ಮುಖ್ಯಮಂತ್ರಿ ಸಿದ್ದರಾಮಯ್ಯರ ಬಜೆಟ್ ಅಲ್ಪಸಂಖ್ಯಾತ ಓಲೈಕೆ ಬಜೆಟ್ – ಅರುಣ್ ಕುಮಾರ್ ಪುತ್ತಿಲ

0

ಪುತ್ತೂರು: ಕಳೆದ ಬಾರಿ ಸಿದ್ದರಾಮಯ್ಯರ ಆಡಳಿತದಲ್ಲಿ ಇದ್ದಂತೆ ಈ ಬಾರಿಯೂ ಸಿದ್ದರಾಮಯ್ಯ ಬಜೆಟ್ ಅಲ್ಪಸಂಖ್ಯಾತರಿಗೆ ಮೀಸಲಿಟ್ಟ ಬಜೆಟ್ ನಂತಾಗಿದೆ ಎಂದು ಅರುಣ್‌ ಕುಮಾರ್‌ ಪುತ್ತಿಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತ ಸಮುದಾಯದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿಯೇ 60 ಕೋಟಿ ರೂ. ಅನುದಾನ, ಹೊಸದಾಗಿ 10 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸುವುದು ಮತ್ತು ನೂರಾರು ಕೋಟಿ ಅನುದಾನ, ಮೌಲನ ಅಜಾದ್ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯ, ಸಿ.ಇ.ಟಿ ಮೂಲಕ ಪ್ರವೇಶ ಪಡೆದ ಇಂಜಿನಿಯರಿಂಗ್‌, ವೈದ್ಯಕೀಯ ಮುಂತಾದ 28 ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡಲು ಶೇ.2 ರ ಬಡ್ಡಿ ದರದಲ್ಲಿ ವಾರ್ಷಿಕ ಒಂದು ಲಕ್ಷ ರೂ.ಗಳವರೆಗೆ ಸಾಲ ಅಲ್ಪಸಂಖ್ಯಾತರಿಗೆ ಸಾಲ, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಕನ್ನಡ ಮತ್ತು ಆಂಗ್ಲ ಭಾಷಾ ಜ್ಞಾನವನ್ನು ಉತ್ತಮಪಡಿಸುವ ಉದ್ದೇಶದಿಂದ ಭಾಷಾ ಪ್ರಯೋಗಾಲಯಗಳಿಗೆ ಅನುದಾನ.‌

ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿ, ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ NEET, JEE, CET ಹಾಗೂ ಇತರೆ ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ ಎರಡು ವರ್ಷಗಳ ತರಬೇತಿ , ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ್ ಭವನದಲ್ಲಿ ಅಲ್ಪಸಂಖ್ಯಾತರ ಯುವ ಜನರಿಗೆ 10 ತಿಂಗಳ ವಸತಿ ಸಹಿತ IAS/KAS ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರತಿಷ್ಠಿತ ಸಂಸ್ಥೆಗಳಿಂದ ತರಬೇತಿ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವದಲ್ಲಿ 250 ರೊಳಗೆ University Ranking ಹೊಂದಿರುವ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಲು ಅನುಕೂಲವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಪ್ರತಿ ವಿದ್ಯಾರ್ಥಿಗೆ 20 ಲಕ್ಷ ರೂ. ಸಾಲ ಸೌಲಭ್ಯ, ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ 10,000 ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಅವಕಾಶವನ್ನು ಕಲ್ಪಿಸುವ ಸಲುವಾಗಿ ಇವರುಗಳಿಗೆ ಬ್ಯಾಂಕ್‌ಗಳಿಂದ ಪಡೆಯುವ ಸಾಲ ಮೊತ್ತದ ಶೇ. 20 ರಷ್ಟು ಅಥವಾ ಗರಿಷ್ಠ ಒಂದು ಲಕ್ಷ ರೂ.ವರೆಗೆ ಸಹಾಯಧನ. ʻಸ್ವಾವಲಂಬಿ ಸಾರಥಿʼ ಯೋಜನೆಯಡಿ, ಅಲ್ಪಸಂಖ್ಯಾತ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಠ 3 ಲಕ್ಷ ರೂ.ಗಳ ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗ ಪ್ರೋತ್ಸಾಹ ನೀಡಲಿದೆ.

