ಸದನದಲ್ಲಿ ಹಕ್ಕುಚ್ಯುತಿ ಮಂಡಿಸಿದ ಶಾಸಕ ಹರೀಶ್ ಪೂಂಜ-ಹಕ್ಕುಬಾಧ್ಯತಾ ಸಮಿತಿಗೆ ವಹಿಸಿ ತನಿಖೆಗೆ ಆದೇಶಿಸಿದ ಸ್ಪೀಕರ್

0

ಉಪ್ಪಿನಂಗಡಿ ವಲಯಾರಣ್ಯಾಧಿಕಾರಿ ದೂರಿನ ಹಿನ್ನೆಲೆ-ಶಾಸಕ ಪೂಂಜ ವಿರುದ್ಧ ದಾಖಲಾಗಿರುವ ಪ್ರಕರಣ
ಮೂವರು ಅಧಿಕಾರಿಗಳ ಅಮಾನತು ಬಳಿಕ ತನಿಖೆಗೆ ಶಾಸಕ ಪೂಂಜ ಆಗ್ರಹ
ಬಿಜೆಪಿ ಸದಸ್ಯರ ಸಾಥ್

ಬೆಂಗಳೂರು: ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿರುವ ಪುತ್ತೂರು ಮೂಲದ ಹರೀಶ್ ಪೂಂಜಾ ಅವರು, ಬೆಳ್ತಂಗಡಿ ಅರಣ್ಯಾಧಿಕಾರಿಗಳ ವಿರುದ್ಧ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಹಕ್ಕುಚ್ಯುತಿ ಮಂಡನೆ ಪ್ರಸ್ತಾವವನ್ನು ವಿಧಾನಮಂಡಲದ ಹಕ್ಕು ಭಾದ್ಯತಾ ಸಮಿತಿಗೆ ವಹಿಸಿ ಆದೇಶಿಸಿದ ಸ್ಪೀಕರ್ ಯು.ಟಿ.ಖಾದರ್, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.ಬೆಳ್ತಂಗಡಿ ಅರಣ್ಯಾಧಿಕಾರಿಗಳಿಂದ ತಮಗೆ ಹಕ್ಕುಚ್ಯುತಿಯಾಗಿದೆ ಎಂದು ಹರೀಶ್ ಪೂಂಜಾ ಅವರು ಮಂಗಳವಾರ ವಿಧಾನಸಭೆಯ ಶೂನ್ಯವೇಳೆಯಲ್ಲಿ ಪ್ರಸ್ತಾವನೆ ಮಂಡಿಸಲು ಅವಕಾಶ ಕೊಡುವಂತೆ ಮಾಡಿದ ಆಗ್ರಹಕ್ಕೆ ಬಿಜೆಪಿ ಶಾಸಕರು ಸಾಥ್ ನೀಡಿ ಸದನದಲ್ಲಿ ಕೋಲಾಹಲ ಎಬ್ಬಿಸಿದರು.ಅಲ್ಲದೆ, ಸದನದ ಬಾವಿಗಿಳಿದು ಧರಣಿ ನಡೆಸಿದರು.


ಅಧಿಕಾರಿಗಳ ಅಮಾನತಿಗೆ ಆಗ್ರಹ:
ಬೆಳ್ತಂಗಡಿ ಅರಣ್ಯಾಧಿಕಾರಿಗಳನ್ನು ಅಮಾನತು ಮಾಡಿ ತನಿಖೆ ನಡೆಸಬೇಕು ಎಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದರು.ಅರಣ್ಯಾಧಿಕಾರಿಗಳು ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ.ಶಾಸಕರ ರಕ್ಷಣೆ ನಿಮ್ಮ ಜವಾಬ್ದಾರಿ, ಹಕ್ಕುಚ್ಯುತಿ ಪ್ರಸ್ತಾವನೆ ಪಡೆದುಕೊಂಡು ಅಽಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.
ಸ್ಪೀಕರ್ ಅನುಮತಿ ಪಡೆಯದೆ ತನಿಖೆಗೆ ಅನುಮತಿ ನೀಡಿದರು ಎಂಬ ಕಾರಣಕ್ಕೆ ಕ್ಯಾಬಿನೆಟ್‌ನಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣ ವಾಪಸ್ ತೆಗೆದುಕೊಳ್ಳುತ್ತೀರಿ.ಬಡವನ ಮನೆಯನ್ನು ರಕ್ಷಣೆ ಮಾಡಲು ಹೋದ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾಗಿರುವ ಎ-ಐಆರ್ ರದ್ದು ಮಾಡದಿರುವುದು ಯಾವ ನ್ಯಾಯ? ಎಂದು ಬಿಜೆಪಿ ಸದಸ್ಯ ಸುನಿಲ್ ಕುಮಾರ್ ಪ್ರಶ್ನೆ ಮಾಡಿದರು.


