ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ‍್ಯಾಗಾರ ಪ್ರೇರಣಾ 2023- ಉದ್ಘಾಟನೆ

0

ಪುತ್ತೂರು: ವೇಗವಾಗಿ ಬೆಳೆಯುತ್ತಿರುವ ಔದ್ಯೋಗಿಕರಂಗದಲ್ಲಿ ದಿನದಿಂದ ದಿನಕ್ಕೆ ಹಲವಾರು ಬದಲಾವಣೆಗಳಾಗುತ್ತಿರುತ್ತವೆ. ಅದಕ್ಕಾಗಿ ನಮ್ಮ ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿ ದೆಸೆಯಿಂದಲೇ ಚಿಂತನೆ ಮಾಡಬೇಕಾಗಿದೆ.ಸವಾಲುಗಳು ಎದುರಾದಷ್ಟು ಮನುಷ್ಯ ಮತ್ತಷ್ಟು ಬಲಗೊಳುತ್ತಾನೆ. ಸಮಸ್ಯೆಗಳನ್ನು ಮೀರಿ ನಿಲ್ಲಲು ನಮಗೆ ಬೇಕಿರುವುದು ಉತ್ತೇಜನ. ಶ್ರದ್ಧೆಯಿಂದ ಅಧ್ಯಯನ ಮಾಡಿ ಯಶಸ್ಸು ಸಾಧಿಸಿ ಎಂದು ಪುತ್ತೂರಿನ ಸುದಾನ ವಸತಿ ಶಾಲೆಯ ಕಾರ‍್ಯದರ್ಶಿಗಳಾದ ಪೀಟರ್ ವಿಲ್ಸನ್ ಪ್ರಭಾಕರ್ ರವರು ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಪ್ರೇರಣಾ – 2023ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಭವಿಷ್ಯವು ಯುವಶಕ್ತಿಯನ್ನು ಅವಲಂಭಿಸಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಜನಾಂಗವು ಅತ್ಯಾಧುನಿಕ ಕೌಶಲ್ಯ ಮತ್ತು ಜ್ಞಾನವನ್ನು ಹೊಂದಿರಬೇಕು ಹಾಗೂ ತನ್ನಲ್ಲಿರುವ ದೌರ್ಬಲ್ಯವನ್ನು ಅರಿತುಕೊಂಡು ಶಕ್ತಿ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ ಅವರು ಮಾತನಾಡುತ್ತಾ, ವ್ಯಕ್ತಿ ಬದುಕನ್ನು ರೂಪಿಸುವುದರಲ್ಲಿ ಶಿಕ್ಷಣಕ್ಕೆ ಪ್ರಮುಖ ಪಾತ್ರವಿದೆ. ಆಧುನಿಕ ಹಾಗೂ ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಿಕೊಳ್ಳಲು ಶಿಕ್ಷಣದ ಜೊತೆಗೆ ಕಾರ್ಯಾಗಾರಗಳ ಅವಶ್ಯಕತೆಯಿದೆ. ಶಿಕ್ಷಣ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಗಳಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು. ಸಮಾಜದ ಆಸ್ತಿಗಳಾಗಿ ಹೊರಹೊಮ್ಮಬೇಕಾಗಿದೆ ಎಂದು ಹೇಳಿದರು.


ಈ ಕಾರ‍್ಯಾಗಾರದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವ ಬಗ್ಗೆ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಅಂತಿಮ ವರ್ಷದ ವಿದ್ಯಾರ್ಥಿನಿ ಚೈತ್ರ ಮಾಹಿತಿ ನೀಡಿದರು.
ಸಮಯ ಪರಿಪಾಲನೆ, ಒತ್ತಡ ನಿವಾರಣೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ‍್ಯಕ್ರಮವನ್ನು ಆಯೋಜಿಸಲಾಯಿತು. ಈ ಅವಧಿಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ನಡೆಸಿಕೊಟ್ಟರು.
ವಿದ್ಯಾರ್ಥಿಗಳಿಗೆ ಆಕರ್ಷಕ ಮೋಜಿನ ಆಟಗಳನ್ನು ಕಾಲೇಜಿನ ವಿದ್ಯಾರ್ಥಿಗಳು ಆಡಿಸಿದರು. ಈ ಕಾರ್ಯಾಗಾರಕ್ಕೆ ಅಭೂತ ಪೂರ್ವ ಸ್ಪಂದನೆ ವ್ಯಕ್ತವಾಯಿತು. ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಪ್ರತೀ ವರ್ಷವು ಇಂತಹ ಅವಕಾಶ ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಲಿ ಎಂಬ ತಮ್ಮ ಆಶಯವನ್ನು ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಸಾಯಿಸಹನ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here