ನೆಲ್ಯಾಡಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಡಬ ತಾಲೂಕು ಇದರ ವತಿಯಿಂದ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ ಇದರ ಸಹಕಾರದೊಂದಿಗೆ ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.


ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್‌ರವರು ಅಧ್ಯಕ್ಷತೆ ವಹಿಸಿದ್ದರು. ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ಎನ್.ಅವರು ಉದ್ಘಾಟಿಸಿ ಜ್ಞಾನವಿಕಾಸ ಕಾರ್ಯಕ್ರಮದ ಸದುದ್ದೇಶ ಹಾಗೂ ಇದರಿಂದಾಗುವ ಪ್ರಯೋಜನದ ಕುರಿತು ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ದೇಶಕ ಎಂ.ಜನಾರ್ದನರವರು ಆಸ್ಪತ್ರೆಯಿಂದ ಸಿಗಬಹುದಾದ ಸೌಲಭ್ಯಗಳ ಕುರಿತು ತಿಳಿಸಿ, ಯಾವುದೇ ಖಾಯಿಲೆಯ ಲಕ್ಷಣ ಕಂಡುಬಂದ ಕೂಡಲೇ ಪರೀಕ್ಷೆ ಮಾಡಿಸಿ ಕಾಯಿಲೆ ಪತ್ತೆ ಹಚ್ಚಿ ಪರಿಹಾರ ಕಂಡು ಕೊಳ್ಳಬೇಕು ಎಂದು ಹೇಳಿದರು. ಡಾ. ಜಸ್ಟಿನ್‌ರವರು ಡೆಂಗ್ಯು ಜ್ವರದ ಕುರಿತು ಮಾಹಿತಿ ನೀಡಿದರು.


ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೆಲ್ಯಾಡಿ ವಲಯಾಧ್ಯಕ್ಷ ಕುಶಾಲಪ್ಪ ಗೌಡ, ನೆಲ್ಯಾಡಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಬಿನೋಜ್, ಒಕ್ಕೂಟಗಳ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಅಡಿಲು, ಸುಮಿತ್ರ ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕ ವಿಜೇಶ್ ಜೈನ್ ಸ್ವಾಗತಿಸಿ, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಚೇತನ ನಿರೂಪಿಸಿದರು. ಸೇವಾ ಪ್ರತಿನಿಧಿ ನಮಿತಾ ಶೆಟ್ಟಿ ಪ್ರಾರ್ಥಿಸಿದರು. ಸೇವಾ ಪ್ರತಿನಿಧಿ ಹೇಮಾವತಿ ವಂದಿಸಿದರು. ಜನ ಜಾಗೃತಿ ವೇದಿಕೆಯ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ವಲಯದ ಸೇವಾ ಪ್ರತಿನಿಧಿಗಳು ಸಹಕರಿಸಿದರು. ಒಕ್ಕೂಟದ ಸದಸ್ಯರು, ಜ್ಞಾನವಿಕಾಸ ಕೇಂದ್ರದ ಸದಸ್ಯರು ಹಾಗೂ ಸಾರ್ವಜನಿಕರು ಶಿಬಿರದಲ್ಲಿ ಕಣ್ಣಿನ ಪರೀಕ್ಷೆ, ಬಿಪಿ, ಶುಗರು, ಇ.ಸಿ.ಜಿ ಇತ್ಯಾದಿ ಪರೀಕ್ಷೆಯನ್ನು ಮಾಡಿಸಿ ಪ್ರಯೋಜನ ಪಡೆದುಕೊಂಡರು.

LEAVE A REPLY

Please enter your comment!
Please enter your name here