ಬಿಜೆಪಿ ಸದಸ್ಯರ ಆಗ್ರಹಕ್ಕೆ ಮಣಿದ ಸ್ಪೀಕರ್ ಯು.ಟಿ.ಖಾದರ್, ಹಕ್ಕುಚ್ಯುತಿ ಮಂಡನೆ ಪ್ರಸ್ತಾಪಕ್ಕೆ ಅವಕಾಶ ಕೊಟ್ಟರು.ಬಳಿಕ ಹಕ್ಕುಚ್ಯುತಿ ಪ್ರಸ್ತಾವನೆ ಮಂಡಿಸಿದ ಶಾಸಕ ಹರೀಶ್ ಪೂಂಜಾ, ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ದೇವಣ್ಣ ಗೌಡ ಅವರು ಹಲವು ವರ್ಷಗಳಿಂದ ವಾಸಿಸುತ್ತಿದ್ದು, 4-10-2023ರಂದು ಅವರಿದ್ದ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಹೊಸದಾಗಿ ಮನೆ ಕಟ್ಟಲು ಪಾಯ ಹಾಕುವುದಕ್ಕೆ ವಿರೋಧ ವ್ಯಕ್ತಪಡಿಸಿ ನಿರ್ಮಾಣದ ಪಾಯ ಕಿತ್ತು ಹಾಕಿದ್ದಾರೆ.ವಿಷಯ ತಿಳಿದು ನಾನು ಸ್ಥಳಕ್ಕೆ ಧಾವಿಸಿ ವಿಚಾರಣೆ ನಡೆಸಿದೆ.ತಕ್ಷಣ ಅರಣ್ಯ ಸಚಿವರಿಗೆ ಕರೆ ಮಾಡಿದಾಗ ಅವರು, ಜಂಟಿ ಸರ್ವೆ ಪ್ರಕ್ರಿಯೆ ನಡೆಸುವುದಾಗಿ ಭರವಸೆ ನೀಡಿದ್ದರು.ಇದಾದ ಮೂರು ದಿನದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು 4 ಕೆಎಸ್‌ಆರ್‌ಪಿ ವಾಹನದೊಂದಿಗೆ ಸ್ಥಳಕ್ಕೆ ಬಂದು ಕಟ್ಟಡ ನಿರ್ಮಾಣ ತೆರವು ಮಾಡಲು ಮುಂದಾಗಿದ್ದಾರೆ.ಆಗ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಸಕರು ಅಲ್ಲಿಗೆ ತೆರಳಿ ವಿರೋಧ ವ್ಯಕ್ತಪಡಿಸಿದಾಗ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕರನ್ನು ಅಧಿಕಾರಿಗಳು ಅಕ್ಷರಶಃ ತಳ್ಳಿದ್ದಾರೆ.ಮಾತ್ರವಲ್ಲ, ನನ್ನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಮುಚ್ಚಳಿಕೆ ಬರೆಯಿಸಿಕೊಂಡು ಕಳುಹಿಸಿದ್ದಾರೆ.ಈ ಪ್ರಕರಣದಲ್ಲಿ ಅಽಕಾರಿಗಳು ನನ್ನ ವಿರುದ್ಧ ಅಸಭ್ಯವಾಗಿ ವರ್ತಿಸಿದ್ದಾರೆ.ಅರಣ್ಯ ಹಕ್ಕು ಕಾಯ್ದೆ ನಿಯಮ ಪಾಲಿಸಿಲ್ಲ. ಉಡಾಫೆ ವರ್ತನೆ ಜತೆಗೆ ಶಾಸಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಇದೆಲ್ಲದರ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತಿನಲ್ಲಿಟ್ಟು ಪ್ರಕರಣವನ್ನು ಹಕ್ಕುಬಾಧ್ಯತಾ ಸಮಿತಿಗೆ ಒಪ್ಪಿಸಬೇಕೆಂದು ಶಾಸಕ ಹರೀಶ್ ಪೂಂಜ ಪಟ್ಟು ಹಿಡಿದರು.
ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಪ್ರತಿಕ್ರಿಯೆ ನೀಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅದು ಮೀಸಲು ಅರಣ್ಯವಾಗಿದೆ.ಅಲ್ಲಿ ಅತಿಕ್ರಮಣ ಮಾಡಿ ಕೃಷಿ ಮಾಡಿದ ಹಿನ್ನಲೆಯಲ್ಲಿ ದೂರು ದಾಖಲು ಆಗಿದೆ. ಅತಿಕ್ರಮಣ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಅಡಿಪಾಯ ಹಾಕಲು ಮುಂದಾದಾಗ ಅರಣ್ಯಾಽಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದರು.


