ಪುತ್ತೂರು, ವಿಟ್ಲದಲ್ಲಿ ಅಂಬೇಡ್ಕರ್ ಭವನಕ್ಕೆ ನಡೆಯದ ಶಂಕುಸ್ಥಾಪನೆ ; ಫೆ.27ಕ್ಕೆ ಪುತ್ತೂರಿನಲ್ಲಿ ಉಪವಾಸ ಸತ್ಯಾಗ್ರಹ – ದಲಿತ್ ಸೇವಾ ಸಮಿತಿ ಎಚ್ಚರಿಕೆ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಮತ್ತು ವಿಟ್ಲದಲ್ಲಿ ಮಂಜೂರಾಗಿರುವ ಅಂಬೇಡ್ಕರ್ ಭವನಕ್ಕೆ ಹೆಚ್ಚಿನ ಅನುದಾನ ನೀಡಿ ಅತಿ ಶೀಘ್ರದಲ್ಲಿ ಶಂಕುಸ್ಥಾಪನೆ ನೆರವೇರಿಸಬೇಕೆಂದು ಕಳೆದ ನವೆಂಬರ್ ತಿಂಗಳಲ್ಲಿ ಮನವಿ ನೀಡಿದ್ದರೂ ಇಲ್ಲಿನ ತನಕ ಈ ಕುರಿತು ಶಾಸಕರು ಯಾವುದೇ ಕ್ರಮಕೈಗೊಂಡಿಲ್ಲ.

ಹಾಗಾಗಿ ಫೆ.27ರಂದು ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕದ ಬಳಿ ದಲಿತ್ ಸೇವಾ ಸಮಿತಿ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ಅವರು ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ವಿಟ್ಲದ ಅಂಬೇಡ್ಕರ್ ಭವನಕ್ಕೆ ರೂ.2 ಕೋಟಿ ಮತ್ತು ಪುತ್ತೂರು ಅಂಬೇಡ್ಕರ್ ಭವನಕ್ಕೆ ರೂ.10 ಕೋಟಿ ಅನುದಾನ ಒದಗಿಸಿ ಶಂಕುಸ್ಥಾಪನೆ ಮಾಡಬೇಕು ಮತ್ತು ಕನ್ಯಾನ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ ಒದಗಿಸುವಂತೆ 2022ರ ನವೆಂಬರ್ 14ರಂದು ಕಾಲ್ನಡಿಗೆ ಜಾಥಾ ಮೂಲಕ ತೆರಳಿ ಶಾಸಕರಿಗೆ ಮನವಿ ನೀಡಿದ ಸಂದರ್ಭದಲ್ಲಿ ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು.

ಆದರೆ ನಮ್ಮ ಮನವಿಗೆ ಯಾವುದೇ ನ್ಯಾಯ ಸಿಗದ ಹಿನ್ನೆಲೆಯಲ್ಲಿ ಫೆ.27ರಂದು ಬೆಳಿಗ್ಗೆ ಗಂಟೆ 11ರಿಂದ ಸಂಜೆ ಗಂಟೆ 4ರ ತನಕ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ವಿಟ್ಲ, ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಶಿ ಸುಂದರ ನರಿಮೊಗರು, ಬಂಟ್ವಾಳ ತಾಲೂಕು ಸಂಘದ ಮಾಜಿ ಅಧ್ಯಕ್ಷ ಗಣೇಶ್ ಸೀಗೆಬಲ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here