ನ್ಯಾಯವಾದಿ ಕುಲದೀಪ್ ಶೆಟ್ಟಿಯವರ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣ:3 ಲಕ್ಷ ರೂ ಪರಿಹಾರ ನೀಡಲು, ಎಸ್.ಐ.‌ಸಹಿತ ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಹೈಕೋರ್ಟ್ ಆದೇಶ

0

ಪುತ್ತೂರು: ಯುವ ನ್ಯಾಯವಾದಿ ಕುಲದೀಪ್ ಶೆಟ್ಟಿಯವರ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಪೂಂಜಾಲಕಟ್ಟೆ ಎಸ್.ಐ.ಸುತೇಶ್ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶ ನೀಡಿರುವ ಹೈಕೋರ್ಟ್ ನ್ಯಾಯಮೂರ್ತಿಗಳು ಕುಲದೀಪ್ ಶೆಟ್ಟಿಯವರಿಗೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ.


ತನ್ನ ಮೇಲೆ ದೌರ್ಜನ್ಯ ಎಸಗಿರುವ ಪೂಂಜಾಲಕಟ್ಟೆ ಎಸ್.ಐ. ಸುತೇಶ್ ಮತ್ತು ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ತನಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಯುವ ನ್ಯಾಯವಾದಿ ಕುಲದೀಪ್ ಶೆಟ್ಟಿ ಹೈಕೋರ್ಟಿಗೆ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಜ.19ರಂದು ಈ ಆದೇಶ ನೀಡಿದೆ.

ಕುಲದೀಪ್ ಶೆಟ್ಟಿ ಪರ ವಾದ ಮಂಡಿಸಿದ್ದ ಹೈಕೋರ್ಟ್ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರು ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿ ಎಸ್.ಐ. ಮತ್ತು ಸಿಬ್ಬಂದಿಗಳು ಅನಗತ್ಯ ಮಧ್ಯಪ್ರವೇಶ ಮಾಡಿದ್ದಾರೆ. ರಾತ್ರಿ ವೇಳೆ ಅಕ್ರಮ ಪ್ರವೇಶ ಮಾಡಿ ನ್ಯಾಯವಾದಿ ಮೇಲೆ ದೌರ್ಜನ್ಯ ಎಸಗಲಾಗಿದೆ. ಈ ಬಗ್ಗೆ ದೂರು ನೀಡಿದರೂ ಇನ್ನೂ ಕಾನೂನು ಕ್ರಮ ಕೈಗೊಂಡಿಲ್ಲ. ಆದ್ದರಿಂದ ತಪ್ಪಿತಸ್ಥ ಎಸ್.ಐ. ಮತ್ತು ಸಿಬ್ಬಂದಿಗಳ ಮೇಲೆ ಎಫ್.ಐ.ಆರ್. ದಾಖಲಿಸಿ ಕಾನೂನು ಕ್ರಮ ಜರಗಿಸಲು ಆದೇಶಿಸಬೇಕು,ಎಸ್.ಐ.ಯವರನ್ನು ಸಸ್ಪೆಂಡ್ ಮಾಡಲಾಗಿದೆಯಾದರೂ ಪೊಲೀಸ್ ಇಲಾಖೆಯ ಎಫ್.ಐ.ಆರ್. ದಾಖಲಿಸಿಲ್ಲ. ಆದ್ದರಿಂದ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಪರಿಹಾರ ಕೊಡಲು ಆದೇಶಿಸಬೇಕು ಎಂದು ಪಿಪಿ ಹೆಗ್ಡೆ ನ್ಯಾಯಪೀಠದ ಗಮನ ಸೆಳೆದಿದ್ದರು. ಈ ವೇಳೆ ಪೊಲೀಸ್ ಇಲಾಖೆಯನ್ನು ಹೈಕೋರ್ಟ್ ತರಾಟೆಗೆತ್ತಿಕೊಂಡಿದ್ದಲ್ಲದೆ ಕೂಡಲೇ ವರದಿ ನೀಡುವಂತೆ ಆದೇಶಿಸಿತ್ತು. ಅದರಂತೆ ಜ.5ರಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಅವರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು ಎಸ್.ಐ. ಸುತೇಶ್ ಮತ್ತು ಸಿಬ್ಬಂದಿಗಳ ವಿರುದ್ಧ ಎಫ್.ಐ.ಆರ್. ದಾಖಲಿಸಿ ಕೊಳ್ಳಲಾಗಿದ್ದು ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದರು. ಇದನ್ನು ಮಾನ್ಯ ಮಾಡಿದ್ದ ನ್ಯಾಯಮೂರ್ತಿಗಳು ವಿಚಾರಣೆಯನ್ನು ಮುಂದೂಡಿದ್ದರು. ಇದೀಗ ಆದೇಶ ನೀಡಿರುವ ನ್ಯಾಯಮೂರ್ತಿಗಳು ಸಂತ್ರಸ್ತ ನ್ಯಾಯವಾದಿ ಕುಲದೀಪ್ ಶೆಟ್ಟಿಯವರಿಗೆ ಮೂರು ಲಕ್ಷ ರೂ ಪರಿಹಾರ ನೀಡಬೇಕು ಮತ್ತು ಎಸ್.ಐ. ಸಹಿತ ತಪ್ಪಿತಸ್ಥ ಸಿಬ್ಬಂದಿಗಳ ವಿರುದ್ಧ ಕ್ರಿಮಿ‌ನಲ್ ಕೇಸ್ ದಾಖಲಿಸಿ ಒಂದು ತಿಂಗಳೊಳಗೆ ವರದಿ ನೀಡಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here