ನಕಲಿ ದಾಖಲೆ, ಸೀಲ್, ದಾಖಲೆ ಪತ್ರ ತಯಾರಿ ಪ್ರಕರಣ – ಆರೋಪಿ ವಿಶ್ವನಾಥ್‌ಗೆ 3 ದಿನ ಪೊಲೀಸ್ ಕಸ್ಟಡಿ

0

ಪುತ್ತೂರು: ಸ್ಥಳೀಯ ಗ್ರಾ.ಪಂ.ಗಳು ಮತ್ತು ನಗರಸಭೆಯ ನಕಲಿ ಸೀಲುಗಳು, ರಬ್ಬರ್ ಸ್ಟಾಂಪ್‌ಗಳನ್ನು ಬಳಸಿ ನಕಲಿ ದಾಖಲೆ ಪತ್ರಗಳನ್ನು ತಯಾರಿಸಿ ಸಾರ್ವಜನಿಕರಿಗೆ ನೀಡುತ್ತಿದ್ದ ಪ್ರಕರಣದ ಆರೋಪಿ ವಿಶ್ವನಾಥ್ ಬಿ.ವಿ.ಅವರನ್ನು ಹೆಚ್ಚಿನ ವಿಚಾರಣೆಗೆ ನ್ಯಾಯಾಲಯ 3 ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ತಾ.ಪಂ.ಕಾರ್ಯನಿರ್ವಾಹಕಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್.ಅವರು ನೀಡಿದ ದೂರಿನ ಮೇರೆಗೆ, ಅವರ ನೇತೃತ್ವದಲ್ಲಿ ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸರು ಪಡೀಲ್‌ನ ಎಂ.ಎಸ್ ಕಾಂಪ್ಲೆಕ್ಸ್‌ನಲ್ಲಿರುವ ಬಿ.ಬಿ.ಇಲೆಕ್ಟ್ರಿಕಲ್ಸ್ ಆಂಡ್ ಪ್ಲಂಬರ್‍ಸ್ ಕಚೇರಿಗೆ ದಾಳಿ ನಡೆಸಿದ್ದರು. ಅಲ್ಲಿ ಶೋಧನೆ ನಡೆಸಿದ ವೇಳೆ ವಿವಿಧ ಗ್ರಾ.ಪಂ.ಗಳು ಮತ್ತು ನಗರಸಭೆಯ ನಕಲಿ ಸೀಲುಗಳು, ರಬ್ಬರ್ ಸ್ಟಾಂಪ್ ಹಾಗೂ ನಕಲಿ ದಾಖಲೆ ಪತ್ರಗಳು ಇರುವುದು ಬೆಳಕಿಗೆ ಬಂದಿತ್ತು. ನಕಲಿ ದಾಖಲೆ ಸೃಷ್ಟಿಸಿ ಸಾರ್ವಜನಿಕರಿಗೆ ನೀಡುತ್ತಿದ್ದ ಆರೋಪದಲ್ಲಿ ಪೊಲೀಸರು ವಿಶ್ವನಾಥ್ ಬಿ.ವಿ.ಅವರನ್ನು ಬಂಧಿಸಿ, ಕಚೇರಿಯಲ್ಲಿದ್ದ ನಕಲಿ ಸೀಲು, ದಾಖಲೆಗಳನ್ನು ವಶಕ್ಕೆ ಪಡೆದುಕೊಂಡು, ಕಚೇರಿಯನ್ನು ಬಂದ್ ಮಾಡಿದ್ದರು.
ಆರೋಪಿಗೆ ಪೊಲೀಸ್ ಕಸ್ಟಡಿ: ಜು.12ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಈ ಪ್ರಕರಣದಲ್ಲಿ ಇನ್ನೂ ಹೆಚ್ಚಿನ ತನಿಖೆ ಅಗತ್ಯವಿರುವ ಕಾರಣ ಆರೋಪಿಯನ್ನು ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಆರೋಪಿಯನ್ನು ಮೂರು ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here