![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಪ್ರತಿಯೊಬ್ಬರು ತಮ್ಮ ಚಿಂತನೆಗಳಿಗೆ ಒಂದು ಚೌಕಟ್ಟನ್ನು ಹಾಕಿಕೊಂಡು ಅದರೊಳಗೆ ಬಂಧಿಯಾಗಿರುತ್ತಾರೆ.ಆ ಚೌಕಟ್ಟಿನಿಂದ ಹೊರಬಂದು ವಿಭಿನ್ನವಾಗಿ ಚಿಂತಿಸಿದಾಗ ಮಾತ್ರ ವ್ಯಕ್ತಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ.ನಾವು ಬದಲಾದಾಗ ಮಾತ್ರ ಸಮಾಜದ ವ್ಯವಸ್ಥೆಯು ಉನ್ನತಿಯತ್ತ ಸಾಗುತ್ತದೆ.ಎಂದು ನವೋದಯ ಪ್ರೌಢಶಾಲೆ ಬೆಟ್ಟಂಪಾಡಿಯ ಮುಖ್ಯೋಪಾಧ್ಯಾಯಿನಿ ಪುಷ್ಪಾವತಿ ಎಸ್.ಹೇಳಿದರು.
ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಪ್ರೇರಣಾ – 2023 ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಜ್ಞಾನದ ನಿಧಿಯಾಗಬೇಕು.ಪ್ರತಿಯೊಬ್ಬರ ಅಂತರಂಗದಲ್ಲಿ ಅಗಾಧ ಶಕ್ತಿಯಿದೆ.ಅದರ ಬಗ್ಗೆ ಯಾರಿಗೂ ಅರಿವಿಲ್ಲ.ಅಂತರಂಗದ ಶಕ್ತಿಯನ್ನು ಪರಿಪೂರ್ಣವಾಗಿ ಬಳಸಿಕೊಳ್ಳುವವರು ಜೀವನದಲ್ಲಿ ಯಶಸ್ಸು ಪಡೆಯುತ್ತಾರೆ.ಅಂತಃಶಕ್ತಿಯನ್ನು ಅರಿತುಕೊಳ್ಳುವ ಮೂಲಕ ಹೊಸ ಅಸ್ತಿತ್ವವನ್ನು ಸ್ಥಾಪಿಸಬೇಕು.ಅಂತರಂಗ ಶುದ್ಧವಾಗಿದ್ದರೆ ಮನಸ್ಸು ಕ್ರಿಯಾಶೀಲವಾಗಿರುತ್ತದೆ.ರಾಷ್ಟ್ರ ಪ್ರೇಮದಂತಹ ಉದಾತ್ತ ಆಲೋಚನೆಗಳಿಗೆ ಬದುಕನ್ನು ಬದಲಿಸುವ ಶಕ್ತಿಯಿದೆ. ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯರವರು ಮಾತನಾಡುತ್ತಾ, ಶಿಕ್ಷಣ , ಕ್ರೀಡೆ,ಚಿತ್ರಕಲೆ,ಸಂಗೀತ , ನಾಟಕ, ಹೀಗೆ ಪ್ರತೀ ಕ್ಷೇತ್ರದ ಚಟುವಟಿಕೆಗಳಲ್ಲಿಯೂ ನಿತ್ಯಭಾಗಿಯಾಗುವ ಮೂಲಕ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತಾ ಸಾಗಬೇಕು.ಆಗ ಮಾತ್ರ ಪರಿಪೂರ್ಣ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯ.ಎಂದು ಹೇಳಿದರು.
![](https://puttur.suddinews.com/wp-content/uploads/2023/11/2-2-1.jpg)
ಈ ಕಾರ್ಯಾಗಾರದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವ ಬಗ್ಗೆ ,ಸಮಯ ಪರಿಪಾಲನೆ,ಒತ್ತಡ ನಿವಾರಣೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಅವಧಿಯನ್ನು ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ನಡೆಸಿಕೊಟ್ಟರು.
ವಿದ್ಯಾರ್ಥಿಗಳಿಗೆ ಆಕರ್ಷಕ ಮೋಜಿನ ಆಟಗಳನ್ನು ಕಾಲೇಜಿನ ವಿದ್ಯಾರ್ಥಿಗಳು ಆಡಿಸಿದರು.ಈ ಕಾರ್ಯಾಗಾರಕ್ಕೆ ಅಭೂತ ಪೂರ್ವ ಸ್ಪಂದನೆ ವ್ಯಕ್ತವಾಯಿತು.ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.ಪ್ರತೀ ವರ್ಷವು ಇಂತಹ ಅವಕಾಶ ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಲಿ ಎಂಬ ತಮ್ಮ ಆಶಯವನ್ನು ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಸಂತೋಷ ಬಿ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾದ ಭೂಮಿಕಾ ಸ್ವಾಗತಿಸಿ,ಪುನೀತ ವಂದಿಸಿದರು.