ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಖಚಿತ-ಬೆಂಗಳೂರುನಲ್ಲಿ ಶೀಘ್ರ ಕಾರ್ಯಕ್ರಮ

0

ಪುತ್ತೂರು:ಪುತ್ತಿಲ ಪರಿವಾರದ ಮುಖ್ಯಸ್ಥ, ಹಿಂದೂ ಸಂಘಟನೆ ಮುಖಂಡರಾಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಯಾಗುವುದು ಖಚಿತವಾಗಿದ್ದು ಒಂದೆರಡು ದಿನಗಳಲ್ಲಿ ಬೆಂಗಳೂರುನಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ದೊರೆಯದೇ ಇದ್ದ ಹಿನ್ನೆಲೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಹಿಂದುತ್ವ ಸಿದ್ಧಾಂತದಡಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಿತರಾಗಿದ್ದರು.ರಾಜಕೀಯವಾಗಿ ಬಿಜೆಪಿಯಿಂದ ದೂರವಾದ ಅರುಣ್ ಕುಮಾರ್ ಪುತ್ತಿಲ ಅವರ ನೇತೃತ್ವದಲ್ಲಿ ಬಳಿಕ ಪುತ್ತಿಲ ಪರಿವಾರ ಸಂಘಟನೆ ಅಸ್ತಿತ್ವಕ್ಕೆ ಬಂದು ಒಂದು ರೀತಿಯಲ್ಲಿ ಬಿಜೆಪಿಗೆ ಸಡ್ಡು ಹೊಡೆಯುವ ರೀತಿಯ ಕೆಲಸ ಕಾರ್ಯಗಳು ನಡೆಯುತ್ತಿದ್ದವು.ನಂತರದ ಬೆಳವಣಿಗೆಯಲ್ಲಿ,ಪುತ್ತಿಲ ಅವರು ಬಿಜೆಪಿಗೆ ಸೇರ್ಪಡೆಯಾಗುವುದು ಮತ್ತು ಪುತ್ತಿಲ ಪರಿವಾರವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ನಿಟ್ಟಿನಲ್ಲಿ ಬಿಜೆಪಿ,ಸಂಘ ಪರಿವಾರ ಮತ್ತು ಪುತ್ತಿಲ ಪರಿವಾರದ ಪ್ರಮುಖರ ಮಧ್ಯೆ ಹಲವು ಸುತ್ತಿನ ಮಾತುಕತೆ ನಡೆದಿತ್ತು.ಆದರೂ ಯಾವುದೇ ನಿರ್ಧಾರ ಪ್ರಕಟವಾಗಿರಲಿಲ್ಲ.ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಬಿಜೆಪಿ ಅಧ್ಯಕ್ಷತೆ ನೀಡುವುದಾದರೆ ಮಾತ್ರ ಅವರು ಬಿಜೆಪಿಗೆ ಸೇರ್ಪಡೆಯಾಗಿ ಪುತ್ತಿಲ ಪರಿವಾರವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಕುರಿತು ಪುತ್ತಿಲ ಪರಿವಾರದ ಕಾರ್ಯಕರ್ತರು ತೀರ್ಮಾನ ಕೈಗೊಂಡಿದ್ದರು.ಪಕ್ಷಕ್ಕೆ ಬೇಷರತ್ ಆಗಿ ಬರುವುದಾದರೆ ಸ್ವಾಗತ.ಪಕ್ಷದ ಹುದ್ದೆ ನೀಡುವ ವಿಚಾರ ಏನಿದ್ದರೂ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಪಕ್ಷದ ನಾಯಕರು ತೀರ್ಮಾನಿಸುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರ ಸಹಿತ ಪ್ರಮುಖರು ಸ್ಪಷ್ಟಪಡಿಸಿದ್ದರು.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಅರುಣ್ ಕುಮಾರ್ ಪುತ್ತಿಲ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಮತ್ತು ಮುಂದಿನ ಎಲ್ಲಾ ಚುನಾವಣೆಗಳಲ್ಲಿಯೂ ದ.ಕ.ಜಿಲ್ಲೆಯಲ್ಲಿ ಪುತ್ತಿಲ ಪರಿವಾರದ ಸ್ಪರ್ಧೆ ಇರಲಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಬಹಿರಂಗವಾಗಿ ಘೋಷಿಸಿದ್ದರು.ದ.ಕ.ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಕಟೀಲ್ ಅವರೇ ಮತ್ತೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಅರುಣ್ ಕುಮಾರ್ ಪುತ್ತಿಲ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ನಿಶ್ಚಿತ ಎಂಬ ಮಾತುಗಳು ಕೇಳಿ ಬರುತ್ತಿದ್ದವು.ಇದೀಗ ಬಿಜೆಪಿ ಅಭ್ಯರ್ಥಿಯಾಗಿ ನಿವೃತ್ತ ಸೇನಾಧಿಕಾರಿ ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿರುವುದರಿಂದ ಪುತ್ತಿಲ ಪರಿವಾರದ ನಡೆ ಏನು ಎನ್ನುವ ಕುತೂಹಲ ಸೃಷ್ಟಿಯಾಗಿತ್ತು.ಈ ಕುರಿತು ಪ್ರತಿಕ್ರಿಯಿಸಿದ್ದ ಅರುಣ್ ಕುಮಾರ್ ಪುತ್ತಿಲ, ನಮ್ಮ ಪರಿವಾರದ ಕಾರ್ಯಕರ್ತರ ತೀರ್ಮಾನವೇ ಅಂತಿಮ ಎಂದು ಹೇಳಿದ್ದರು.ಇದೀಗ, ಪುತ್ತಿಲ ಅವರ ಬಿಜೆಪಿ ಸೇರ್ಪಡೆ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು ಬಿಜೆಪಿ ಮತ್ತು ಪುತ್ತಿಲ ಪರಿವಾರದ ಪ್ರಮುಖರಿಂದ ಒಮ್ಮತದ ತೀರ್ಮಾನವಾಗಿದ್ದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ, ಬೆಂಗಳೂರಿನಲ್ಲಿ ಅರುಣ್ ಕುಮಾರ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.ಒಂದೆರಡು ದಿನಗಳಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯುವುದು ಖಚಿತವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಪುತ್ತಿಲ ಪರಿವಾರ ವಿಲೀನವಿಲ್ಲ?
ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ಸೇರ್ಪಡೆಯಾದ ಬಳಿಕವೂ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾಗದೆ ರಾಜಕೀಯ ಹೊರತು ಪಡಿಸಿ ಸಾಮಾಜಿಕ,ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಂಘಟನೆಯನ್ನು ರಾಜ್ಯವ್ಯಾಪಿಯಾಗಿ ವಿಸ್ತರಿಸುವ ಕುರಿತು ಪರಿವಾರದ ಪ್ರಮುಖರು ತೀರ್ಮಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here