ಸಿದ್ದರಾಮಯ್ಯ ಸರ್ಕಾರದ ಹಿಂದಿನ ಅವಧಿಯಲ್ಲಿ ರಾಜ್ಯಾದ್ಯಂತ ನೂರಾರು ಶಾದಿ ಮಹಲ್‌ ಮತ್ತು ಸಮುದಾಯ ಭವನಗಳನ್ನು ನಿರ್ಮಿಸಲು ಅನುಮೋದನೆ ನೀಡಲಾಗಿತ್ತು. ಆದರೆ, ನಂತರದ ದಿನಗಳಲ್ಲಿ ಈ ಭವನಗಳನ್ನು ಪೂರ್ಣಗೊಳಿಸಿರುವುದಿಲ್ಲ. ಅಂತಹ 126 ಶಾದಿ ಮಹಲ್‌ ಮತ್ತು ಸಮುದಾಯ ಭವನಗಳ ನಿರ್ಮಾಣ ಕಾರ್ಯಗಳನ್ನು 54 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸುವುದು. ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ಕರ್ನಾಟಕ ಇನಾಮ್‌ ರದ್ದಿಯಾತಿ ಅಧಿನಿಯಮದನ್ವಯ ನೀಡಲಾಗುತ್ತಿರುವ ತಸ್ತಿಕ್‌ ಮೊತ್ತವನ್ನು 48,000 ರೂ.ಗಳಿಂದ 60,000 ರೂ.ಗಳಿಗೆ ಹೆಚ್ಚಿಸುವುದು.ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಮತ್ತು ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲು ಪ್ರಸಕ್ತ ಸಾಲಿನಲ್ಲಿ 360 ಕೋಟಿ ರೂ.ಗಳನ್ನು ಮೀಸಲು, ಕೇಂದ್ರ ಮೋದಿ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಹೊರತರಲಾದ ನೂತನ ಶಿಕ್ಷಣ ಖಾಯ್ದೆ NEP ರದ್ದುಗೊಳಿಸಿ ಶಿಕ್ಷಣ ವ್ಯವಸ್ಥೆಯೇ ಅಯೋಮಯಗೊಳಿಸಲಾಗಿದೆ. ಗೋ ರಕ್ಷಣೆಗಿದ್ದ ಜಿಲ್ಲೆಗೊಂದು ಗೋ ಶಾಲೆ ಯೋಜನೆ ರದ್ದುಗೊಳಿಸಲಾಗಿದೆ, ವಿವೇಕ ಶಾಲೆ ಅಭಿವೃದ್ಧಿ ಯೋಜನೆ ರದ್ದುಗೊಳಿಸಲಾಗಿದೆ. ಮಹಿಳೆಯರ ಸ್ವಸಹಾಯ ಸಂಘದ ಸಹಾಯಧನ ತಡೆ ನೀಡಲಾಗಿದೆ.

ದೇಶ ಸೇವೆಗಾಗಿ ಇರುವ ಆಗ್ನಿವೀರ್ ತರಬೇತಿ ಯೋಜನೆ ರದ್ದುಗೊಳಿಸಿ ಸಿದ್ದರಾಮಯ್ಯ ಬಜೆಟ್ ದ್ವೇಷ ಸಾಧಿಸಿದಂತಿದೆ. ಗ್ಯಾರಂಟಿ ಸ್ಕಿಂಗಳಿಗಾಗಿ ಹಣ ಹೊಂದಿಸಲು ಆಸ್ತಿ ನೋಂದಣಿ ಶುಲ್ಕ ಹೆಚ್ಚು ಮಾಡಿ ಜನಸಾಮಾನ್ಯರ ಮನೆ ಕೊಳ್ಳುವ ಕನಸಿಗೆ ಕೊಳ್ಳಿ ಇಡಲಾಗಿದೆ. ಮಧ್ಯಮ ವರ್ಗದವರು ಬಳಸುವ ಸ್ಕೂಟರ್, ಬೈಕ್ ಹಾಗೂ ಐಷಾರಾಮಿಯಲ್ಲದ ಕಾರುಗಳ ಮೇಲೆಯೂ ತೆರಿಗೆಯ ಹೊರೆ ಏರಿಸಿ, ಸಿದ್ದರಾಮಯ್ಯ ಸರ್ಕಾರ ಜನಸಾಮಾನ್ಯರ ಬದುಕಿನೊಂದಿಗೆ ಆಟವಾಡುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here