ಪ್ರತಿ ಕ್ವಿಂಟಾಲ್‌ಗೆ ರೂ.1250 ಉಂಡೆಕೊಬ್ಬರಿಗೆ ಪ್ರೋತ್ಸಾಹ ಧನ

0

ಬೆಂಗಳೂರು: ಸಂಕಷ್ಟದಲ್ಲಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ, ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 1,250 ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಣೆ ಮಾಡಿದೆ.

ಕೊಬ್ಬರಿ ಬೆಲೆ ಕುಸಿತ ಚರ್ಚೆಗೆ ಸಂಬಂಧಿಸಿದಂತೆ ಸದನದಲ್ಲಿ ಉತ್ತರ ನೀಡಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು, ಇಂದಿನಿಂದ ಕೊಬ್ಬರಿ ಖರೀದಿಗೆ 1,250ರೂ.ಪ್ರೋತ್ಸಾಹ ಧನ ನೀಡಲಾಗುವುದು.ರಾಜ್ಯ ಸರ್ಕಾರದಿಂದ ಇದುವರೆಗೆ 1000 ರೂ. ಮಾತ್ರ ಪ್ರೋತ್ಸಾಹ ಧನ ನೀಡಲಾಗಿತ್ತು.ಇದೇ ಮೊದಲ ಬಾರಿಗೆ 1,250 ರೂ. ಪ್ರೋತ್ಸಾಹ ಧನ ಕೊಡಲಾಗುತ್ತಿದೆ ಎಂದರು. ಈ ಹಿಂದೆ ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಮಾರಾಟ ಮಾಡಿದವರಿಗೆ ಇದು ಅನ್ವಯವಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಕೇಂದ್ರ ಸರ್ಕಾರವು ಪ್ರತೀ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 11,750 ರೂ. ಬೆಂಬಲ ಬೆಲೆ ನಿಗದಿ ಪಡಿಸಿದೆ.ಇದರ ಜೊತೆಗೆ ರಾಜ್ಯ ಸರ್ಕಾರ 1,250 ರೂ. ಪ್ರೋತ್ಸಾಹ ಧನ ನೀಡಲಿದೆ ಎಂದು ಸಚಿವರು ಹೇಳಿದರು.
ಈವರೆಗೆ ಕೇಂದ್ರ ಸರ್ಕಾರದ ಏಜೆನ್ಸಿ ನ್ಯಾಪೆಡ್ ಮೂಲಕ ರಾಜ್ಯ ಏಜೆನ್ಸಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಮೂಲಕ 45,038 ಮೆಟ್ರಿಕ್ ಟನ್ ಉಂಡೆ ಕೊಬ್ಬರಿ ಖರೀದಿಸಲಾಗಿದೆ.2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದಕ್ಷಿಣ ಕನ್ನಡ ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ 6.43 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 26.06 ಲಕ್ಷ ಮೆಟ್ರಿಕ್ ಟನ್ ತೆಂಗು ಹಾಗೂ ಕೊಬ್ಬರಿ ಉತ್ಪಾದನೆಯಾಗಿದೆ.ಎಂಎಸ್ಸಿ ಅಡಿ ಕೊಬ್ಬರಿ ಖರೀದಿಗೆ 37,632 ರೈತರು ನೋಂದಣಿ ಮಾಡಿಕೊಂಡಿದ್ದಾರೆ.ನಿನ್ನೆಯವರೆಗೆ 31,641 ರೈತರು ಪ್ರಯೋಜನ ಪಡೆದಿದ್ದಾರೆ. ಜು.26ರವರೆಗೂ ಖರೀದಿ ಪ್ರಕ್ರಿಯೆ ಚಾಲನೆಯಲ್ಲಿರುತ್ತದೆ ಎಂದರು.
ವಿವಿಧ ಮಾರುಕಟ್ಟೆಗಳಲ್ಲಿ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 7,7೦೦ರಿಂದ 8,020 ರೂ.ವರೆಗೆ ಮಾರಾಟವಾಗುತ್ತಿದೆ. ರಾಜ್ಯ ಸರ್ಕಾರವು ಕೊಬ್ಬರಿ ಖರೀದಿ ಪ್ರಮಾಣ ಹೆಚ್ಚಳ ಹಾಗೂ ಖರೀದಿ ಅವಧಿ ವಿಸ್ತರಣೆಗೆ ಕೇಂದ್ರ ಸರ್ಕಾರವನ್ನು ಕೋರಿದೆ ಎಂದು ಸಚಿವರು ಹೇಳಿದರು.ಕೇಂದ್ರ ಸರ್ಕಾರ ಖರೀದಿ ಪ್ರಮಾಣ ಹೆಚ್ಚಳ ಹಾಗೂ ಅವಧಿ ವಿಸ್ತರಣೆಗೆ ಅನುಮತಿ ನೀಡಿದ ಬಳಿಕ ನೋಂದಾಯಿಸುವವರಿಗೂ ಪ್ರೋತ್ಸಾಹ ಧನ ದೊರೆಯಲಿದೆ ಎಂದು ಸಚಿವ ಶಿವಾನಂದ ಪಾಟೀಲರು ಸ್ಪಷ್ಟಪಡಿಸಿದರು.ಬೆಂಬಲ ಬೆಲೆ ಯೋಜನೆಯಡಿ ಪ್ರತೀ ಕ್ವಿಂಟಾಲ್ ಕೊಬ್ಬರಿಗೆ 16,500 ರೂ.ವರೆಗೆ ಹೆಚ್ಚಿಸಬೇಕು.ಉತ್ಪಾದನೆಯ ಶೇ.25ರಿಂದ ಶೇ.50ರಷ್ಟು ಖರೀದಿಗೆ ಅವಕಾಶ ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ಸಚಿವರು ಸದನದಲ್ಲಿ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here