ಕರೆ ರೆಕಾರ್ಡ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದು ಸರಿಯಲ್ಲ:
ನಾನು ಅಧಿಕಾರಿಗಳಿಗೆ ಕರೆ ಮಾಡಿದಾಗ ಅತಿಕ್ರಮಣದ ಬಗ್ಗೆ ಮಾಹಿತಿ ನೀಡಿದರು.ಹಿರಿಯ ಅಽಕಾರಿಗಳಿಂದ ವರದಿ ತರಿಸುವ ತನಕ ಯಥಾಸ್ಥಿತಿ ಇರಲಿ ಎಂದಿದ್ದೆ.ನನ್ನ ಕರೆಯನ್ನು ರೆಕಾರ್ಡ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದೀರಿ.ಇದು ಸರಿಯಾದ ಕ್ರಮ ಅಲ್ಲ ಎಂದು ಈಶ್ವರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸುನೀಲ್ ಕುಮಾರ್, ನಿಯಮ ಪ್ರಕಾರ ಹಕ್ಕುಚ್ಯುತಿಗೆ ಸಚಿವರು ಸ್ಪಷ್ಟನೆ ಕೊಡುವ ಅಗತ್ಯ ಇಲ್ಲ ಎಂದರು.ಈ ವೇಳೆ ಈಶ್ವರ್ ಖಂಡ್ರೆ ಸಹಾಯಕ್ಕೆ ಬಂದ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕೃಷ್ಣ ಬೈರೇಗೌಡ, ಸ್ಪೀಕರ್ ತೀರ್ಪು ಕೊಡುವ ಮೊದಲು ಏನು ನಡೆದಿದೆ ಎಂಬ ವಿಚಾರ ಸದನಕ್ಕೆ ತಿಳಿಯಲಿ.ಸಚಿವರು ಸದನಕ್ಕೆ ಮಾಹಿತಿ ಕೊಡುತ್ತಿದ್ದಾರೆ, ಅವಕಾಶ ನೀಡಿ ಎಂದರು.
ಮನೆ ನಿರ್ಮಾಣ ಆಗುತ್ತಿದ್ದ ಜಾಗ ಮೀಸಲು ಅರಣ್ಯ ಪ್ರದೇಶವಾಗಿದೆ.ಈ ಸಂಬಂಧ ಜಂಟಿ ಸಮೀಕ್ಷೆಯಾಗುವವರೆಗೂ ಅರಣ್ಯ ಪ್ರದೇಶದಲ್ಲಿ ಯಾವುದೇ ನಿರ್ಮಾಣಗಳಾಗಬಾರದು.ಪ್ರಕರಣ ನಡೆದ ದಿನ ಶಾಸಕರು ತಮಗೆ ಕರೆ ಮಾಡಿದರು.ನಾನು ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದೆ.ತಾವು ಮಾತನಾಡಿದ್ದನ್ನು ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿರುವುದು ಸರಿಯಲ್ಲ.ಅರಣ್ಯ ಒತ್ತುವರಿಯನ್ನು ಬೆಂಬಲಿಸುವುದು ಸರಿಯಲ್ಲ.ಈಗಾಗಲೇ ವನ್ಯಜೀವಿಗಳು ನಾಡಿಗೆ ಬರುತ್ತಿವೆ. ಅರಣ್ಯ ರಕ್ಷಣೆ ಮಾಡಬೇಕಿದೆ.ಅದರ ಹೊರತಾಗಿ ಶಾಸಕರಿಗೆ ಹಕ್ಕುಚ್ಯುತಿಯಾಗಿದೆ ಎಂದು ಪರಿಭಾವಿಸುವುದಾದರೆ ಹಕ್ಕುಚ್ಯುತಿ ಭಾದ್ಯಸ್ಥ ಸಮಿತಿಗೆ ಒಪ್ಪಿಸಲು ತಮ್ಮ ತಕರಾರಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು.


