ಜಲಜೀವನ್ ಮಿಷನ್ ಕಾಮಗಾರಿ ವಿಳಂಬ ಸಹಿಸುವುದಿಲ್ಲ- ಕಾಮಗಾರಿ ವಿಳಂಬಕ್ಕೆ ಮಳೆಯ ಸಬೂಬು ಒಪ್ಪಿಕೊಳ್ಳಲಾಗದು

0

ಯೋಜನೆಯ ಅಧಿಕಾರಿಗಳು, ಇಂಜಿನಿಯರ್‌ಗಳಿಗೆ ಜಿ.ಪಂ.ಸಿಇಓ ಡಾ.ಆನಂದ್

ಮಂಗಳೂರು: ಜಿಲ್ಲೆಯ ಗ್ರಾಮೀಣ ಪ್ರದೇಶದ ಮನೆಗಳಿಗೆ 24 ಗಂಟೆಯೂ ಕುಡಿಯುವ ನೀರು ಪೂರೈಕೆಯ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್‌ನ ಕಾಮಗಾರಿಗಳಲ್ಲಿ ವಿಳಂಬಕ್ಕೆ ಆಸ್ಪದ ನೀಡಬಾರದು, ಕಾಮಗಾರಿಯ ವಿಳಂಬಕ್ಕೆ ಮಳೆಯ ಕಾರಣ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಆನಂದ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜು.13ರಂದು ಜಿಲ್ಲಾ ಪಂಚಾಯತ್‌ನ ಮಿನಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾಮಗಾರಿಗಳ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಳೆಗಾಲ ನಿರೀಕ್ಷಿತ. ಅದನ್ನೇ ಕಾರಣವಾಗಿಟ್ಟುಕೊಂಡು ಜಲಜೀವನ್ ಮಿಷನ್ ಕಾಮಗಾರಿಗಳು ವಿಳಂಬವಾಗುತ್ತಿದೆ ಎಂಬುದನ್ನು ಒಪ್ಪಲು ಸಾಧ್ಯವಿಲ್ಲ. ಅದೆಲ್ಲವನ್ನು ಪರಿಗಣಿಸಿಯೇ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಲಾಗಿರುತ್ತದೆ. ಆದ ಕಾರಣ ಕೂಡಲೇ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅವರು ಸೂಚನೆ ನೀಡಿದರು.
36 ಕಾಮಗಾರಿಗಳು ವಿವಿಧ ಕಾರಣಗಳಿಂದ ನಿಗದಿತ ಅವಧಿಗಿಂತ ವಿಳಂಬವಾಗಿವೆ. ಟೆಂಡರ್ ಷರತ್ತಿನಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಗತ್ಯವಾದ ಎಲ್ಲ ತಾಂತ್ರಿಕ, ಹವಾಮಾನ ಸಹಿತ ಎಲ್ಲ ಅಂಶಗಳನ್ನು ಪರಿಗಣಿಸಿ ಕಾಲಾವಕಾಶ ನೀಡಲಾಗಿರುತ್ತದೆ. ಆದ್ದರಿಂದ ಕಾಮಗಾರಿ ವಿಳಂಬಕ್ಕೆ ಸಬೂಬು ಹೇಳುವಂತಿಲ್ಲ ಎಂದು ಅವರು ಇಂಜಿನಿಯರ್‌ಗಳಿಗೆ ತಿಳಿಸಿದರು. ನಳ್ಳಿ ಜೋಡಣೆ, ಪೈಪ್‌ಲೈನ್ ಕಾಮಗಾರಿ, ಓವರ್‌ಹೆಡ್ ಟ್ಯಾಂಕ್ ನಿರ್ಮಾಣ ಮೊದಲಾದ ವಿಭಿನ್ನ ಕಾಮಗಾರಿಗಳ ಕಾರಣಗಳಿಂದ ವಿಳಂಬವಾಗಿರುವ ಸಾಧ್ಯತೆಯಿದ್ದಲ್ಲಿ ಅದನ್ನು ನಿರ್ದಿಷ್ಟವಾಗಿ ನಮೂದಿಸಬೇಕು. ಈ ಸಮಸ್ಯೆಗಳಿಗೆ ಒಂದೆರಡು ತಿಂಗಳು ವಿಳಂಬ ಆಗಬಹುದು.ಆದರೆ 200ರಿಂದ 300 ದಿನಗಳಷ್ಟು ವಿಳಂಬವಾಗಲು ಸಾಧ್ಯವಿಲ್ಲ.ಈ ಬಗ್ಗೆ ಸ್ಪಷ್ಟತೆ ಇರಬೇಕು ಎಂದು ಯೋಜನೆಯ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳಿಗೆ ಜಿಪಂ ಸಿಇಒ ನಿರ್ದೇಶನ ನೀಡಿದರಲ್ಲದೆ, ವಿಳಂಬಗೊಂಡ ಪ್ರತಿಯೊಂದು ಕಾಮಗಾರಿಗಳಿಗೆ ಕಾರಣಗಳನ್ನು ಲಿಖಿತವಾಗಿ ತಿಳಿಸಬೇಕು ಎಂದರು.
ಕಡಬ, ಬೆಳ್ತಂಗಡಿಯಲ್ಲಿ ಗೋಬರ್‌ಧನ್ ಘಟಕ: ಸ್ವಚ್ಛ ಭಾರತ್ ಮಿಷನ್‌ನ ಗೋಬರ್ ಧನ್ ಯೋಜನೆಯಡಿ ಬೆಳ್ತಂಗಡಿ ಹಾಗೂ ಕಡಬ ತಾಲೂಕಿನಲ್ಲಿ ಎರಡು ಘಟಕಗಳು ನಿರ್ಮಾಣವಾಗಿದ್ದು, ಪುತ್ತೂರಿನ ಬಡಗನ್ನೂರು ಗ್ರಾಮ ಪಂಚಾಯತ್‌ನಲ್ಲಿ ನಿರ್ಮಿಸಲುದ್ದೇಶಿಸಿರುವ ಗೋಬರ್ ಧನ್ ಅನುಷ್ಠಾನಕ್ಕೆ 11.93 ಲಕ್ಷ ರೂ. ಡಿಪಿಆರ್ (ಸಮಗ್ರ ಯೋಜನೆ ವರದಿ) ಮತ್ತು ಅಂದಾಜುಪಟ್ಟಿ ತಯಾರಿಸಲಾಗಿದ್ದು, ಅನುಮೋದನೆ ನೀಡಬೇಕಾಗಿದೆ ಎಂದು ಯೋಜನೆಯ ಅಧಿಕಾರಿ ನವೀನ್ ಸಭೆಯಲ್ಲಿ ಮಾಹಿತಿ ನೀಡಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 3,34,185 ಮನೆಗಳಿಗೆ ನೀರಿನ ಸಂಪರ್ಕ ಒದಗಿಸಬೇಕಾಗಿದೆ.ಇದರಲ್ಲಿ ಈಗಾಗಲೇ 2,90,583 ಮನೆಗಳಿಗೆ ನೀರು ಪೂರೈಕೆ ಕಾರ್ಯ ಮಾಡಲಾಗುತ್ತಿದೆ.ಉಳಿದ 43,602 ಮನೆಗಳಿಗೆ ನೀರು ಸಂಪರ್ಕ ಕಾರ್ಯ ವಿವಿಧ ಹಂತಗಳಲ್ಲಿ ಬಾಕಿ ಉಳಿದಿವೆ ಎಂದು ಸಿಇಒ ಡಾ.ಆನಂದ್ ಹೇಳಿದರು.

LEAVE A REPLY

Please enter your comment!
Please enter your name here