಾಜೇಂದ್ರ ಕುಮಾರ್ ಅವರು ನೀಡಿರುವ ಕೊಡುಗೆ ಸದಾ ಸ್ಮರಣೀಯ. ಕಳೆದ ಕೊರೋನಾ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಆಹಾರ ಕಿಟ್, ಕ್ವಾರಂಟೈನ್ ಕೇಂದ್ರ, ಆ್ಯಂಬುಲೆನ್ಸ್ ಎಲ್ಲವನ್ನು ಒದಗಿಸುವ ಮೂಲಕ ಇವರು ಇತರರಿಗೆ ಮಾದರಿಯಾಗಿದ್ದಾರೆ.ಇಂಥವರ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಇನ್ನಷ್ಟು ಸಾಧನೆಯ ಪಥದಲ್ಲಿ ಮುಂದುವರಿಯಲಿ ಎಂದರು.
ಡಾ|ಎಂ.ಎನ್.ರಾಜೇಂದ್ರ ಕುಮಾರ್‌ಗೆ ಸನ್ಮಾನ: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿರುವ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಉಭಯ ಜಿಲ್ಲೆಗಳ ಸಮಸ್ತ ಸಹಕಾರಿಗಳ ಪರವಾಗಿ ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತಾಡಿದ ಡಾ|ಎಂ.ಎನ್.ರಾಜೇಂದ್ರ ಕುಮಾರ್, ದೇವರ ಆಶೀರ್ವಾದದಿಂದ ನಾನು ಎರಡನೇ ಬಾರಿ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ನಾನು ಇಷ್ಟು ಬೆಳೆಯಲು ಕಾರಣ ನೀವು.ನಾನು ಎನ್ನುವ ಪದ ಅಹಂಕಾರ ಸೂಚಕವಾಗಿದ್ದು ನನ್ನ ಏಳಿಗೆಯಲ್ಲಿ ಸಹಕಾರಿಗಳ ಪಾತ್ರ ಅಧಿಕವಾಗಿದೆ.ನಮ್ಮ ಜಿಲ್ಲೆಗೆ ಐದು ಸಹಕಾರ ರತ್ನ ಪ್ರಶಸ್ತಿ ಬಂದಿರುವುದು ಸಂತಸದ ವಿಚಾರವಾಗಿದೆ.ಜಿಲ್ಲೆಯ ಸಹಕಾರಿ ಕ್ಷೇತ್ರವನ್ನು ಪರಿಗಣಿಸಿದ್ದಕ್ಕಾಗಿ ಸಚಿವರು ಮತ್ತು ಸರಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.ಎಲ್ಲರೂ ಒಗ್ಗಟ್ಟಾಗಿದ್ದಾಗ ಮಾತ್ರ ಗೆಲುವು ಸಾಧ್ಯವಿದೆ.ನಮ್ಮ ನವೋದಯ ಸ್ವಸಹಾಯ ಗುಂಪಿನ ಸದಸ್ಯ ಮಹಿಳೆಯರು ನೂರಕ್ಕೆ ನೂರು ಶೇ. ಸಾಲ ಮರುಪಾವತಿ ಮಾಡಿರುವುದು ಸಂಘಟನೆಯ ಹೆಗ್ಗಳಿಕೆಯಾಗಿದೆ.ನಾರಿ ಶಕ್ತಿ ಮತ್ತು ಸಹಕಾರಿ ಶಕ್ತಿ ಒಂದಾದರೆ ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೂಡ್ಗಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷ ಯಶ್ ಪಾಲ್ ಎ.ಸುವರ್ಣ, ಸಹಕಾರ ಸಂಘಗಳ ನಿಬಂಧಕರಾದ ಕ್ಯಾಪ್ಟನ್ ಡಾ|ಕೆ.ರಾಜೇಂದ್ರ,ಅದಾನಿ ಗ್ರೂಪ್‌ನ ಕಿಶೋರ್ ಆಳ್ವ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
‌ಸ್ಪೈಸಿ ಮಜ್ಜಿಗೆ, ಉಪ್ಪು ರಹಿತ ಬೆಣ್ಣೆ ಬಿಡುಗಡೆ: ದಕ್ಷಿಣ ಕನ್ನಡ ಹಾಲು ಒಕ್ಕೂಟದ ಹೊಸ ಉತ್ಪನ್ನಗಳಾದ ಸ್ಪೈಸಿ ಮಜ್ಜಿಗೆ ಹಾಗೂ ಉಪ್ಪುರಹಿತ ಬೆಣ್ಣೆಯನ್ನು ಸಮಾರಂಭದಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು.
ಸಹಕಾರ ಜಾಥಾ: ಬೆಳಗ್ಗೆ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆವರಣದಿಂದ ಸಮಾರಂಭ ನಡೆಯುವ ಕರಾವಳಿ ಉತ್ಸವ ಮೈದಾನದವರೆಗೆ ಸಹಕಾರಿಗಳು ವಾಹನದ
ಮೂಲಕ ಸಹಕಾರ ಜಾಥಾ ನಡೆಸಲಾಯಿತು.
ಟಿ.ಜಿ.ರಾಜರಾಮ ಭಟ್ ಅತಿಥಿಗಳನ್ನು ಸ್ವಾಗತಿಸಿದರು.ನಿತೀಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.ಶಶಿ ಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ ಬಳೆಜ್ಜ ಸಹಿತ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here