ಅರಣ್ಯ ರಕ್ಷಣೆ ಮಾಡುವುದರ ಪರವಾಗಿ ನಾವೂ ಇದ್ದೇವೆ. ಮಾನವ ಕಾಡು ಪ್ರಾಣಿ ಸಂಘರ್ಷ ಸಾಮಾನ್ಯವಾಗಿದೆ. ಅರಣ್ಯ ಒತ್ತುವರಿ ಜಮೀನು ರೈತರಿಗೆ ಕೊಡಬೇಕು ಎಂದು ಸಾಕಷ್ಟು ಹೋರಾಟ ನಡೆದಿದೆ.ಸಂಗಮೇಶ್ ವಿರುದ್ಧ ಹಕ್ಕುಚ್ಯುತಿ ಆಗಿದೆ ಎಂದು ಆರೋಪ ಬಂದಿತ್ತು.ನಾವು ಕೂಡಲೇ ಹಕ್ಕು ಬಾಧ್ಯತಾ ಸಮಿತಿಗೆ ನೀಡಿದ್ದೇವೆ.ಅಽಕಾರಿಗಳನ್ನು ಕೇಳುವವರು ಹೇಳುವವರು ಯಾರೂ ಇಲ್ಲ. ಶಾಸಕರ ಮೇಲೆ ಎಫ್.ಐ.ಆರ್ ಹಾಕ್ತಾರೆ ಎಂದರೆ ಏನು ಅರ್ಥ ಬರುತ್ತೆ. ಅಽಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಹಾಗೂ ಕೇಸ್ ವಾಪಸ್ ಪಡೆಯಿರಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.‌

ಶಾಸಕ ಹರೀಶ್ ಪೂಂಜ ವಿರುದ್ಧ ದೂರು ನೀಡಿದ್ದ ಉಪ್ಪಿನಂಗಡಿ ಆರ್‌ಎಫ್ಒ:
ಸರಕಾರಿ ಕರ್ತವ್ಯದಲ್ಲಿದ್ದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಉಪ್ಪಿನಂಗಡಿ ವಲಯಾರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ.ಅವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಅ.7ರಿಂದ 9ರ ವರೆಗೆ ಬೆಳ್ತಂಗಡಿ ತಾಲೂಕು ಕೊಕ್ಕಡ ಹೋಬಳಿಯ ಕಳೆಂಜ ಗ್ರಾಮದ ಸರ್ವೆ ನಂಬ್ರ 309ರಲ್ಲಿರುವ ಅಮ್ಮಿನಡ್ಕದ ನಿಡ್ಲೆ ವಿಸ್ತೃತ ಬ್ಲಾಕ್-2ರ ಮೀಸಲು ಅರಣ್ಯದಲ್ಲಿ 1963ನೇ ಕರ್ನಾಟಕ ಜಾಗವನ್ನು ಹಸನು ಮಾಡಿ ಕಟ್ಟಡ ನಿರ್ಮಾಣಕ್ಕೆ ಅಡಿಪಾಯ ಹಾಕಿರುವ ಕಳೆಂಜ ಗ್ರಾಮ ಅಮ್ಮಿನಡ್ಕ ಎಂಬಲ್ಲಿಯ ನಿವಾಸಿಯಾದ ಲೋಲಾಕ್ಷ ಗೌಡ ಎಂಬವರು ಅತಿಕ್ರಮಣ ಮಾಡಿದ್ದರೆಂದು, ಸದರಿ ಅತಿಕ್ರಮಣವನ್ನು ತೆರವುಗೊಳಿಸಲು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ ಹಾಗೂ ಸಿಬ್ಬಂದಿ ವರ್ಗ ವಿಚಾರಣೆ ನಡೆಸುತ್ತಿರುವಾಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಸ್ಥಳಕ್ಕೆ ಆಗಮಿಸಿದ್ದರು.ಈ ಸಂದರ್ಭದಲ್ಲಿ ಅರಣ್ಯಾಧಿಕಾರಿಗಳನ್ನು ಘಟನೆ ಕುರಿತು ಪ್ರಶ್ನಿಸಿದ್ದ ಶಾಸಕ ಹರೀಶ್ ಪೂಂಜರವರು ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.ಪೊಲೀಸರು ದೂರು ದಾಖಲಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here