5,8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು; ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

0

ಸರಕಾರದ ಆದೇಶ ಪ್ರಶ್ನಿಸಿದ್ದ ಅನುದಾನ ರಹಿತ ಶಾಲೆಗಳ ಸಂಘ

ನಿಯಮಾನುಸಾರ ಮುಂದಿನ ವರ್ಷದಿಂದ ಪರೀಕ್ಷೆ ನಡೆಸಲು ಅನುಮತಿ

ಬೆಂಗಳೂರು:ಪ್ರಮುಖ ಬೆಳವಣಿಗೆಯೊಂದರಲ್ಲಿ ರಾಜ್ಯದಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ನಡೆಸಲುದ್ದೇಶಿಸಿದ್ದ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು(ಮೌಲ್ಯಾಂಕನ) ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಇಲಾಖೆಯ ನಿರ್ಧಾರವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ|ಪ್ರದೀಪ್ ಸಿಂಗ್ ಯೆರೂರು ಅವರಿದ್ದ ಏಕಸದಸ್ಯ ಪೀಠ, ರಾಜ್ಯ ಸರ್ಕಾರದ 5 ಮತ್ತು 8ನೇ ತರಗತಿ ಬೋರ್ಡ್ ಎಕ್ಸಾಂ ಆದೇಶ ರದ್ದು ಪಡಿಸಿ ತೀರ್ಪು ನೀಡಿದೆ. ಈ ಮೂಲಕ ಸದ್ಯ 5 ಮತ್ತು 8ನೇ ತರಗತಿ ಮಕ್ಕಳಿಗೆ ಇದ್ದ ಪಬ್ಲಿಕ್ ಎಕ್ಸಾಂ ಆತಂಕ ದೂರವಾಗಿದೆ.

ಶಾಸಕಾಂಗದಲ್ಲಿ ಚರ್ಚಿಸದೆ ಅಧಿಕಾರಿಗಳಿಂದಲೇ ನಿರ್ಧಾರ: ಅರ್ಜಿದಾರ ಅನುದಾನ ರಹಿತ ಶಾಲೆಗಳ ಸಂಘದ ಪರವಾಗಿ ವಕೀಲ ಕೆ.ವಿ.ಧನಂಜಯ್ ಅವರು
ಹೈಕೋರ್ಟ್‌ನಲ್ಲಿ ವಾದ ಮಂಡಿಸಿ, 5 ಮತ್ತು 8ನೇ ತರಗತಿಗೆ ಪಬ್ಲಿಕ್(ಮೌಲ್ಯಾಂಕನ)ಪರೀಕ್ಷೆ ನಡೆಸುವ ಕುರಿತು ಶಾಸಕಾಂಗದಲ್ಲಿ ಚರ್ಚೆ ಆಗದೇ ಅಧಿಕಾರಿಗಳೇ ನಿರ್ಧಾರ ಮಾಡಿದ್ದರು ಎಂದು ನ್ಯಾಯಪೀಠದ ಗಮನ ಸೆಳೆದಿದ್ದರು. ಹೈಕೋರ್ಟ್ ಆದೇಶದ ಬಳಿಕ ಆಯಾಯ ಶಾಲೆಗಳು ಹೊಸದಾಗಿ ಪರೀಕ್ಷೆ ದಿನಾಂಕ ನಿಗದಿಗೆ ಅವಕಾಶ ಮಾಡಿ ಕೊಡಲಾಗಿದೆ. ಜೊತೆಗೆ ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಶಿಕ್ಷಣ ಇಲಾಖೆಗೆ ನ್ಯಾಯಪೀಠ ಸೂಚನೆ ನೀಡಿದೆ.

ಏನಿದು ವಿಚಾರ?: ಮಕ್ಕಳ ಕಲಿಕೆಯನ್ನು ಉತ್ತಮಗೊಳಿಸಲು 2022-23ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ನಿರ್ಧರಿಸಿ ವೇಳಾಪಟ್ಟಿ ಪ್ರಕಟಿಸಿತ್ತು. ಮಾ.13ರಿಂದ 18ರವರೆಗೆ ಮೌಲ್ಯಾಂಕನ ಪರೀಕ್ಷೆಗೆ ದಿನ ನಿಗದಿ ಮಾಡಿತ್ತು. ವಿದ್ಯಾರ್ಥಿಗಳ ಸಂಖ್ಯೆಯನ್ನು ಆಧರಿಸಿ ಪರೀಕ್ಷಾ ಕೇಂದ್ರಗಳನ್ನು ರಚಿಸುವಂತೆ ಸೂಚಿಸಲಾಗಿತ್ತು. ಯಾವುದೇ ಶಾಲೆಯಲ್ಲಿ ಕಡಿಮೆ ಮಕ್ಕಳಿದ್ದರೆ ಅವರಿಗೆ ಸಮೀಪದ ಮತ್ತೊಂದು ಶಾಲೆಯನ್ನು ಪರೀಕ್ಷಾ ಕೇಂದ್ರವಾಗಿಸಲು ಸೂಚಿಸಲಾಗಿತ್ತು. ಇದಕ್ಕೆ ಪೋಷಕರಿಂದ ಆಕ್ಷೇಪಗಳು ವ್ಯಕ್ತವಾಗಿದ್ದರಿಂದ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರವಾಗಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಇಲಾಖೆ ಸೂಚಿಸಿತ್ತು. ಇದೀಗ 5 ಮತ್ತು 8ನೇ ತರಗತಿಗೆ ಈ ವರ್ಷ ಪಬ್ಲಿಕ್ ಪರೀಕ್ಷೆ ನಡೆಸದಂತೆ ಹೈಕೋರ್ಟ್ ಆದೇಶ ನೀಡಿದ್ದು, ಪಬ್ಲಿಕ್ ಪರೀಕ್ಷೆ ಆತಂಕದಲ್ಲಿದ್ದ ಮಕ್ಕಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

LEAVE A REPLY

Please enter your comment!
Please enter your name here