ಫೆ.24: ‘ಸಹಕಾರ ರತ್ನ’ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 74ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ, ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ

0

ಮಂಗಳೂರು: ಸಹಕಾರಿ ಕ್ಷೇತ್ರದ ಬಲವರ್ಧನೆಗೆ ತನ್ನದೇ ಆದ ಪ್ರಾಮಾಣಿಕ ಸೇವೆಯನ್ನು ಸಲ್ಲಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಬ್ಯಾಂಕಿನ ಬೆಳವಣಿಗೆಯಲ್ಲಿ ಪ್ರಾಮಾಣಿಕ ರೀತಿಯ ಸಾರ್ಥಕತೆಯನ್ನು ಕಂಡ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಎಲ್ಲರ ಪ್ರೀತಿ ವಿಶ್ವಾಸವನ್ನು ಗಳಿಸಿದವರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲೂ ಗುರುತಿಸಿಕೊಂಡಿರುವ ’ಸಹಕಾರ ರತ್ನ’ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 74ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ನಡೆಸಲು ಅವಿಭಜಿತ ಜಿಲ್ಲೆಯ ಸಮಸ್ತ ಸಹಕಾರಿಗಳೆಲ್ಲರೂ ತೀರ್ಮಾನಿಸಿದ್ದೇವೆ.

ಫೆ.24ರಂದು ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ದಿನ. ಅದೇ ದಿನ ಪೂರ್ವಾಹ್ನ 10.30 ಗಂಟೆಗೆ ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 74ನೇ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿವಂದನಾ ಕಾರ್ಯಕ್ರಮ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ ಎಂದು ಸಹಕಾರರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅಭಿನಂದನಾ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು

ಡಾ| ಎಂ.ಎನ್.ಆರ್. ಆದರ್ಶ ನಾಯಕ: ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯಯೋಜನೆಯನ್ನು ಆಯೋಜಿಸಿ, ನಮಗೆಲ್ಲರಿಗೂ ಮಾರ್ಗದರ್ಶಕರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ 74 ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಗುವುದು. ಸಹಕಾರ ಕ್ಷೇತ್ರವು ಸರ್ವಧರ್ಮೀಯರ ಕ್ಷೇತ್ರವಾಗಿರುವುದರಿಂದ ಸಮಾಜದ ಎಲ್ಲಾ ವರ್ಗದ ಫಲಾನುಭವಿಗಳನ್ನು ಗುರುತಿಸಿ, ಸವಲತ್ತುಗಳನ್ನು ಈ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು ಎಂದು ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು.

ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಕಾರ್ಯಕ್ರಮವನ್ನು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು ಉದ್ಘಾಟಿಸಿ ಆಶೀರ್ವಚನ ನೀಡಲಿರುವರು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು. ಸಮಸ್ತ ಸಹಕಾರಿಗಳ ಪರವಾಗಿ ಈ ಕಾರ್ಯಕ್ರಮದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಭಿವಂದನೆಯನ್ನು ಸ್ವೀಕರಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಪಿ.ಎಸ್. ಯಡಪಡಿತ್ತಾಯ ಅವರು ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿವಂದಿಸಲಿರುವರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ನಿಕಟಪೂರ್ವ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಇವರು ಅಭಿವಂದನಾ ಭಾಷಣ ಮಾಡಲಿರುವರು. 74 ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆಯನ್ನು ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್. ಹಾಗೂ ಹೊಸ ದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಽಕಾರಿ ಶ್ರೀ ಪ್ರಕಾಶ್ ಪಿ.ಎಸ್. ಇವರು ನೆರವೇರಿಸಲಿರುವರು.

ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿವಂದಿಸುವ ಈ ಕಾರ್ಯಕ್ರಮದಲ್ಲಿ ಸಹಕಾರ ಸಂಸ್ಥೆಗಳ ಹೆಚ್ಚಿನ ಪ್ರತಿನಿಧಿಗಳು ಹಾಗೂ ಅವರ ಹಿತೈಷಿಗಳು ಭಾಗವಹಿಸುವಂತೆ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here